ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
2024ನೇ ಸಾಲಿನಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಪದವಿ, ಡಿಪ್ಲೊಮಾ, ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಯುವನಿಧಿ ಯೋಜನೆಯ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಜ.6ರಿಂದ 20ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಮಂಗಳೂರು ವಿಶ್ವವಿದ್ಯಾಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಕಚೇರಿಯಲ್ಲಿ ಮತ್ತು ನಗರದ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಅರ್ಹತೆ:2023- 24ನೇ ಸಾಲಿನಲ್ಲಿ ಯಾವುದೇ ವೃತ್ತಿಪರ ಕೋರ್ಸ್, ಪದವಿ, ಡಿಪ್ಲೊಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ 6 ತಿಂಗಳವರೆಗೆ ಉದ್ಯೋಗ ಸಿಗದವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ರಾಜ್ಯದಲ್ಲಿ ಕನಿಷ್ಠ 6 ವರ್ಷಗಳವರೆಗೆ ಪದವಿ ಡಿಪ್ಲೊಮಾ, ಸ್ನಾತಕೋತ್ತರ ಪದವಿಯವರೆಗೆ ಅಧ್ಯಯನ ಮಾಡಿರಬೇಕು. ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರು ಅರ್ಜಿ ಸಲ್ಲಿಸಬಹುದು.
ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhus.karnataka.gov.in ಮೂಲಕ ಲಾಗಿನ್ ಆಗಿ ಸ್ವತಃ ಅರ್ಜಿ ಸಲ್ಲಿಸಬಹುದು ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇರ ನಗದು ವರ್ಗಾವಣೆಗಳನ್ನು ಸ್ವೀಕರಿಸಲು ಮೊಬೈಲ್ ಸಂಖ್ಯೆಗೆ ಲಿಂಕ್ ಆದ ಆಧಾರ ಸಂಖ್ಯೆಯ ಬ್ಯಾಂಕ್ ಖಾತೆಯನ್ನು ಕಡ್ಡಾಯವಾಗಿ ಹೊಂದಿರಬೇಕು.ಅಭ್ಯರ್ಥಿಗಳು ಯೋಜನೆಯ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ ಪ್ರತಿ ತಿಂಗಳು 25ನೇ ದಿನಾಂಕದೊಳಗೆ https://sevasindhugs.karnataka.gov.in ವೆಬ್ಸೈಟ್ ಮೂಲಕ ಸ್ವಯಂ ಘೋಷಣೆಯನ್ನು ಕಡ್ಡಾಯವಾಗಿ ಮಾಡಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರ ಪಾಲಿಕೆ ಕಟ್ಟಡ, ದೂರವಾಣಿ ಸಂಖ್ಯೆ: 0824-2457139 ಅಥವಾ ಸಹಾಯವಾಣಿ: 18005999918 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.