ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ಯುವಜನೋತ್ಸವ ಯುವಜನರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಇಂತಹ ಉತ್ಸವ, ಸ್ಪರ್ಧೆಗಳಿಂದ ಯುವಜನರು ತಮ್ಮಲ್ಲಿರುವ ಪ್ರತಿಭೆ, ಕೌಶಲ್ಯ ಪ್ರದರ್ಶಿಸಲು ಯುವಕರು ಈ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನರಸಿಂಹರಾಜ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ತನ್ವೀರ್ ಸೇಠ್ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೆಂದ್ರ, ರಾಷ್ಟ್ರೀಯ ಸೇವಾ ಯೋಜನೆ, ಮೈಸೂರು ವಿಶ್ವವಿದ್ಯಾನಿಲಯ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಯುವಕ ಸಂಘ ಮತ್ತು ಯುವತಿ ಮಂಡಳಿಗಳ ಸಹಯೋಗದಲ್ಲಿ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಜನೋತ್ಸವ ಕಾರ್ಯಕ್ರಮಗಳಲ್ಲಿ ಹಾಗೂ ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವ ಸಾಧನೆಗಳನ್ನು ಮಾಡಿ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ಅವರು ತಿಳಿಸಿದರು.ಯುವಜನೋತ್ಸವದ ಅಂಗವಾಗಿ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ಇತರ ಜನಪದ ಕಲೆಗಳನ್ನುಆಯೋಜಿಸಿ, ಪ್ರಜ್ಞಾವಂತ ಯುವ ಕಲಾ ಪ್ರತಿಭೆಗಳನ್ನು ಗುರುತಿಸುವ ಉದ್ದೇಶದಿಂದ ಅವರ ಪ್ರತಿಭೆಗಳನ್ನು ಗ್ರಾಮ ಮಟ್ಟದಿಂದ ರಾಜ್ಯ, ರಾಷ್ಟ್ರಮಟ್ಟದವರೆಗೆ ಅನಾವರಣಗೊಳಿಸುವುದೇ ಯುವಜನೋತ್ಸವದ ಮುಖ್ಯ ಉದ್ದೇಶವಾಗಿದೆ. ಯುವಕರು ಹೆಚ್ಚಾಗಿ ಇದರಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ತೋರಿಸಿ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಬೇಕು ಎಂದರು.
ಜಗತ್ತಿನಲ್ಲಿ ಭಾರತದಲ್ಲಿರುವ ಯುವಕ ಯುವತಿಯರ ಸಂಖ್ಯೆ ಬೇರೆ ಯಾವುದೇ ದೇಶದಲ್ಲಿ ಇಲ್ಲ. ದೇಶದ ಯುವ ಶಕ್ತಿಯನ್ನು ಮಾನವ ಸಂಪನ್ಮೂಲವಾಗಿ ಪರಿವರ್ತಿಸಬೇಕು. ಯುವಕರಿಗೆ ಪ್ರೋತ್ಸಾಹ ಕೊಡುವ ದೃಷ್ಟಿಯಲ್ಲಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಯುವಕ ಯುವತಿಯರ ಮನಸ್ಸಿನಲ್ಲಿರುವ ಭಾವನೆಗಳನ್ನು ಅರ್ಥೈಸಿಕೊಂಡು, ಅದಕ್ಕೆ ಪೂರಕವಾದ ಸ್ಪರ್ಧಾತ್ಮಕ ಅವಕಾಶ ಕಲ್ಪಿಸಿಕೊಟ್ಟಲ್ಲಿ ಅವರನ್ನು ಈ ರಾಷ್ಟ್ರದ ಸಂಪತ್ತನ್ನಾಗಿ ಪರಿವರ್ತಿಸಬಹುದು ಎಂದು ಅವರು ತಿಳಿಸಿದರು. ಶಿಕ್ಷಣ ಕೇವಲ ಅಂಕಗಳಿಗಲ್ಲ. ಶಿಕ್ಷಣದ ಜೊತೆಯಲ್ಲಿ ಇತರೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ಸ್ಕೌಟ್ಸ್ ಅಂಡ್ ಗೈಡ್ಸ್ ಇವುಗಳು ವಿದ್ಯಾರ್ಥಿಗಳಲ್ಲಿ ಶಿಸ್ತು- ಸಂಯಮ ಮತ್ತು ದೇಶಾಭಿಮಾನ ಮೂಡಿಸುವ ಕೆಲಸ ನಿರ್ವಹಿಸುತ್ತಿವೆ. ಪ್ರತೀ ಕಾಲೇಜುಗಳಲ್ಲಿ ರಾಷ್ಟ್ರೀಯ ಸೇವಾ ಸಂಘದಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಸೇರ್ಪಡೆ ಆಗುವ ಮೂಲಕ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ಈ ಮೂಲಕ ಒಳ್ಳೆಯ ನಾಗರಿಕರಾಗಿ ರಾಷ್ಟ್ರ ನಿರ್ಮಾಣಕ್ಕೆ ಪೂರಕವಾಗಿ ನಿಲ್ಲಬೇಕು ಎಂದು ಅವರು ಹೇಳಿದರು.ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಅಧಿಕಾರಿ ಅಭಿಷೇಕ್ ಎಸ್. ಜವರೆ, ಮೈಸೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಸಂಯೋಜನಾಧಿಕಾರಿ ಡಾ.ಎಂ.ಬಿ ಸುರೇಶ್, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ. ಅಬ್ದುಲ್ ರಹಿಮಾನ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್, ರಾಷ್ಟ್ರ ಪ್ರಶಸ್ತಿ ವಿಜೇತ ಇಮ್ರಾನ್ ಬೇಗ್, ವಿವಿಧ ಕಾಲೇಜಿನ ಸ್ಪರ್ಧಾರ್ಥಿಗಳು, ವಿದ್ಯಾರ್ಥಿಗಳು ಇದ್ದರು.ಬಹುಸಂಸ್ಕೃತಿಯ ನೈಜ್ಯ ಪರಿಚಯದ ಕೊರತೆ:
ಯುವಜನತೆಗೆ ದೇಶದ ಬಹುಸಂಸ್ಕೃತಿಯ ನೈಜ್ಯ ಪರಿಚಯದ ಕೊರತೆ ಇದೆ. ಅವರಿಗೆ ಸಂಸ್ಕೃತಿಯ ಅರಿವು ಮೂಡಿಸಬೇಕು. ಆಗ ಮಾತ್ರ ಅವರನ್ನು ಸಂಕುಚಿತ ಮನೋಭಾವನೆಯಿಂದ ಹೊರತರಬಹುದು. ಅದಕ್ಕೆ ಪೂರಕವೆಂಬಂತೆ ಯುವಜನೋತ್ಸವದಂತಹ ಕಾರ್ಯಕ್ರಮ ರೂಪಿಸಬೇಕು. ಯುವಜನರು ತಂತ್ರಜ್ಞಾನದ ಪ್ರಭಾವದಿಂದ ಇತ್ತೀಚಿನ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಕಡೆಗೆ ಹೆಚ್ಚು ಆಸಕ್ತಿ ತೋರುತ್ತಿಲ್ಲ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗಲು ಶೈಕ್ಷಣಿಕ ಕಲಿಕೆಗಳ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚು ಕ್ರಿಯಾತ್ಮಕವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಶಾಸಕ ತನ್ವೀರ್ ಶೇಠ್ ಹೇಳಿದರು.ಪ್ರತಿಯೊಬ್ಬರೂ ಜೀವನದಲ್ಲಿ ಸಮಯ ಪ್ರಜ್ಞೆಯನ್ನು ರೂಡಿಸಿಕೊಳ್ಳಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಸಮಯ ಪಾಲನೆ ಮಾಡಬೇಕು. ಸಾಧನೆ ಇಲ್ಲದೆ ಬದುಕು ಕಟ್ಟಿಕೊಳ್ಳುವುದು ಸಾರ್ಥಕತೆಯಲ್ಲ. ಪ್ರತಿಯೊಬ್ಬರಿಗೂ ಯಾವುದಾದರೊಂದು ಪ್ರತಿಭೆ ಇದ್ದೇ ಇರುತ್ತದೆ. ಸ್ಪರ್ಧೆಯಲ್ಲಿ ಸೋಲು ಗೆಲುವು ಎಂಬುದು ಮುಖ್ಯವಲ್ಲ, ಭಾಗವಹಿಸುವಿಕೆ ಬಹಳ ಮುಖ್ಯ. ಸ್ಪರ್ಧೆಯಲ್ಲಿ ಗೆದ್ದವರಿಗೆ ಯಶಸ್ಸು ಸಿಗುತ್ತದೆ, ಸೋತವರಿಗೆ ಮತ್ತೆ ಗೆಲ್ಲುವ ಧೈರ್ಯ ಸಿಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.