ತನ್ನೊಂದಿಗೆ ಡಯಾಗ್ನಾಸ್ಟಿಕ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವೈದ್ಯರೊಬ್ಬರ ವಿರುದ್ಧ ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ತನ್ನೊಂದಿಗೆ ಡಯಾಗ್ನಾಸ್ಟಿಕ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವೈದ್ಯರೊಬ್ಬರ ವಿರುದ್ಧ ಕೊಡಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಮಾರು 30 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಸಹಕಾರನಗರದಲ್ಲಿರುವ ಡಯಾಗ್ನಾಸ್ಟಿಕ್ ಸೆಂಟರ್‌ ಮಾಲೀಕನಾಗಿರುವ ವೈದ್ಯ ಡಾ.ಯುವರಾಜ್ ಮನೋಹರ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಅತ್ಯಾಚಾರ ಮತ್ತು ಬೆದರಿಕೆ ಕಾಯ್ದೆಗಳು ಹಾಗೂ ಎಸ್ಸಿ, ಎಸ್ಟಿ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ಪ್ರಕರಣವನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ (ಡಿಸಿಆರ್‌ಇ) ವರ್ಗಾವಣೆ ಮಾಡಲಾಗಿದೆ.

ಸಂತ್ರಸ್ತೆ ಆರೋಪಿಯ ಡಯಾಗ್ನಾಸ್ಟಿಕ್ ಸೆಂಟರ್‌ನಲ್ಲಿ ಕೆಲ ವರ್ಷಗಳಿಂದ ಕೆಲಸ ಮಾಡುತ್ತಿದ್ದು, 2025ರ ಡಿಸೆಂಬರ್‌ನಲ್ಲಿ ಕಚೇರಿಯ 1ನೇ ಮಹಡಿಯಲ್ಲಿರುವ ಕೋಣೆಗೆ ಫೈಲ್‌ಗಳನ್ನು ಹುಡುಕುವ ನೆಪದಲ್ಲಿ ನನ್ನನ್ನು ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆದು, ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದ. ಕೃತ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ. ಎಚ್ಚರಗೊಂಡ ಬಳಿಕ ಕೃತ್ಯದ ಬಗ್ಗೆ ಪ್ರಶ್ನಿಸಿದಾಗ, ತಾನು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ಅದನ್ನು ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿದ್ದಾನೆ. ಅಲ್ಲದೆ, ಬೆದರಿಸಿ ಅಮೃತನಗರದಲ್ಲಿ ಬಾಡಿಗೆ ಮನೆ ಮಾಡಿಕೊಟ್ಟು ತನ್ನ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕರಣ ಡಿಸಿಆರ್‌ಇಗೆ ವರ್ಗಾವಣೆ:

ಆರೋಪಿಯು ಇತ್ತೀಚೆಗೆ ತನ್ನ ಜಾತಿಯ ಬಗ್ಗೆ ತಿಳಿದುಕೊಂಡು ಅವ್ಯಾಚ್ಯ ಶಬ್ದಗಳಿಂದ ಜಾತಿ ನಿಂದಿಸಿ, ಕೆಲಸದಿಂದ ವಜಾ ಮಾಡಿದ್ದಾನೆ. ಹೀಗಾಗಿ ಆತನ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಸಂತ್ರಸ್ತೆ ಕೋರಿಕೊಂಡಿದ್ದಾರೆ. ಈ ಪ್ರಕರಣ ಎಸಿ-ಎಸ್ಟಿ ಕಾಯ್ದೆಗೆ ಅನ್ವಯ ಆಗುವುದರಿಂದ ಪ್ರಕರಣವನ್ನು ಡಿಸಿಆರ್‌ಇಗೆ ವರ್ಗಾವಣೆ ಮಾಡಿದ್ದು, ಕಡತಗನ್ನು ಹಸ್ತಾಂತರಿಸಲಾಗಿದೆ.