ಸಾರಾಂಶ
ಬೆಂಗಳೂರು : ‘ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಮೇಲೆ ನಿರ್ಬಂಧ ಹೇರಬೇಕು’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಬಿಜೆಪಿಗರ ಕೆಂಗಣ್ಣಿಗೆ ಕಾರಣವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವ ಸುನೀಲ್ ಕುಮಾರ್, ಮೊದಲಾದವರು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
‘ಮತ್ತೊಮ್ಮೆ ಆರ್ಎಸ್ಎಸ್ ನಿಷೇಧಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ನಿರ್ಬಂಧ ಕೋರಿ ಸಿಎಂಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್ ಮೂರ್ಖತನ ಪ್ರದರ್ಶಿಸಿದ್ದಾರೆ’ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.
‘ಆರ್ಎಸ್ಎಸ್ಗೆ ಕಡಿವಾಣ ವಿಚಾರವಾಗಿ ಹಲವು ಪತ್ರಗಳು ಬಂದು ಹೋಗಿವೆ. ಪ್ರಿಯಾಂಕ್ಗೆ ಇದು ಗೊತ್ತಿಲ್ಲ. ಆರೆಸ್ಸೆಸ್ ಮೇಲೆ ನಿಷೇಧ ಹೇರಿದರೆ ನಾವು ಸುಮ್ಮನೆ ಇರೋದಿಲ್ಲ’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
‘ಉಗ್ರರಿಗೆ ಕುಮ್ಮಕ್ಕು ನೀಡುವ ಕಾಂಗ್ರೆಸ್ ಪಕ್ಷವನ್ನು ಮೊದಲು ನಿಷೇಧ ಮಾಡಬೇಕು’ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
‘ರಾಷ್ಟ್ರ ಹಿತಕ್ಕಾಗಿ ಶತಮಾನದಿಂದ ಕಾರ್ಯನಿರ್ವಹಿಸುತ್ತಿರುವ ಆರೆಸ್ಸೆಸ್ ನಿಷೇಧಿಸುವ ಸಾಹಸಕ್ಕೆ ಸರ್ಕಾರ ಕೈ ಹಾಕಲಿ’ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಸವಾಲೆಸೆದಿದ್ದಾರೆ.
ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧಿಸಿ
ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಕಾಂಗ್ರೆಸ್ ಪಕ್ಷವನ್ನು ಮೊದಲು ನಿಷೇಧ ಮಾಡಬೇಕು. ಕಾಂಗ್ರೆಸ್ ನಾಯಕರು ಬುದ್ಧಿ ಭ್ರಮಣೆಯಾದಂತೆ ಸುಮ್ಮನೆ ಮಾತನಾಡುತ್ತಾರೆ. ನಿಷೇಧ ಅಧಿಕಾರ ಅವರಿಗಿಲ್ಲ.
- ಆರ್. ಅಶೋಕ್, ಪ್ರತಿಪಕ್ಷ ನಾಯಕ