ಸಾರಾಂಶ
ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುದ್ರಿತ ಸಹಿ ಇರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚಲು ಮುಂದಾಗಿರುವುದನ್ನು ತಡೆಯಬೇಕು ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬೆಂಗಳೂರು : ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುದ್ರಿತ ಸಹಿ ಇರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚಲು ಮುಂದಾಗಿರುವುದನ್ನು ತಡೆಯಬೇಕು ಎಂದು ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದ ಬಿಜೆಪಿ ನಿಯೋಗವು ಗುರುವಾರ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ದೂರು ಸಲ್ಲಿಸಿದ್ದು, ಕಾನೂನು ಉಲ್ಲಂಘಿಸಿ ಮತದಾರರ ವೈಯಕ್ತಿಕ ಮಾಹಿತಿ ಕಲೆ ಹಾಕದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಅಕ್ರಮವಾಗಿ ಲಾಭ ಪಡೆಯುವ ದುರುದ್ದೇಶ ಹೊಂದಲಾಗಿದೆ. ರಾಜ್ಯದ ಮತದಾರರಿಗೆ ಅಮಿಷಗಳನ್ನು ನೀಡಿ ಓಲೈಸುವ ಸಲುವಾಗಿ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಫೋಟೋ ಸಹಿತ ಮುದ್ರಿತ ಸಹಿ ಮತ್ತು ಕ್ಯೂಆರ್ ಕೋಡ್ ಇರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ಮತದಾರರಿಗೆ ದೇಶಾದ್ಯಂತ ಹಂಚಲು ತಯಾರಿ ಮಾಡಿಕೊಳ್ಳಲಾಗಿದೆ. ಗ್ಯಾರಂಟಿ ಕಾರ್ಡ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಕಾಂಗ್ರೆಸ್ ಪಕ್ಷದ ಕಾರ್ಯಗಳು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.