ಕಾಂಗ್ರೆಸ್‌ ಪಕ್ಷದ ತಂತ್ರ-ಕುತಂತ್ರದ ನಡುವೆಯೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಪಂಚ ನಗರ ಪಾಲಿಕೆಗಳ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ನಮಗೆ ಒಳ್ಳೆಯ ಅವಕಾಶವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಬೆಂಗಳೂರು : ಕಾಂಗ್ರೆಸ್‌ ಪಕ್ಷದ ತಂತ್ರ-ಕುತಂತ್ರದ ನಡುವೆಯೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಪಂಚ ನಗರ ಪಾಲಿಕೆಗಳ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ನಮಗೆ ಒಳ್ಳೆಯ ಅವಕಾಶವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಬಿಎ ಚುನಾವಣೆ ಹಿನ್ನೆಲೆಯಲ್ಲಿ ನಡೆದ ವಿಶೇಷ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಬಿಎ ಚುನಾವಣೆ ಹಿನ್ನೆಲೆಯಲ್ಲಿ ಇವತ್ತು ಮಹತ್ವದ ಸಭೆ ನಡೆಸಲಾಗಿದೆ. ಯಾವುದೇ ಜಿಬಿಎ ಚುನಾವಣೆ ನಡೆದರೂ ನಾವು ಗೆದ್ದೇ ಗೆಲ್ಲುತ್ತೇವೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸುವ, ಜೆಡಿಎಸ್‌ ಜೊತೆಗೆ ಚರ್ಚಿಸಿ ಅವರ ಅಭಿಪ್ರಾಯ ಪಡೆದು ಚುನಾವಣೆಗೆ ಸಜ್ಜಾಗಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಫೆ.28, ಮಾ.28ರಂದು ಪ್ರತ್ಯೇಕ ಸಭೆ:

ಇದೇ ಫೆಬ್ರವರಿ 28 ಮತ್ತು ಮಾರ್ಚ್‌ 1ರಂದು ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಪ್ರತ್ಯೇಕ ಸಭೆ ಕರೆಯಬೇಕು. ಆ ಸಭೆಯಲ್ಲಿ ನಮ್ಮ ಪಕ್ಷದ ಹಿರಿಯರೆಲ್ಲರೂ ಇರುತ್ತಾರೆ. ಸ್ಥಳೀಯ ನಮ್ಮ ಕಾರ್ಯಕರ್ತರ ಅಭಿಪ್ರಾಯ ಮತ್ತು ಸಲಹೆ ಪಡೆದು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ಚರ್ಚಿಸಿ ಮುನ್ನಡೆಯುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.

ಬೆಲೆ ಏರಿಕೆ, ಭ್ರಷ್ಟಾಚಾರದಿಂದ ಬೇಸತ್ತ ಜನ:

ಬೆಂಗಳೂರು ಮಹಾನಗರ ಗಾರ್ಡನ್ ಸಿಟಿ ಇದೀಗ ಗಾರ್ಬೇಜ್ ಸಿಟಿಯಾಗಿ ಪರಿವರ್ತನೆಯಾಗಿದೆ. ಉಸ್ತುವಾರಿ ಸಚಿವರು ಅಥವಾ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ವಿಚಾರದಲ್ಲಿ ಬೆಂಗಳೂರು ಮಹಾನಗರಕ್ಕೆ ಆದ್ಯತೆ ನೀಡಿಲ್ಲ. ಟನೆಲ್ ರೋಡ್ ಬಗ್ಗೆ ಮಾತನಾಡುವ ಈ ಸರ್ಕಾರಕ್ಕೆ ನಗರದ ಒಂದು ಗುಂಡಿ ಮುಚ್ಚಲೂ ಆಗುತ್ತಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆಯಿಂದ ಬೆಂಗಳೂರು ಜನತೆ ಈ ಸರ್ಕಾರದ ಬಗ್ಗೆ ಬೇಸತ್ತಿದ್ದಾರೆ. ಮತ್ತೊಂದು ಕಡೆ ಅಪಾರ್ಟ್‍ಮೆಂಟ್ ವೆಲ್‌ಫೇರ್‌ ಅಸೋಸಿಯೇಷನ್‍ನವರು ಭೇಟಿಯಾದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ ಧಾಟಿ- ನಡೆಯನ್ನು ಜನರು ಗಮನಿಸಿದ್ದಾರೆ ಎಂದರು.

ಜನರ ಮುಂದೆ ಕಾಂಗ್ರೆಸ್‌ ವೈಫಲ್ಯ:

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಗೆ ಸಾಕ್ಷಷ್ಟು ಆದ್ಯತೆ ನೀಡಲಾಗಿತ್ತು. ಅನುದಾನ ನೀಡಲಾಗಿತ್ತು. ಈ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗಲಿದ್ದೇವೆ. ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಲಿದ್ದೇವೆ. ಪಂಚ ಪಾಲಿಕೆಗಳಲ್ಲಿ ನಾವು ಅಧಿಕಾರಕ್ಕೆ ಬರಬೇಕೆಂಬ ಸಂಕಲ್ಪದೊಂದಿಗೆ ಮುಂದಡಿ ಇಡುತ್ತೇವೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.

ಈ ವಿಶೇಷ ಸಭೆಯಲ್ಲಿ ಜಿಬಿಎ ಚುನಾವಣೆ ಉಸ್ತುವಾರಿ ರಾಮ್‌ ಮಾಧವ್‌, ಸಹ ಉಸ್ತುವಾರಿಗಳಾದ ಸತೀಶ್‌ ಪೂನಿಯಾ, ಸಂಜಯ್‌ ಉಪಾಧ್ಯಾಯ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕರಾದ ಆರ್‌.ಅಶೋಕ್‌ ಮತ್ತು ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಸಂಸದರು, ಶಾಸಕರು, ಮಾಜಿ ಮೇಯರ್‌ಗಳು, ಉಪ ಮೇಯರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಹಿರಿಯ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ಹೇಳಿದರು.