ಬಳ್ಳಾರಿ: ನಗರದ ಶ್ರೀ ವಾಸವಿ ವಿದ್ಯಾಲಯದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಜನಜಾಗೃತಿ ವೇದಿಕೆ ಹಾಗೂ ಶಾಲೆಯ ಸಹಯೋಗದಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ತರಬೇತುದಾರ ವೆಂಕಟೇಶ್ ಅವರು ಮಾದಕ ವ್ಯಸನಗಳಿಂದಾಗುವ ಅಪಾಯಗಳು ಹಾಗೂ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರ ಇರಲು ಮಾಡಬೇಕಾದ ಪ್ರಾಥಮಿಕ ಕಾರ್ಯಗಳು ಕುರಿತು ಮಾಹಿತಿ ನೀಡಿದರು.

ವಿದ್ಯಾರ್ಥಿ-ಯುವಸಮುದಾಯವನ್ನು ಯಾವುದೇ ದೇಶದ ಸಮರ್ಥ ಸೃಜನಶೀಲ ವಿಭಾಗ ಎಂದೇ ಪರಿಗಣಿಸಲಾಗುತ್ತದೆ. ದೇಶದ ಭವಿಷ್ಯ ಯುವ ಸಮುದಾಯದ ಮೇಲೆಯೇ ಅವಲಂಬಿತವಾಗಿದೆ. ಹೀಗಾಗಿ, ಯುವಕರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಶಿಸ್ತುಬದ್ಧ ಜೀವನಶೈಲಿ ರೂಪಿಸಿಕೊಂಡು ಬೆಳವಣಿಗೆ ಕಾಣಬೇಕು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯಗುರು ವೀರೇಶ ಯು. ಮಾತನಾಡಿ,”ಶಾಲೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು ಹಾಗೂ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವ ಪವಿತ್ರ ತಾಣವಾಗಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಗುರಿ ಹೊಂದಿ, ದುಶ್ಚಟಗಳಿಂದ ದೂರವಿರಬೇಕು. ಪೋಷಕರು,ಶಿಕ್ಷಕರು ಮತ್ತು ಸಮಾಜದ ಸಹಕಾರದಿಂದ ಮಾತ್ರ ಡ್ರಗ್ಸ್ ಮುಕ್ತ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ತಿಳಿಸಿದರು. ಶ್ರೀ ವಾಸವಿ ಎಜ್ಯುಕೇಷನ್ ಟ್ರಸ್ಟ್‌ನ ಅಧ್ಯಕ್ಷ ವಿಟ್ಟ ಕೃಷ್ಣಕುಮಾರ್, ಕಾರ್ಯದರ್ಶಿ ಪಿ.ಎನ್. ಸುರೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಮೇಲ್ವಿಚಾರಕರಾದ ರತ್ನಾ, ಸೇವಾ ಪ್ರತಿನಿಧಿಗಳಾದ ಗೌಸಿಯಾ ಬೇಗಂ, ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ರೂಪಾ, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಹರಣಿ ಹಾಗೂ ಶಿಕ್ಷಕಿ ಜೆ.ಎಸ್. ರಾಜೇಶ್ವರಿ ಕಾರ್ಯಕ್ರಮ ನಿರ್ವಹಿಸಿದರು.