ಸಾರಾಂಶ
ಹೊಸಪೇಟೆ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಕ್ತದಲ್ಲೇ ಕಾಂಗ್ರೆಸ್ ಇದೆ. ಬಿಜೆಪಿ, ಜೆಡಿಎಸ್ ಶಾಸಕರು ಕೂಡ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಶುಕ್ರವಾರ ಹಂಪಿ ಉತ್ಸವದಲ್ಲಿ ಫಲ-ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿಯಾಗಲಿದೆ ಎಂದು ಬಿಜೆಪಿ ಅವರು ಹಗಲು ಕನಸು ಕಾಣುತ್ತಿದ್ದಾರೆ. ಇನ್ನು 15 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರಲಿದೆ. ಮುಂದೆ ಕೂಡ ಕಾಂಗ್ರೆಸ್ ಸರ್ಕಾರವೇ ಬರಲಿದೆ. ಬಿಜೆಪಿಯಲ್ಲೇ ಅನೇಕ ಬಣಗಳಿವೆ. ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ, ಬಿಜೆಪಿ, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. 13 ರಿಂದ 14 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಇದ್ದಾರೆ. ಹೈಕಮಾಂಡ್ ಹಾಕಿರುವ ಗೆರೆ ನಾವು ದಾಟಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ಡಿ.ಕೆ.ಶಿವಕುಮಾರ್ ಅವರು ಚೆನ್ನಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಶಿವರಾತ್ರಿ ಹಬ್ಬಕ್ಕೆ ಸ್ವಾಮೀಜಿ ಆಹ್ವಾನ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಬಂದಿದ್ದರು. ಡಿ.ಕೆ. ಶಿವಕುಮಾರ್ ಅವರು ಬಿಜೆಪಿಗೆ ಹೋಗ್ತಾರೆ ಅನ್ನೋದು ರಾಜಕೀಯ ಉಹಾಪೋಹ ಅಷ್ಟೇ. ಡಿ.ಕೆ ಶಿವಕುಮಾರ್ ಅವರ ರಕ್ತದಲ್ಲಿಯೇ ಕಾಂಗ್ರೆಸ್ ಇದೆ. ಅವರು ಪಕ್ಕಾ ಕಾಂಗ್ರೆಸ್ ಮನುಷ್ಯ ಎಂದರು.