ಕನ್ನಡಪ್ರಭ ವಾರ್ತೆ ತುಮಕೂರುಯುವಕರು ಹಾಗೂ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ.ರವರು ತಿಳಿಸಿದರು. ನಗರದ ಶಿರಾರಸ್ತೆಯ ಶ್ರೀದೇವಿ ಸಮೂಹ ವಿದ್ಯಾಸಂಸ್ಥೆ, ಪೊಲೀಸ್ ಮಾರ್ಷಲ್ಸ್, ಆರೋಹನ್ ಫೌಂಡೇಷನ್ ಸಂಯಕ್ತಾಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ ವ್ಯಸನವು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಉದ್ಯೋಗ ಹಾಗೂ ಕುಟುಂಬದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದು ಅರ್ಥಪೂರ್ಣವಾಗಿ ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಆರ್.ಹುಲಿನಾಯ್ಕರ್‌ ಮಾತನಾಡಿ ವಿಕಸಿತ ಭಾರತ–2047 ಕನಸು-ನನಸು ಮಾಡಲು ಯುವಜನತೆ ಪ್ರಮುಖ ಶಕ್ತಿಯಾಗಿದ್ದು, ವಿದ್ಯಾರ್ಥಿಗಳು ಶಿಸ್ತು, ಜವಾಬ್ದಾರಿ ಮತ್ತು ಉತ್ತಮ ನಡವಳಿಕೆಯನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳ ದುರುಪಯೋಗ ಮತ್ತು ಕಳ್ಳಸಾಗಣೆ ಸಮಾಜಕ್ಕೆ ಗಂಭೀರ ಅಪಾಯವಾಗಿದ್ದು, ಅವುಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ, ವಿದ್ಯಾರ್ಥಿ ಪೊಲೀಸ್ ಮಾರ್ಷಲ್, ಸ್ವಯಂಸೇವಕರು ಹಾಗೂ ಶಿಕ್ಷಣ ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಉತ್ತಮ ಶಿಕ್ಷಣದ ಮೂಲಕ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಆರೋಹನ್ ಫೌಂಡೇಷನ್ ನಿರ್ದೇಶಕ ವಿನಯ್‌ ಮಾತನಾಡಿ ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿದ್ದರೂ ಮಾದಕ ವಸ್ತುಗಳ ದುರುಪಯೋಗ, ಸೈಬರ್ ಅಪರಾಧ, ತಂಬಾಕು ಬಳಕೆ ಹಾಗೂ ಯುವಜನರಲ್ಲಿ ಹೆಚ್ಚುತ್ತಿರುವ ಅಪರಾಧಗಳು ದೇಶದ ಪ್ರಮುಖ ಸವಾಲುಗಳಾಗಿವೆ ಸೈಬರ್ ವಂಚನೆಗೆ ಒಳಗಾದರೆ ತಕ್ಷಣ 1930 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪುರುಷೋತ್ತಮ್‌ ಮಾತನಾಡಿದರು. ಖಾದಿ, ಖಾವಿ ಎಲ್ಲರೂ ಧರಿಸಬಹುದು, ಆದರೆ ಖಾಖಿ ಉಡುಪು ಧರಿಸುವುದು ಎಲ್ಲರಿಂದಲೂ ಸಾಧ್ಯವಿಲ್ಲ. ಸಮಾಜದಿಂದ ಮಾದಕ ವಸ್ತುಗಳನ್ನು ನಿರ್ಮೂಲನೆ ಮಾಡಲು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದರು.ಮಾಜಿ ಸಂಸದ, ತೇಜಸ್ವಿನಿ ಗೌಡ ಮಾತನಾಡಿ ಯುವಜನತೆ ದುಶ್ಚಟಗಳಿಂದ ದೂರವಿದ್ದು ಉತ್ತಮ ಶಿಕ್ಷಣ, ಉತ್ತಮ ಚಿಂತನೆ ಹಾಗೂ ದೃಢ ಸಂಕಲ್ಪವನ್ನು ಬೆಳೆಸಿಕೊಳ್ಳಬೇಕು. ಮಾದಕ ವಸ್ತುಗಳು ವಿದ್ಯಾರ್ಥಿಗಳು, ಪೋಷಕರು ಮತ್ತು ದೇಶದ ಭವಿಷ್ಯವನ್ನೇ ಹಾಳು ಮಾಡುತ್ತವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್, ಆರೋಹನ್ ಫೌಂಡೇಷನ್ ಸಹ ನಿರ್ದೇಶಕಿ ಮಾನಿಶ್ ಭಟ್, ಡಾ. ರಮಣ್ ಎಂ. ಹುಲಿನಾಯ್ಕರ್, ಎಂ.ಎಸ್.ಪಾಟೀಲ್, ಡಾ.ಲಾವಣ್ಯ, ಡಾ.ಭಾವನಾಪ್ರಸಾದ್, ಡಾ.ನರೇಂದ್ರ ವಿಶ್ವನಾಥ್, ಡಾ.ಕೆ.ಮೋಹನ್‌ಕುಮಾರ್, ಡಾ.ಪ್ರದೀಪ್‌ಕುಮಾರ್ ವೆಗ್ಗಿ, ಮರ್ಲಿನ್, ವಿವಿಧ ಕಾಲೇಜಿನ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು, ವ್ಯೆದ್ಯಕೀಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.