ಸಮಾಜಕ್ಕೆ ಮಾರಕವಾದ ವಿಷಯಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ವಿಠ್ಠಲ್ ಎಸ್ ಸಾಲಿಯಾನ್ ತಿಳಿಸಿದ್ದಾರೆ.
ಕನ್ನಡಪ್ರಭವಾರ್ತೆ ಕುಶಾಲನಗರ
ಸಮಾಜಕ್ಕೆ ಮಾರಕವಾದ ವಿಷಯಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ವಿಠ್ಠಲ್ ಎಸ್ ಸಾಲಿಯಾನ್ ತಿಳಿಸಿದ್ದಾರೆ.ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಸೋಮವಾರಪೇಟೆ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು ಪ್ರತಿವರ್ಷ ಮೇ 31ರಂದು ಆಚರಿಸಲಾಗುತ್ತದೆ. ಈ ಸಂದರ್ಭ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವಿಷಯ ಬಗ್ಗೆ ಅರಿವು ಜಾಗೃತಿ ಮೂಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ತಂಬಾಕು ಬಳಕೆಯಿಂದ ಉಂಟಾಗುವ ಆರೋಗ್ಯ ಹಾನಿ, ಆರ್ಥಿಕ ನಷ್ಟ ಮತ್ತು ಸಾಮಾಜಿಕ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತುಗಳ ಮುಕ್ತ ಸಮಾಜ ನಿರ್ಮಾಣ ಜನಜಾಗೃತಿ ವೇದಿಕೆ ಗುರಿಯಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾ ಉಪಾಧ್ಯಕ್ಷರಾದ ಎಂ ಎನ್ ಚಂದ್ರಮೋಹನ್ ಮಾತನಾಡಿ, ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಅನೇಕ ಗಂಭೀರ ಕಾಯಿಲೆಗಳು ಉಂಟಾಗುತ್ತವೆ. ಸಿಗರೇಟ್, ಬೀಡಿ, ಗುಟ್ಕಾ, ಪಾನ್ ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳು ವ್ಯಕ್ತಿಯ ಆರೋಗ್ಯಕ್ಕೆ ಮಾತ್ರವಲ್ಲ, ಕುಟುಂಬ ಮತ್ತು ಸಮಾಜದಲ್ಲಿ ಕಂಟಕವಾಗಿ ಪರಿಣಮಿಸುತ್ತವೆ, ನಮ್ಮ ದೇಹದ ಆರೋಗ್ಯದ ಜೊತೆಗೆ ಪರಿಸರ ಆರೋಗ್ಯ ಕೂಡ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು. ವೇದಿಕೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ರಾಜಶೇಖರ್, ಎಚ್ ಎಂ ಚಂದ್ರು ಅವರು ಅಥಿತಿಗಳಾಗಿ ಪಾಲ್ಗೊಂಡು ದಿನದ ಮಹತ್ವದ ಬಗ್ಗೆ ಮಾತನಾಡಿದರು.ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಸ್ವಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷರು ಎಂ ಬಿ ಜರೀನಾ, ಪ್ರಾಂಶುಪಾಲರು ನಾಗೇಂದ್ರಸ್ವಾಮಿ, ಸೇವಾಪ್ರತಿನಿಧಿ ಶಾಲಿನಿ, ಉಪನ್ಯಾಸಕರಾದ ಮಂಜುನಾಥ್, ಸೌಮ್ಯ, ಕುಶಾಲನಗರ ವಲಯ ಮೇಲ್ವಿಚಾರಕರು ಸುಧೀರ್ ನೆಕ್ರಾಜೆ ಇದ್ದರು.