ಚರಸ್, ಆಫೀಮು, ಗಾಂಜಾ ಸೇರಿದಂತೆ ಮದ್ಯಪಾನದಿಂದ ದೂರವಿದ್ದು, ತಂಬಾಕು ಉತ್ಪನ್ನಗಳಾದ ಬೀಡಿ, ಸಿಗರೇಟು, ಗುಟ್ಕಾ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಯುವ ಜನರಿಗೆ ಅರಿವಿನ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ಓದಿ ಜ್ಞಾನವಂತರಾಗಿ ಉತ್ತಮ ಜೀವನ ಹಾಗೂ ವ್ಯಕ್ತಿತ್ವ ರೂಪಿಸಿಕೊಂಡು ಸಾಧನೆ ಮಾಡಬೇಕು.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ವ್ಯಸನ ಮುಕ್ತ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಯುವಜನರು ಮುಂದಾಗಬೇಕು. ನಶೆ ಮುಕ್ತ ಭಾರತದ ನಿರ್ಮಾಣ ನಮ್ಮೆಲ್ಲರ ಗುರಿಯಾಗಿದೆ ಎಂದು ವಿಶ್ರಾಂತ ಪೊಲೀಸ್ ಅಧಿಕಾರಿ ಶಂಕರಲಿಂಗೇಗೌಡ ಹೇಳಿದರು.ತಾಲೂಕಿನ ಶೀಳನೆರೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಅಡಿ ನಶಾ ಮುಕ್ತ ಭಾರತ ಹಾಗೂ ಮಾದಕ ವಸ್ತುಗಳ ಬಳಕೆ ವಿರುದ್ಧ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಚರಸ್, ಆಫೀಮು, ಗಾಂಜಾ ಸೇರಿದಂತೆ ಮದ್ಯಪಾನದಿಂದ ದೂರವಿದ್ದು, ತಂಬಾಕು ಉತ್ಪನ್ನಗಳಾದ ಬೀಡಿ, ಸಿಗರೇಟು, ಗುಟ್ಕಾ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಯುವ ಜನರಿಗೆ ಅರಿವಿನ ಜಾಗೃತಿ ಮೂಡಿಸಬೇಕು ಎಂದರು.ವಿದ್ಯಾರ್ಥಿಗಳು ಓದಿ ಜ್ಞಾನವಂತರಾಗಿ ಉತ್ತಮ ಜೀವನ ಹಾಗೂ ವ್ಯಕ್ತಿತ್ವ ರೂಪಿಸಿಕೊಂಡು ಸಾಧನೆ ಮಾಡಬೇಕು. ಕ್ಷಣಿಕ ಸುಖಕ್ಕೆ ಒಳಗಾಗಿ ತಮ್ಮ ಅಮೂಲ್ಯ ಜೀವನ ಹಾಳು ಮಾಡಿಕೊಳ್ಳಬಾರದು ಎಂದರು.
ಕಾಡುಗಳ್ಳ ವೀರಪ್ಪನ್ ಹಿಡಿಯಲು ಎಸ್.ಟಿ.ಎಫ್ ತಂಡದಲ್ಲಿದ್ದ ನಾನು ಸೇರಿ 26 ಪೊಲೀಸ್ ಅಧಿಕಾರಿಗಳು ಬಸ್ಸಿನಲ್ಲಿ ಹೋಗುತ್ತಿದ್ದಾಗ ನೆಲ ಬಾಂಬ್ ಸ್ಫೋಟಿಸಿ ಗುಂಡು ಹಾರಿಸಿ ನಿರ್ಧಯಯಿಂದ ಹತ್ಯೆ ಮಾಡಿದಾಗ ನಾನೊಬ್ಬನೇ ಬದುಕುಳಿದಿದ್ದು, ಪ್ರಾಮಾಣಿಕ ಸೇವೆ ಸಲ್ಲಿಸಿ ಸೇವಾ ನಿವೃತ್ತನಾಗಿ ಪ್ರಗತಿಪರ ಕೃಷಿಕನಾಗಿ ವಿಶ್ರಾಂತ ಜೀವನ ನಡೆಸುತ್ತಿದ್ದೇನೆ ಎಂದರು.ಕಸಾಪ ಮಾಜಿ ಅಧ್ಯಕ್ಷ ಕೆ.ಆರ್.ನೀಲಕಂಠ ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಪವಿತ್ರ, ಬಸವರಾಜು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಸಂಯೋಜಕ ಮಂಜುನಾಥ್, ಪ್ರಗತಿ ಬಂಧು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಭದ್ರಮ್ಮ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.