ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಕಲೆ ಸಾಹಿತ್ಯದಿಂದ ಜೀವನದಲ್ಲಿ ಲವಲವಿಕೆ ಇರುತ್ತದೆ. ಯಕ್ಷಗಾನ ಪರಿಪೂರ್ಣ ಕಲಾಪ್ರಕಾರ. ಇದು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು.ಯಕ್ಷಶಿಕ್ಷಣ ಟ್ರಸ್ಟ್ ವತಿಯಿಂದ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ 15 ದಿನಗಳ ಕಿಶೋರ ಯಕ್ಷಗಾನ ಸಂಭ್ರಮ ಸಮಾರೋಪದಲ್ಲಿ ಸಾನಿಧ್ಯ ವಹಿಸಿದ್ದರು.
ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮಕ್ಕಳಿಗೆ ಪುರಾಣ ಕಥೆಗಳನ್ನು ತಿಳಿಯುವುದಕ್ಕೆ ಇದು ಅತ್ಯುತ್ತಮ ಮಾರ್ಗ ಎಂದರು.ಯಕ್ಷಶಿಕ್ಷಣ ಟ್ರಸ್ಟ್ನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ತಜ್ಞ ಡಾ. ಅಶೋಕ್ ಕಾಮತ್, ಯಕ್ಷಗಾನದ ಪೋಷಕ ಎಂ. ಸಿ. ಕಲ್ಕೂರ, ತೆಂಕುತಿಟ್ಟು ಯಕ್ಷಗಾನವನ್ನು ಮಕ್ಕಳಲ್ಲಿ ಬೆಳೆಸುತ್ತಿರುವ ಗೋಪಿಕಾ ಮಯ್ಯ ಔಚಿತ್ಯಪೂರ್ಣ ಮಾತುಗಳನ್ನಾಡಿದರು. ಯಕ್ಷಶಿಕ್ಷಣದ ಟ್ರಸ್ಟಿಗಳಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ ಇದ್ದರು.
ಪಾಲ್ಗೊಂಡ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳ ಪ್ರಮಾಣ ಪತ್ರ ಹಾಗೂ ಗುಂಪು ಫೋಟೊಗಳನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ನೀಡಲಾಯಿತು. ಯಕ್ಷಗಾನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಜಾಹ್ನವಿ ಶ್ರೀಧರ್ ಪೂಜಾರಿ, ಯಶಸ್ವಿ ನಾಯಕ್ ಹಾಗೂ ಮೇಧಾ ಭಟ್ ತಮ್ಮ ಅನುಭವಗಳನ್ನು ಹಂಚಿಕೊಂಡರು.ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಯಕ್ಷಶಿಕ್ಷಣ ಟ್ರಸ್ಟ್ನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕೋಶಾಧಿಕಾರಿ ಎಚ್. ಎನ್. ಶೃಂಗೇಶ್ವರ ಸಹಕರಿಸಿದರು.
ಬಳಿಕ ನಿಟ್ಟೂರು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ನಿಶ್ವಲ್ ನಿರ್ದೇಶನದಲ್ಲಿ ಜಟಾಯು ಮೋಕ್ಷ ಮತ್ತು ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಮಂಜುನಾಥ್ ಕುಲಾಲ್ ನಿರ್ದೇಶನದಲ್ಲಿ ಬಬ್ರುವಾಹನ ಕಾಳಗ ಯಕ್ಷಗಾನ ಪ್ರದರ್ಶನಗೊಂಡಿತು........................
ಬಲ್ಲಿರೇನಯ್ಯ...ನ.30 ರಿಂದ ಡಿ.14ರ ವರೆಗೆ ನಡೆದ ಈ ಅಭಿಯಾನದಲ್ಲಿ 27 ಪ್ರೌಢಶಾಲೆಗಳ 293 ಹುಡುಗರು, 507 ಹುಡುಗಿಯರು ಒಟ್ಟು 800 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದರಲ್ಲಿ 228 ಹೊರ ಜಿಲ್ಲೆ, 7 ಹೊರ ರಾಜ್ಯ, 2 ಕ್ರಿಶ್ಚಿಯನ್ ಹಾಗೂ 5 ಮುಸ್ಲಿಂ ವಿದ್ಯಾರ್ಥಿಗಳಿದ್ದರು.