ಸಾರಾಂಶ
ತಿರುವನಂತಪುರ: ಕೇರಳದ ವಯನಾಡು ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಅನರ್ಹಗೊಳಿಸಬೇಕೆಂದು ಕೋರಿ ಕೇರಳ ಹೈಕೋರ್ಟ್ಗೆ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.
ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಎದುರಾಳಿಯಾಗಿದ್ದ ಬಿಜೆಪಿಯ ನವ್ಯಾ ಹರಿದಾಸ್ ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚುನಾವಣೆ ವೇಳೆ ಸಲ್ಲಿಸಿದ ನಾಮಪತ್ರದಲ್ಲಿ ಪ್ರಿಯಾಂಕಾ ಅವರು ತಮ್ಮ ಮತ್ತು ಕುಟುಂಬದ ಆಸ್ತಿ ಕುರಿತು ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರನ್ನು ಅನರ್ಹಗೊಳಿಸಬೇಕು ಎಂದು ನವ್ಯಾ ಹೈಕೋರ್ಟ್ಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ.
ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ತಮ್ಮ ಬಳಿ 12 ಕೋಟಿ ರು. ಮೌಲ್ಯದ ಆಸ್ತಿ ಇದೆ ಎಂದು ಪ್ರಿಯಾಂಕಾ ಘೋಷಿಸಿದ್ದರು. ಜೊತೆಗೆ ತಮ್ಮ ಪತಿಯ ಬಳಿ 65 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಮತ್ತು ಚರಾಸ್ತಿ ಇದೆ ಎಂದು ಘೋಷಿಸಿದ್ದರು. ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ, ನವ್ಯಾ ವಿರುದ್ಧ 5 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.