ಉಡುಪಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆಯುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣಗೊಳಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿಮತ ಬಡವ ಶ್ರೀಮಂತ ತಾರತಮ್ಯ ನಿವಾರಣೆಗೆ ಶಾಲಾ ಸಮವಸ್ತ್ರದ ಆಶಯಕ್ಕೆ ವಿರುದ್ಧವಾಗಿ ಇದೀಗ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದೆ. 2021 ರಲ್ಲಿ ಉಡುಪಿಯ ಸರ್ಕಾರಿ ಬಾಲಕಿಯರ ಪಪೂ ಕಾಲೇಜಿನ 6 ವಿದ್ಯಾರ್ಥಿನಿಯರು ದುರುದ್ದೇಶಪೂರ್ವಕವಾಗಿ ಹಿಜಾಬ್ ವಿವಾದ ಸೃಷ್ಟಿಸಿ ರಾಜ್ಯ ದೇಶದಾದ್ಯಂತ ಗೊಂದಲ ನಿರ್ಮಾಣವಾಗಿ ಶಿಕ್ಷಣ ವ್ಯವಸ್ಥೆಗೆ ಹಾಗೂ ಕಾನೂನು ವ್ಯವಸ್ಥೆಗೆ ಧಕ್ಕೆ ಉಂಟಾಗಿತ್ತು, ಈ ಸಂದರ್ಭದಲ್ಲಿ ಕೆಲವು ಮತೀಯವಾದಿ ನಿಷೇಧಿತ ಸಂಘಟನೆಗಳು ಶಾಂತಿ ಸುವ್ಯವಸ್ಥೆಗೂ ಧಕ್ಕೆ ತರುವ ಪ್ರಯತ್ನ ಮಾಡಿದ್ದವು. ನಂತರ ಹಿಜಾಬ್ ನಿಷೇಧಿಸಲಾಗಿತ್ತು ಇದೀಗ ಕೇವಲ ಅಲ್ಪಸಂಖ್ಯಾಂತರ ಓಲೈಕೆಗಾಗಿ ಹಿಜಾಬ್ ನಿಷೇಧ ಆದೇಶ ಹಿಂಪಡೆಯಲು ರಾಜ್ಯ ಸರಕಾರ ಮುಂದಾಗಿದೆ. ಹಿಜಾಬ್ ಧರಿಸಲು ಅವಕಾಶ ನೀಡುವ ಸರ್ಕಾರ ಕೇಸರಿ ಶಾಲು ಧರಿಸಲು ಅವಕಾಶ ನೀಡದೇ ಮತ್ತೊಮ್ಮೆ ತನ್ನ ಹಿಂದೂ ವಿರೋಧಿ ನಿಲುವನ್ನು ಮುಂದುವರೆಸಿದೆ. ಈ ಹಿಂದೆ ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೈಕೋರ್ಟ್‍ನ ತ್ರಿಸದಸ್ಯ ಪೀಠ ನೀಡಿದ ತೀರ್ಪು ನೀಡಿದ್ದರೂ, ಹಿಜಾಬ್ ಧರಿಸಲು ಅವಕಾಶ ನೀಡಲು ಅತಿ ಮುತುವರ್ಜಿ ವಹಿಸುತ್ತಿರುವ ರಾಜ್ಯ ಸರಕಾರ ತನ್ನ ಈ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು. ಕೇವಲ ರಾಜಕೀಯ ಉದ್ದೇಶಕ್ಕಾಗಿ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಹದಗೆಡಿಸಿ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ಯಶ್‌ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.