ಗ್ರಾಮ ಪಂಚಾಯಿತಿ ಆದಾಯ ವೃದ್ಧಿಗಾಗಿ ತೆರಿಗೆ ಸಂಗ್ರಹವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಇಳಕಲ್ಲ ತಾಲೂಕಿನ ಚಿಕ್ಕಕೊಡಗಲಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮುಂದಾದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಗ್ರಾಮ ಪಂಚಾಯಿತಿ ಆದಾಯ ವೃದ್ಧಿಗಾಗಿ ತೆರಿಗೆ ಸಂಗ್ರಹವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಇಳಕಲ್ಲ ತಾಲೂಕಿನ ಚಿಕ್ಕಕೊಡಗಲಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮುಂದಾದರು.

ಹುನಗುಂದ, ಇಳಕಲ್ಲ ಹಾಗೂ ಮುಧೋಳ ತಾಲೂಕಿನಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆಗಾಗಿ ಪ್ರವಾಸ ಕೈಗೊಂಡು ಪರಿಶೀಲನೆ ಕಾರ್ಯ ನಡೆಸಿದರು. ಹೂವಿನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ, ಮುಲ್ಲೂರು ಗ್ರಾಮದ ರಸ್ತೆ ಕಾಮಗಾರಿ, ಕ್ಯಾದಿಗೇರಿ ಗ್ರಾಮದಿಂದ ಕುಣಬೆಂಚಿ ಗ್ರಾಮದವರೆಗೆ ನಿರ್ಮಾಣಗೊಳ್ಳುತ್ತಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಿ, ತಾಂತ್ರಿಕ ಮಾನದಂಡಗಳಂತೆ ಗುಣಮಟ್ಟ ಕಾಯ್ದುಕೊಂಡು ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿದರು.

ಐಹೊಳೆಯ ಗ್ರಾಮ ಪಂಚಾಯಿತಿಯ ಪಶು ವೈದ್ಯಕೀಯ ಆಸ್ಪತ್ರೆಗೆ ಭೇಟಿ ನೀಡಿ ರೈತರು ಮತ್ತು ಪಶುಪಾಲಕರಿಗೆ ಸಮರ್ಪಕ ಸೇವೆ ದೊರಕುವಂತೆ ಅಗತ್ಯ ಮೂಲಭೂತ ಸೌಲಭ್ಯ ಬಲಪಡಿಸಲು ತಿಳಿಸಿದರು. ಯರನಕೇರಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಸಿಇಒ ಅವರು ಮಕ್ಕಳಿಗೆ, ಗರ್ಭಿಣಿ ಹಾಗೂ ಬಾಣಂತಿಯರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳು, ಪೌಷ್ಟಿಕ ಆಹಾರ ಮತ್ತು ದಾಖಲೆಗಳ ಪರಿಶೀಲನೆ ನಡೆಸಿದರು. ಬೇವಿನಮಟ್ಟಿ ಗ್ರಾಮದ ಡಿ.ದೇವರಾಜ ಅರಸು ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಸೌಲಭ್ಯಗಳು ಹಾಗೂ ಆವರಣ ಗೋಡೆ ನಿರ್ಮಾಣ ಕಾಮಗಾರಿ ಹಾಗೂ ವಿದ್ಯಾರ್ಥಿಗಳ ಸುರಕ್ಷತೆ, ಸ್ವಚ್ಛತೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಮುಧೋಳ ತಾಲೂಕಿನ ಉತ್ತೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಔಷದ ಸಂಗ್ರಹವನ್ನು ಪರಿಶೀಲಿಸಿದರು. ಅಗತ್ಯ ಔಷಧಗಳು ಲಭ್ಯವಿರುವಂತೆ ನೋಡಿಕೊಳ್ಳಲು ತಿಳಿಸಿ, ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ವೈದ್ಯಾಧಿಕಾರಿಗಳು ಮುಂದಾಗಬೇಕಿದೆ ಎಂದರು. ನಂತರ ಮುದೋಳ ಎಪಿಎಂಸಿ ಶೆಡ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿಯ ಪ್ರಗತಿ ಕುರಿತು ಮಾಹಿತಿ ಪಡೆದು, ರೈತರಿಗೆ ಅನುಕೂಲವಾಗುವಂತೆ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಭೇಟಿ ಸಂದರ್ಭದಲ್ಲಿ ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಸಿದ್ಧರಾಮೇಶ್ವರ ಉಕ್ಕಲಿ, ಹುನಗುಂದ ಮತ್ತು ಇಲಕಲ್ಲ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಮುಧೋಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಐ.ಅಂಬಿಗೇರ ಹಾಗೂ ಆಯಾ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.