ಜಿಲ್ಲೆಯಲ್ಲಿ 16ರಿಂದ 35 ವರ್ಷದ ಯುವಕರನ್ನು ಸಂಘಟಿಸಿ ಅವರು ಉತ್ತಮ ಜೀವನ ರೂಪಿಸಿಕೊಳ್ಳುವ ಹಾಗೂ ಸಮಾಜ ನಿರ್ಮಾಣದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚಿಸಲಾಗುತ್ತಿದೆ.

ಧಾರವಾಡ:

ಜಿಲ್ಲೆಯಲ್ಲಿ 16ರಿಂದ 35 ವರ್ಷದ ಯುವಕರನ್ನು ಸಂಘಟಿಸಿ ಅವರು ಉತ್ತಮ ಜೀವನ ರೂಪಿಸಿಕೊಳ್ಳುವ ಹಾಗೂ ಸಮಾಜ ನಿರ್ಮಾಣದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.

ಜಿಪಂ ಭವನದಲ್ಲಿ ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಗೆ ಜಿಲ್ಲೆಯ ಶಾಲಾ-ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸರ್ಕಾರಿ ಕಚೇರಿಯ ಅಧಿಕಾರಿಗಳನ್ನು ಮೆಂಟರ್ ಮಾರ್ಗದರ್ಶಕರಾಗಿ ಗುರುತಿಸಿ ಆಯ್ಕೆ ಮಾಡಲಾದ ಅಧಿಕಾರಿಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪ್ರತಿ ಸಂಘದಲ್ಲಿ ಕನಿಷ್ಠ ನೂರು ಯುವಕರಿದ್ದು, ಗ್ರಾಪಂ ವ್ಯಾಪ್ತಿಯಲ್ಲಿ ಹಾಗೂ ಹುಬ್ಬಳ್ಳಿ-ಧಾರವಾಡ ಸೇರಿದಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಘಗಳನ್ನು ರಚಿಸಲಾಗುತ್ತಿದೆ. ಪ್ರತಿ ಸಂಘಕ್ಕೆ ಒಬ್ಬ ಮೆಂಟರ್ ಹಾಗೂ ಜಿಲ್ಲಾಮಟ್ಟದಲ್ಲಿ ಹತ್ತು ಮಾಸ್ಟರ್ ಟ್ರೈನರ್‌ಗಳನ್ನು ಗುರುತಿಸಲಾಗಿದೆ. ಈಗಾಗಲೇ ಗ್ರಾಮೀಣ ಭಾಗದಲ್ಲಿ ಸುಮಾರು 7,400 ಹಾಗೂ ನಗರ ಪ್ರದೇಶದಲ್ಲಿ ಸುಮಾರು 5 ಸಾವಿರ ಯುವಕರು ನೋಂದಣಿಯಾಗಿದ್ದು, ಒಟ್ಟು 25 ಸಾವಿರ ಯುವಕರ ನೋಂದಣಿ ಗುರಿ ಇದೆ ಎಂದರು.

100 ಯುವಕರು ಸೇರ್ಪಡೆಯಾದ ಬಳಿಕ ಸಂಘದ ಮೊದಲ ಸಭೆ ನಡೆಸಿ, ತಾತ್ಕಾಲಿಕ ನಾಯಕನನ್ನು ಆಯ್ಕೆ ಮಾಡಿ, ನೋಂದಣಿ ಪ್ರಕ್ರಿಯೆ ಕೈಗೊಳ್ಳಲಾಗುತ್ತದೆ. ಯುವಕರನ್ನು ಸಂಘಟಿಸಿ ಯುವ ಸಂಘಗಳನ್ನು ರಚಿಸಬೇಕು. ಸಂಘ ನೋಂದಣಿಯಾದ ಬಳಿಕ 15 ಜನರ ಕಾರ್ಯಕಾರಿ ಸಮಿತಿ ರಚಿಸಬೇಕು. ಇದರಲ್ಲಿ ಮಹಿಳೆಯರು, ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯವಿದೆ ಎಂದು ಹೇಳಿದರು.

ಯುವ ಸಂಘಗಳ ಮೂಲಕ ಕ್ರೀಡೆ, ಯೋಗಾಭ್ಯಾಸ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸಬಹುದು. ಗ್ರಾಮದಲ್ಲಿನ ಸ್ವಚ್ಛತೆ ಸೇರಿದಂತೆ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಯುವಕರು ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಪ್ರತಿ ಸಂಘಕ್ಕೆ ಸರ್ಕಾರದಿಂದ ವರ್ಷಕ್ಕೆ ಹತ್ತು ಲಕ್ಷ ಅನುದಾನವಿದೆ. ನಿಗದಿತ ಮಾರ್ಗಸೂಚಿಗಳಂತೆ ಮಾತ್ರ ಹಣವನ್ನು ವೆಚ್ಚ ಮಾಡಬೇಕು. ಯುವಕರಿಗಾಗಿ ಆರೋಗ್ಯ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜಿಸಲು ಅವಕಾಶವಿದ್ದು, ಮಾರ್ಗಸೂಚಿಗಳು ಕಾಲಕಾಲಕ್ಕೆ ಬಿಡುಗಡೆಯಾಗಲಿವೆ ಎಂದರು.

ಜಿಪಂ ಸಿಇಒ ಭುವನೇಶ ಪಾಟೀಲ ಮಾತನಾಡಿ, ಯುವ ಸಂಘಗಳ ರಚನೆ ಹಾಗೂ ಮುಂದಿನ ಚಟುವಟಿಕೆಗಳ ಮೇಲ್ವಿಚಾರಣೆ ಮತ್ತು ಅನುಷ್ಠಾನದಲ್ಲಿ ಮೆಂಟರ್ಸ್‌ಗಳ ಪಾತ್ರ ಮಹತ್ವದ್ದಾಗಿದೆ ಎಂದರು.