ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಹುಚ್ಚು ನಾಯಿ ಕಡಿತಕ್ಕೆ ಒಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಮಂಗಳವಾರ ನಡೆದಿದೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ಪ್ರದೀಪ್ (೨೨) ಮೃತ ಯುವಕ. ಮಾರ್ಚ್‌ನಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮದ ಚಂದ್ರಾದೇವಿ ಜಾತ್ರೆಯಲ್ಲಿ ಯುವಕನಿಗೆ ಹುಚ್ಚು ನಾಯಿ ಕಚ್ಚಿತ್ತು.ಆದರೆ, ವೈದ್ಯರ ಬಳಿ ಚಿಕಿತ್ಸೆ ಪಡೆಯದೆ ಚುಚ್ಚುಮದ್ದು ಪಡೆಯದೇ ನಿರ್ಲಕ್ಷ್ಯ ತೋರಿದ್ದ. ವಾರದ ಹಿಂದೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡು ನಿಡಗುಂದಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ ಖಾಸಗಿ ಆಸ್ಪತ್ರೆಯಿಂದ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟವಶಾತ್‌ ರಾತ್ರಿ ಚಿಕಿತ್ಸೆ ಫಲಕಾರಿ ಆಗದೆ ಸಾವಿಗೀಡಾಗಿದ್ದಾನೆ.