ಕಾರ್ಕಳ: ಕ್ಷೇತ್ರದಲ್ಲಿ ಕೃಷಿಯನ್ನು ಉತ್ತೇಜಿಸುವ ದೂರದೃಷ್ಟಿಯೊಂದಿಗೆ ಅಂದಿನ ಇಂಧನ ಸಚಿವರಾದ ವಿ ಸುನಿಲ್ ಕುಮಾರ್ ಅವರ ಪ್ರಯತ್ನದಿಂದ ನಿರ್ಮಾಣಗೊಂಡ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಸ್ಥಗಿತಗೊಂಡಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ ಮತ್ತು ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಕಳ ಬಿಜೆಪಿ ಆರೋಪಿಸಿದೆ.ಕಳೆದ ಮೂರು ವರ್ಷಗಳಿಂದ ನೂರಾರು ರೈತರ ಕೃಷಿಭೂಮಿಗೆ ನೀರಾವರಿ ಸೌಲಭ್ಯ ಒದಗಿಸುತ್ತಿದ್ದ ಈ ಮಹತ್ವಾಕಾಂಕ್ಷಿ ಯೋಜನೆ, ಸುಮಾರು 2 ಕೋಟಿ ರು.ಗೂ ಅಧಿಕ ವಿದ್ಯುತ್ ಬಿಲ್ ಬಾಕಿ ಉಳಿದಿರುವ ಕಾರಣದಿಂದ ಸ್ಥಗಿತಗೊಂಡಿದೆ ಎಂದು ತಿಳಿದುಬಂದಿದೆ. ವಿದ್ಯುತ್ ಬಿಲ್ ಪಾವತಿಸದೇ ಯೋಜನೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ದುಃಖಕರ ಹಾಗೂ ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಮಾ. 4ರಂದು ಸಂಜೆ 4 ಗಂಟೆಗೆ ಎಣ್ಣೆಹೊಳೆ ಅಣೆಕಟ್ಟಿನ ಬಳಿ ಕಾರ್ಕಳ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಎಲ್ಲಾ ವರ್ಗದ ರೈತರು, ಕೃಷಿಕರು ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ರೈತ ಸಮುದಾಯಕ್ಕೆ ಬೆಂಬಲ ನೀಡಬೇಕು ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮನವಿ ಮಾಡಿದ್ದಾರೆ.