ಸಾರಾಂಶ
ಚಿಕ್ಕಮಗಳೂರುಯುವ ಜನತೆ ತಮ್ಮ ಹೆತ್ತವರು, ಶಿಕ್ಷಕರು ಮತ್ತು ಉಪನ್ಯಾಸಕರನ್ನು ಬದುಕಿನ ಮಾದರಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ ಸಲಹೆ ಮಾಡಿದರು.
ಮಲೆನಾಡು ವಿದ್ಯಾಸಂಸ್ಥೆ ಕಾಲೇಜಿನ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನ
ಕನ್ನಡಪ್ರಭವಾರ್ತೆ ಚಿಕ್ಕಮಗಳೂರುಯುವ ಜನತೆ ತಮ್ಮ ಹೆತ್ತವರು, ಶಿಕ್ಷಕರು ಮತ್ತು ಉಪನ್ಯಾಸಕರನ್ನು ಬದುಕಿನ ಮಾದರಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ ಸಲಹೆ ಮಾಡಿದರು.ನಗರದ ಮಲೆನಾಡು ವಿದ್ಯಾಸಂಸ್ಥೆ ಎಂ.ಎಸ್. ಪದ್ಮಾವತಮ್ಮ, ಎಂ.ಕೆ.ಸಾಂಬಶಿವ ಶೆಟ್ಟಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ನಮ್ಮ ಯುವ ಜನತೆ ಸಿನಿಮಾ ನಟರನ್ನು ತಮ್ಮ ಬದುಕಿನ ಮಾದರಿಯನ್ನಾಗಿ ಮಾಡಿಕೊಳ್ಳುತ್ತಿರುವುದು ದುರಾದೃಷ್ಟಕರ ಎಂದ ಅವರು, ಸಿನಿಮಾ ನಟರು ನಿಮ್ಮ ಹೀರೋಗಳಲ್ಲ, ಅವರು ಕೇವಲ ನಟರು ಮಾತ್ರ, ನಿಮ್ಮನ್ನು ತಿದ್ದಿ, ತೀಡಿ, ನಿಮ್ಮ ಭವಿಷ್ಯವನ್ನು ರೂಪಿಸುವ, ನಿಮ್ಮ ಹೆತ್ತವರು, ಶಿಕ್ಷಕರು ಮತ್ತು ಉಪನ್ಯಾಸಕರೇ ನಿಮ್ಮ ನಿಜವಾದ ಹೀರೋಗಳು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಎಷ್ಟೋ ಸಿನಿಮಾ ನಟರು ತಮ್ಮ ನಿಜ ಜೀವನದಲ್ಲಿ ಖಳನಾಯಕರಂತೆ ಬದುಕುತ್ತಿರುವುದು, ಅಪರಾಧಗಳಲ್ಲಿ ಭಾಗಿ ಯಾಗಿ ಜೈಲು ಸೇರುತ್ತಿರುವುದು ಎಲ್ಲೆಡೆ ಕಂಡು ಬರುತ್ತಿರುವ ಸಾಮಾನ್ಯ ಸಂಗತಿ. ಇದನ್ನು ಯುವ ಜನತೆ ಅರ್ಥಮಾಡಿ ಕೊಳ್ಳಬೇಕು, ತಮಗೆ ತಾವೇ ಹೀರೋಗಳಾಗಬೇಕು ಸಮಾಜಕ್ಕೆ ಮಾದರಿಯಾಗಿ ಬಾಳಬೇಕು ಎಂದು ಸಲಹೆ ಮಾಡಿದರು.ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳಿಗೆ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಮುನ್ನಡೆಸುವ ಜವಾಬ್ದಾರಿ ಇದೆ. ಅದನ್ನು ಅರಿತು ನಡೆಯಬೇಕು. ತಮ್ಮ ಶಾಲೆ, ಕಾಲೇಜುಗಳ ಕೀರ್ತಿ ಹೆಚ್ಚಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.