ಯೋಗ, ಧ್ಯಾನದಿಂದ ಮಾನಸಿಕ ಆರೋಗ್ಯ ವೃದ್ಧಿ: ನ್ಯಾಯಾಧೀಶ ಎನ್. ಸುಬ್ರಮಣ್ಯ

| Published : Oct 30 2025, 02:00 AM IST

ಯೋಗ, ಧ್ಯಾನದಿಂದ ಮಾನಸಿಕ ಆರೋಗ್ಯ ವೃದ್ಧಿ: ನ್ಯಾಯಾಧೀಶ ಎನ್. ಸುಬ್ರಮಣ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಯೋಗ ಮತ್ತು ಧ್ಯಾನದಿಂದ ಎಲ್ಲರಿಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲಿದೆ

ಹೊಸಪೇಟೆ: ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯ ಮುಖ್ಯವಾದುದು, ಯೋಗ ಮತ್ತು ಧ್ಯಾನದಿಂದ ಎಲ್ಲರಿಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲಿದೆ ಎಂದು ಸ್ಥಳೀಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್. ಸುಬ್ರಮಣ್ಯ ಹೇಳಿದರು.ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕು ಕಾನೂನು ಸೇವಾ ಸಮಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಕಚೇರಿ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಟಿಎಂಎಇಎಸ್ ನರ್ಸಿಂಗ್ ಆಫ್ ಸ್ಕೂಲ್ ಸಹಭಾಗಿತ್ವದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಮತ್ತು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿತ್ಯ ಯೋಗಾಭ್ಯಾಸ ಮತ್ತು ಧ್ಯಾನ, ಒತ್ತಡ ರಹಿತ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಮಾನಸಿಕ ಆರೋಗ್ಯ ಉಲ್ಲಾಸಭರಿತವಾಗಿರಲಿದೆ. ಸದಾ ಸಕಾರಾತ್ಮಕ ಚಿಂತನೆ, ದುಶ್ಚಟಗಳಿಂದ ಮುಕ್ತವಾಗಿ ಕುಟುಂಬ ಮತ್ತು ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದ ಮಾನಸಿಕವಾಗಿ ಸಂತಸ ವೃದ್ಧಿಯಾಗಲಿದೆ. ಮನೆಯಲ್ಲಿನ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ ನಿಮ್ಮದಾಗಲಿದೆ ಎಂದರು.

ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ ಮಾತನಾಡಿ, ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸಾಮಾಜಿಕವಾಗಿ ಹೆಣ್ಣುಮಕ್ಕಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ದೌರ್ಜನ್ಯದಂತಹ ಪ್ರಕರಣಗಳನ್ನು ನಿಯಂತ್ರಿಸಲು ಇಲಾಖೆಗಳೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಶಿಕ್ಷಣ ಮಹತ್ವ ತಿಳಿಸಬೇಕಿದೆ. ಬಾಲ್ಯವಿವಾಹ ಸೇರಿ ಮಹಿಳೆಯರ ಮೇಲಿನ ದೌರ್ಜನ್ಯ ಕಂಡರೆ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಲ್‌.ಆರ್‌. ಶಂಕರ್ ನಾಯ್ಕ ಮಾತನಾಡಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ತಿಂಗಳ ಮಂಗಳವಾರದಂದು ಮನೋಚೈತನ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಆಪ್ತ ಸಮಾಲೋಚನೆ ಪಡೆಯಲು ಉಚಿತ ಸಹಾಯವಾಣಿ 14416 ಸಂಖ್ಯೆಗೆ ಕರೆ ಮಾಡಬಹುದು ಎಂದರು.

ನಗರ ಪೊಲೀಸ್ ಠಾಣೆಯ ಸಬ್‌ಇನ್ಸ್ಪೆಕ್ಟರ್ ರಾಜಶೇಖರ ಮಾತನಾಡಿದರು.

ಇದೇ ವೇಳೆ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಕೆ.ರಾಧಿಕಾ ಪ್ರಾಸ್ತವಿಕವಾಗಿ ಮಾತನಾಡಿದರು, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸ ಮೂರ್ತಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಬಿ. ಜಂಬಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಸಿಂಧು ಅಂಗಡಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಸತೀಶ್ ಚಂದ್ರ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ವಿನಯ, ಜಿಲ್ಲಾ ಕ್ಷಯ ನಿರ್ಮೂಲನಾಧಿಕಾರಿ ಡಾ.ಭಾಸ್ಕರ್, ಟಿಎಂಎಇಎಸ್ ನರ್ಸಿಂಗ್ ಆಫ್ ಸ್ಕೂಲ್ ಪ್ರಾಂಶುಪಾಲ ಡಾ.ಎನ್.ಸೋಮಶೇಖರ್, ಆರೋಗ್ಯ ಇಲಾಖೆ ಸಿಬ್ಬಂದಿ ಮಾರೇಶ್, ಸಹದೇವ ಮತ್ತಿತರರಿದ್ದರು.