ಯುವಪೀಳಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ: ಸತೀಶ್

| Published : Oct 17 2025, 01:00 AM IST

ಯುವಪೀಳಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಿ: ಸತೀಶ್
Share this Article
  • FB
  • TW
  • Linkdin
  • Email

ಸಾರಾಂಶ

ರಾಮನಗರ: ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯ ಯುವಜನಾಂಗ ಹಿಂದೆದಿಗಿಂತಲೂ ಇದೀಗ ಹೆಚ್ಚು ಅನಿವಾರ್ಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸತೀಶ್ ಅಭಿಪ್ರಾಯಪಟ್ಟರು.

ರಾಮನಗರ: ಶಿಕ್ಷಣದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯ ಯುವಜನಾಂಗ ಹಿಂದೆದಿಗಿಂತಲೂ ಇದೀಗ ಹೆಚ್ಚು ಅನಿವಾರ್ಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸತೀಶ್ ಅಭಿಪ್ರಾಯಪಟ್ಟರು.

ನಗರದ ಡಾ.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಯುವಜನಾಂಗ ಭಾಗವಹಿಸುವಿಕೆ ಕಡಿಮೆಯಾಗುತ್ತಿದೆ. ಶಿಕ್ಷಣದೊಂದಿಗೆ ಯುವಕರು, ಯುವತಿಯರು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಮಾನಸಿಕವಾಗಿ ಹೆಚ್ಚು ಬಲಾಡ್ಯರಾಗುತ್ತಾರೆ. ಇತರೆ ಚಟುವಟಿಕೆಗಳ ಕಡೆಗಿನ ಗಮನ ಕಡಿಮೆಯಾಗಿ, ಜೀವನದಲ್ಲಿ ಏಳಿಗೆಗೆ ಕಾರಣವಾಗಲಿದೆ ಎಂದು ಹೇಳಿದರು.

ಜೀವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಗಳು, ಕ್ರೀಡೆಗಳು ಅವಶ್ಯಕ. ಯುವಕರು ಸನ್ಮಾರ್ಗದಲ್ಲಿ ನಡೆದು ಇತರರಿಗೆ ಸಹಾಯ ಮಾಡುವುದರ ಜೊತೆಗೆ ಸಮಾಜಕ್ಕೆ ಒಳ್ಳೆಯ ಕೊಡುಗೆಯನ್ನು ನೀಡಬೇಕು, ಸಮಾಜ ನಮಗೇ ಏನು ನೀಡಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾವು ಏನು ಮಾಡಿದ್ದೇವೆ ಎನ್ನುವುದು ಬಹಳ ಮುಖ್ಯ, ಯುವಕ, ಯುವತಿಯರು ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆ ಹೆಚ್ಚು ಗಮನ ಕೊಟ್ಟರೆ ಭವಿಷ್ಯದಲ್ಲಿ ಉತ್ತಮ ಜೀವನ ದೊರೆಯುತ್ತದೆ ಎಂದು ಹೇಳಿದರು.

ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಅನಿತಾ ಮಾತನಾಡಿ, ಸಂಸ್ಕೃತಿ ಉಳಿಸಿ, ಬೆಳೆಸುವಲ್ಲಿ ಯುವ ಜನತೆಯ ಪಾತ್ರ ಬಹುಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಯುವ ಜನರು ನಾಟಕ, ನೃತ್ಯ, ಜನಪದ ಸಂಗೀತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ತಿಳಿಸಿದರು.

ಯುವಜನೋತ್ಸವ ಕಾರ್ಯಕ್ರಮದಲ್ಲಿ ಸುಮಾರು 350ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಸ್ಪರ್ಧೆಯಲ್ಲಿ ಜನಪದ ಗೀತೆ, ಜನಪದ ನೃತ್ಯ, ಸ್ಟೋರಿ ರೈಟಿಂಗ್, ಕವಿತೆ ಬರೆಯುವುದು, ಘೋಷಣೆ, ವಿಜ್ಞಾನ ಮೇಳ ಹೀಗೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ವೇದಿಕೆ ಒದಗಿಸಲಾಗಿದೆ ಎಂದರು.

ಅಂಬೇಡ್ಕರ್ ಭವನದಲ್ಲಿ ಜನಪದ ನೃತ್ಯ, ಜನಪದ ಗೀತೆಗೆ ವೇದಿಕೆ ಕಲ್ಪಿಸಲಾಗಿದೆ. ಭಾರತೀಯ ವಿದ್ಯಾಪೀಠದಲ್ಲಿ ಕವಿತೆ ವಾಚನ, ಕವನ ಬರೆಯುವ, ಕಥೆ ಬರೆಯುವ ಸ್ಪರ್ಧೆ, ಚಿತ್ರಕಲೆ, ವಿಜ್ಞಾನ ಮೇಳ ಹತ್ತು ಹಲವು ರೀತಿಯ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳು ರಾಜ್ಯಮಟ್ಟದ ಯುವಜನೋತ್ಸವಕ್ಕೆ ಆಯ್ಕೆಗೊಳ್ಳುತ್ತಾರೆ. ಯಾದಗಿರಿ ಜಿಲ್ಲೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆ ನಡೆಯಲಿದ್ದು, ಅಲ್ಲಿ ವಿಜೇತರಾದವರು ರಾಷ್ಟ್ರೀಯ ಮಟ್ಟಕ್ಕೆ ಅರ್ಹರಾಗುತ್ತಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ನಾಲ್ಕು ತಾಲೂಕುಗಳ ಸ್ಪರ್ಧಿಗಳು ಪಾಲ್ಗೊಂಡಿದ್ದಾರೆ. ಎಲ್ಲ ಸ್ಪರ್ಧಿಗಳಿಗೆ ಹಾಗೂ ತೀರ್ಪುಗಾರರಿಗೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ವಿಷಯ ಅಧಿಕಾರಿ ಸುಂದರ್‌ಗೌಡ, ಜಾನಪದ ಕಲೆಗಳ ಪರಿಣಿತರಾದ ಕುರುವ ಬಸವರಾಜ್, ರಾಜ್ಯ ಯುವ ಪ್ರಶಸ್ತಿ ಪರಸ್ಕೃತರಾದ ಹನುಮಂತ ನಾಯ್ಕ, ನಂಜುಂಡಿ, ಕುಂಬಾಪುರ ಬಾಬು, ಅಂಕನಳ್ಳಿ ಪಾರ್ಥ, ಹಿರಿಯ ಜಾನಪದ ಕಲಾವಿದರಾದ ಗೋವಿಂಯ್ಯ, ಪುಟ್ಟರಾಜು, ಬ್ಯಾಡರಹಳ್ಳಿ ಶಿವಕುಮಾರ್, ನಮನ ಚಂದ್ರು ಉಪಸ್ಥಿತರಿದ್ದರು.

15ಕೆಆರ್ ಎಂಎನ್ 3.ಜೆಪಿಜಿ

ರಾಮನಗರದ ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಕೆ.ಸತೀಶ್ ಚಾಲನೆ ನೀಡಿದರು.