ಆರೋಗ್ಯವಂತ, ಸದೃಢ ಹಾಗೂ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಯುವಕರು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯನಾರಾಯಣ ಶ್ರೇಷ್ಠಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ಆರೋಗ್ಯವಂತ, ಸದೃಢ ಹಾಗೂ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಯುವಕರು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಸತ್ಯನಾರಾಯಣ ಶ್ರೇಷ್ಠಿ ಹೇಳಿದರು.

ಸ್ಥಳೀಯ ಆಕ್ಸ್‌ಫರ್ಡ್ ಕಾಲೇಜಿನಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ‘ವ್ಯಸನಮುಕ್ತ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಬದಲಾಗಿ ಕೆಲ ಯುವಕರು ವ್ಯಸನಗಳಿಗೆ ಬಲಿಯಾಗಿ ಮನೆ, ಸಂಸಾರವನ್ನು ಹಾಳು ಮಾಡಿಕೊಂಡಿದ್ದಾರೆ. ಆದ್ದರಿಂದ ವಿದ್ಯಾರ್ಥಿ-ಯುವಕರು ದುಶ್ಚಟಗಳಿಂದ ದೂರವಿರಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಅವರು ಯುವಕರೇ ದುಶ್ಚಟಗಳನ್ನು ತ್ಯಜಿಸಿ ಉತ್ತಮ ಜೀವನ ನಡೆಸಿ, ಮಹಾಂತ ಜೋಳಿಗೆಗೆ ಹಾಕಿ ಎಂಬುದು ವಿಶಿಷ್ಟ ಪರಿಕಲ್ಪನೆ. ಕ್ಷಣಿಕ ಸುಖಕ್ಕಾಗಿ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ಪರಿಶ್ರಮ ಪಟ್ಟು ಓದಿದರೆ ಜೀವನಲ್ಲಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬಹುದು. ಇದರತ್ತ ಗಮನ ಹರಿಸಬೇಕು ಎಂದು ಹೇಳಿದರು.

ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ, ಸಂಸ್ಥೆಯ ಕಾರ್ಯದರ್ಶಿ ಆರ್.ಸಿ.ಪಾಟೀಲ್ ಮಾತನಾಡಿದರು.

ತಾಪಂ ಇಒ ಚಂದ್ರಶೇಖರ, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಕುಮಾರ, ಸಿಡಿಪಿಓ ಲಿಂಗನಗೌಡ ಉಪಸ್ಥಿತರಿದ್ದರು. ಕಾವೇರಿ ಸಂಗಡಿಗರು ಪ್ರಾರ್ಥಿಸಿದರು. ಉಪನ್ಯಾಸಕ ಶಿವರಾಜ ಸಾಲಿಮಠ ನಿರೂಪಿಸಿದರು. ಉಪನ್ಯಾಸಕ ನಾಗರಾಜ ವಂದಿಸಿದರು.