ಸಾರಾಂಶ
ಪಾರದರ್ಶಕ ಹಾಗೂ ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ, ಜಿಲ್ಲೆಯನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಮುಂಚೂಣಿಗೆ ತರಲು ಪ್ರಯತ್ನಿಸುವಂತೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ಪಾರದರ್ಶಕ ಹಾಗೂ ಪ್ರಾಮಾಣಿಕ ಸೇವೆ ಸಲ್ಲಿಸುವ ಮೂಲಕ, ಜಿಲ್ಲೆಯನ್ನು ಪ್ರತಿಯೊಂದು ಕ್ಷೇತ್ರದಲ್ಲಿ ಮುಂಚೂಣಿಗೆ ತರಲು ಪ್ರಯತ್ನಿಸುವಂತೆ ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ಕಂದಾಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ನೀಡಿದರು.ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಂದಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಳ್ಳೆಯ ಕೆಲಸಕ್ಕೆ ಪ್ರೋತ್ಸಾಹವಿದೆ. ಕಂದಾಯ ಇಲಾಖೆಯ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿಗಳು ಪ್ರಾಮಾಣಿಕ ಹಾಗೂ ಪಾರದರ್ಶಕ ಸೇವೆ ಕಲ್ಪಿಸಿ ಜಿಲ್ಲೆಯನ್ನು ಮುಂಚೂಣಿಗೆ ತರಲು ಪ್ರಯತ್ನಿಸುವಂತೆ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ, ಸಹಾಯಕ ಆಯುಕ್ತರ ಕಚೇರಿ, ತಹಸೀಲ್ದಾರರ ಕಚೇರಿಗಳ ವ್ಯಾಪ್ತಿಯಲ್ಲಿ ವಿವಿಧ ಫೈಲ್ ಹಾಗೂ ರಿಜಿಸ್ಟರ್ ಗಳ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವ ಕಾರ್ಯದಲ್ಲಿ ಯಾದಗಿರಿ ತಾಲೂಕು ಶೇ.100 ರಷ್ಟು ಪ್ರಗತಿ ಸಾಧಿಸಿದೆ. ಶಹಾಪುರ ಟಾಪ್ 10 ರಲ್ಲಿ ಸ್ಥಾನಗಳಿಸಿದೆ. ಕಳೆದ ಎರಡು ವರ್ಷಗಳಿಂದ ನಿರಂತರ ಪ್ರಯತ್ನದಿಂದ ಸಾಧನೆ ಮಾಡಲಾಗುತ್ತಿದೆ ಎಂದು ಹೇಳಿದರು.ಕಂದಾಯ ಇಲಾಖೆಯಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರ ಪಾತ್ರ ಅಪಾರವಾಗಿದೆ. ಪ್ರಾಥಮಿಕ ವರದಿ ಸಂಗ್ರಹಣೆ, ಕಂದಾಯ ಆಸ್ತಿ ಒತ್ತುವರಿ ಮಾಹಿತಿ ಸಂಗ್ರಹಣೆ ಸೇರಿದಂತೆ ಇನ್ನಿತರ ಕಾರ್ಯ ಮುಖ್ಯವಾಗಿದೆ. ಕಾರಣ ಇವರಿಗೆ ಇತ್ತೀಚಿನ ಬದಲಾವಣೆಗಳ ಕುರಿತು ವ್ಯಕ್ತಿತ್ವ ವಿಕಸನ, ಕ್ಷಮತೆ ಹೆಚ್ಚಳ ಕಾರ್ಯಾಗಾರಗಳನ್ನು ಆಯಾ ತಹಸೀಲ್ದಾರರು ಹಮ್ಮಿಕೊಂಡು, ತಂಡವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಸುರೇಶ ಅಂಕಲಗಿ, ಶಿರಸ್ತೆದಾರ ಶಬ್ಬೀರ್ ಪಟೇಲ್ ಸೇರಿದಂತೆ ಗ್ರಾಮ ಸಹಾಯಕ ಸಿಬ್ಬಂದಿಗಳ ಜೊತೆ ಇದ್ದರು.