ಈ ವೇಳೆ ಕಾನೂನು ಮತ್ತು ಕಾಯ್ದೆಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದ ನ್ಯಾಯಾಧೀಶರು ವಿದ್ಯಾರ್ಥಿದೆಸೆಯಲ್ಲಿ ಪ್ರೀತಿ, ಪ್ರೇಮ, ಸೇರಿದಂತೆ ಯಾವುದೇ ಆಕರ್ಷಣೆಗಳಿಗೆ ಒಳಗಾಗಿ ಅಡ್ಡದಾರಿ ಹಿಡಿಯಬಾರದು, ವಿದ್ಯಾರ್ಥಿ ಜೀವನದಲ್ಲಿ ಎಡವಿದರೆ ನಿಮ್ಮ ಬದುಕು ಪ್ರಪಾತ ದತ್ತ ಸಾಗುತ್ತದೆ. ಭವಿಷ್ಯ ಹಾಳಾಗುತ್ತದೆ ಎಂದು ಎಚ್ಚರಿಸಿದರು.ಸಂವಿಧಾನದ ಆಶಯಗಳನ್ನು ಈಡೇರಿಸುವ ಮಹತ್ತರ ಜವಾಬ್ದಾರಿ ಯುವ ಜನತೆ ಮೇಲಿದೆ, ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಚಿಂತನೆ ನಡೆಸಬೇಕು, ಸಂವಿಧಾನದ ಆಶಯಗಳ ಈಡೇರಿಕೆಗೆ ಮುಂದಾಗಬೇಕು ಎಂದು ತಿಳಿಸಿದರು.ಆಶಾಕಿರಣ ಅಂಧಮಕ್ಕಳ ಶಾಲೆ ಅಧ್ಯಕ್ಷ ಡಾ. ಜೆ.ಪಿ.ಕೃಷ್ಣೇಗೌಡ ಮಾತನಾಡಿ, ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಶಿಸ್ತು, ಸೇವಾ ಮನೋಭಾವ ಮೈಗೂಡಿಸಿಕೊಳ್ಳಬೇಕು ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲೆ ಪ್ರೊ, ಹಸೀನಾ ಬಾನು, ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಕಾಲೇಜಿನಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಮಲೆನಾಡು ವಿದ್ಯಾಸಂಸ್ಥೆ ಉಪಾಧ್ಯಕ್ಷೆ ರಾಧಾ ಸುಂದರೇಶ್, ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳು ವಿದ್ಯಾರ್ಥಿ ಸಮುದಾಯವನ್ನು ಮುನ್ನಡೆಸುವ ಕೆಲಸ ಮಾಡಬೇಕು. ಕಾಲೇಜಿನ ಕೀರ್ತಿ ಹೆಚ್ಚಿಸಬೇಕು ಎಂದು ಹೇಳಿದರು.ವಿವಿಧ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಮಾಡ ಲಾಯಿತು, ಕ್ರೀಡೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಭೋದಿಸಲಾಯಿತು. ಮಲೆನಾಡು ವಿದ್ಯಾಸಂಸ್ಥೆ ಪದ ನಿಮಿತ್ತ ಸದಸ್ಯ ಎಂ.ಎಂ.ಗೌತಮ್, ಶೈಕ್ಷಣಿಕ ಸಲಹೆಗಾರ ಕೆ.ಎನ್.ಮಂಜುನಾಥ ಭಟ್, ಕಚೇರಿ ವ್ಯವಸ್ಥಾಪಕಿ ಶ್ರೀಲಕ್ಷ್ಮಿ , ಉಪನ್ಯಾಸಕ ರಾದ ಬಿ.ಆರ್.ವೀರಣ್ಣಗೌಡ , ರಾಮಿಯಾ ಬರೀನ್, ವಿದ್ಯಾರ್ಥಿಗಳಾದ ಸಿ. ಎಂ. ಪ್ರಜಿತ್ ವಿಭಾ, ಲಾವಣ್ಯ, ಚೇತನ್, ಶ್ರೀನಿಧಿ ಉಪಸ್ಥಿತರಿದ್ದರು. 12 ಕೆಸಿಕೆಎಂ 1ಚಿಕ್ಕಮಗಳೂರಿನ ಮಲೆನಾಡು ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ನ್ಯಾ. ಹನುಮಂತಪ್ಪ ಬುಧವಾರ ಉದ್ಘಾಟಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))