ಹಾಲು ಉತ್ಪಾದಕ ಕುಟುಂಬಗಳ ಸದಸ್ಯರು ಅನಾರೋಗ್ಯ ಪೀಡಿತರಾದರೆ ೫ ಲಕ್ಷ ರುಪಾಯಿ ವೆಚ್ಚದಲ್ಲಿ ಉಚಿತವಾಗಿ ಚಿಕಿತ್ಸೆ ಕೊಡಿಸಲು ಯಶಸ್ವಿನಿ ಯೋಜನೆ ಸಹಕಾರಿಯಾಗಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಮನುಷ್ಯನಿಗೆ ಆರೋಗ್ಯ ಸಂಪತ್ತು ದೊಡ್ಡದು, ಹಾಲು ಉತ್ಪಾದಕ ಸಂಘಗಳ ಸದಸ್ಯರ ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಹಾಲು ಉತ್ಪಾದಕ ಕುಟುಂಬಗಳ ಸದಸ್ಯರು ಅನಾರೋಗ್ಯ ಪೀಡಿತರಾದರೆ ೫ ಲಕ್ಷ ರುಪಾಯಿ ವೆಚ್ಚದಲ್ಲಿ ಉಚಿತವಾಗಿ ಚಿಕಿತ್ಸೆ ಕೊಡಿಸಲು ಯಶಸ್ವಿನಿ ಯೋಜನೆ ಸಹಕಾರಿಯಾಗಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ಹೇಳಿದರು.

ಅವರು ಶಿರಾ ನಗರದ ನಂದಿನಿ ಕ್ಷೀರ ಭವನದಲ್ಲಿ ಆಯೋಜಿಸಿದ್ದ ಯಶಸ್ವಿನಿ ನೋಂದಣಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ೨೦೨೫-೨೬ ನೇ ಸಾಲಿನ ನೋಂದಣಿ ಪ್ರಾರಂಭವಾಗಿದ್ದು ಶಿರಾ ತಾಲೂಕು ಹಾಲು ಉತ್ಪಾದಕರ ಸಂಘಗಳ ಸದಸ್ಯರು ಕಡ್ಡಾಯವಾಗಿ ಯಶಸ್ವಿನಿ ಕಾರ್ಡ್ ಪಡೆಯಬೇಕು. ನೋಂದಣಿಗೆ ಮಾರ್ಚಿ ೩೧ ಕೊನೆ ದಿನವಾಗಿದೆ.

ಹೈನುಗಾರಿಕೆಯಲ್ಲಿ ತೊಡಗಿರುವ ರೈತರು ತಮ್ಮ ಹಸುಗಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಹಗಲು ರಾತ್ರಿ ಶ್ರಮಿಸುತ್ತಾರೆ, ರೈತರೂ ಕೂಡ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಯಶಸ್ವಿನಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಯಶಸ್ವಿನಿ ಯೋಜನೆ ಜಿಲ್ಲಾ ಸಂಯೋಜಕ ರಾಜಕುಮಾರ, ಸಹಕಾರಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ತುಮಕೂರು ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಬಿ.ಗಿರೀಶ್ ಸೇರಿದಂತೆ ಹಲವಾರು ಹಾಲು ಉತ್ಪಾದಕ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗಳು ಹಾಜರಿದ್ದರು.