ರಾಯಚೂರು ಜಿಲ್ಲಾ ಪಂಚಾಯಿಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು ಸಿಂಧನೂರು ನಗರ ಸೇರಿದಂತೆ ವಿವಿಧ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿದ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಸಿಂಧನೂರು

ರಾಯಚೂರು ಜಿಲ್ಲಾ ಪಂಚಾಯಿಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು ಸಿಂಧನೂರು ನಗರ ಸೇರಿದಂತೆ ವಿವಿಧ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿದ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ತಾಲ್ಲೂಕಿನ ಹೊಸಳ್ಳಿ ಇ.ಜೆ., ಸಾಲಗುಂದಾ ಮತ್ತು ದಢೇಸುಗೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಸ್ಥಳ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಮ ಪಂಚಾಯಿತಿಗಳ ಅರಿವು ಕೇಂದ್ರಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳ ಕುರಿತು ಪರಿಶೀಲಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಕಕೆಫೆ, ಸಂಜೀವಿನಿ ಇ-ಮಾರ್ಟ್‌ಗಳಿಗೆ ಭೇಟಿ ನೀಡಿ ವ್ಯಾಪಾರ-ವಹಿವಾಟು ಹೆಚ್ಚಿಸಲು ಸೂಕ್ತ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಸೂಪರ್ ಮಾರ್ಕೆಟ್ ನಿರ್ಮಾಣ ಕಾಮಗಾರಿ ಪರಿಶೀಲಿಸಿ ಗುಣಮಟ್ಟದ ಕಾಮಗಾರಿಯನ್ನು ತುರ್ತಾಗಿ ಮುಗಿಸುವಂತೆ ಸಂಬಂಧಿಸಿದ ಏಜೆನ್ಸಿಯವರಿಗೆ ಸೂಚಿಸಿದರು.

ಸಾಸಲಮರಿ ಕ್ಯಾಂಪಿನ ಜಲಧಾರೆ ಯೋಜನೆಯಡಿ ಜೆಡ್ಬಿಟಿ ಕಾಮಗಾರಿಯನ್ನು ಪರಿಶೀಲಿಸಿ 15 ದಿನದೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ತದನಂತರ ಸಾಲಗುಂದ ಗ್ರಾಮ ಪಂಚಾಯಿತಿಯ ವಿಬಿಜಿ ರಾಮ್ ಜಿ ಯೋಜನೆಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಲುವೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಎನ್ಎಂಎಂಎಸ್ ಹಾಜರಾತಿ ಮತ್ತು ಕಾಮಗಾರಿಯ ಅಳತೆಗಳನ್ನು ಪರಿಶೀಲಿಸಿದರು. ಗ್ರಾ.ಪಂ ವತಿಯಿಂದ ಕಾರ್ಮಿಕರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಕೂಲಿಕಾರರೊಂದಿಗೆ ಸಂವಾದ ನಡೆಸಿದರು.

ಸಾಲಗುಂದಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರಕ್ತಹೀನತೆ, ಎಸ್ಎಎಂ ಮತ್ತು ಎಂಎಎಂಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದರು. ಆಸ್ಪತ್ರೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಸರಿಯಾಗಿ ನಿರ್ವಹಿಸುವಂತೆ ಮತ್ತು ಆಸ್ಪತ್ರೆಗೆ ಬರುವ ಜನರಿಗೆ ಉತ್ತಮ ಸೇವೆ ನೀಡುವಂತೆ ಪಿಎಚ್ಸಿ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ನರೇಗಾ ಸಹಾಯಕ ಯೋಜನಾಧಿಕಾರಿ ಯಂಕಪ್ಪ, ಸಹಾಯಕ ಕೃಷಿ ನಿರ್ದೇಶಕ ರುದ್ರಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಚಾಗಪ್ಪ. ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ ಸೇರಿದಂತೆ ಟಿಪಿಓ, ಆರ್ಎಫ್ಓ, ಪಿಡಿಓಗಳು ಇದ್ದರು.