ಸಾರಾಂಶ
ಚಿಕ್ಕಬಳ್ಳಾಪುರ : ಕೇಂದ್ರ ಬಜೆಟ್ ನಲ್ಲಿ ಈ ಬಾರಿ ಯುವಕರು, ರೈತರು ಹಾಗೂ ಮಧ್ಯಮ ವರ್ಗಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಿ.ವಿ. ರಾಮಲಿಂಗಪ್ಪ ಪ್ರಶಂಸೆ ವ್ಯಕ್ತಪಡಿಸಿದರು.ಕೇಂದ್ರ
ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಏಳನೇ ಬಜೆಟ್ ಮಂಡನೆ ಮಾಡಿದ್ದು. ಇದರಲ್ಲಿ ಆರ್ಥಿಕವಾಗಿ ಭಾರತವನ್ನು ಸದೃಢ ಗೊಳಿಸುವ ಕಾರ್ಯ ಮಾಡಿದ್ದಾರೆ. ರಾಜ್ಯ ಸರ್ಕಾರಗಳನ್ನು ಕೇಂದ್ರ ಕಡಗಣನೆ ಮಾಡಿಲ್ಲ. ಈ ಬಜೆಟ್ನಲ್ಲೂ ರೈತ, ಯುವಕರು ಹಾಗೂ ಮಧ್ಯಮ ವರ್ಗಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ಪಾಠ
ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಮೊದಲ ಬಜೆಟ್ ಭಾರತದ ಆರ್ಥಿಕ ಚಿತ್ರಣವನ್ನು ರೂಪಿಸಲು ಯೋಜಿಸಲಾಗಿದೆ, ಮೂಲಸೌಕರ್ಯ ಅಭಿವೃದ್ಧಿಯಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳವರೆಗೆ ಎಲ್ಲವನ್ನೂ ಪರಿಣಾಮ ಬೀರುವಂತೆ ಮಾಡಿದ್ದಾರೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿರುವ ಕೇಂದ್ರ ಬಜೆಟ್, ತನ್ನ ಆಡಳಿತದ ರಾಜ್ಯಗಳನ್ನ ಆರ್ಥಿಕವಾಗಿ ದಿವಾಳಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಗಳಿಗೆ ಒಂದು ಉತ್ತಮ ಪಾಠವಾಗಿದೆ ಎಂದಿದ್ದಾರೆ.
ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿ
ಕೃಷಿ ಕ್ಷೇತ್ರದ ಸಮಗ್ರ ಪ್ರಗತಿಯ ದೃಷ್ಟಿಯಿಂದ ಹಲವು ಯೋಜನೆಗಳನ್ನು ತರಲಾಗಿದೆ. ಅದೇ ರೀತಿ ಹೈದರಾಬಾದ್- ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಭಾಗಗಳ ನಿರುದ್ಯೋಗಿ ಯುವಕರಿಗೆ ಮತ್ತು ಸ್ಥಳೀಯ ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ.
ಮೊಬೈಲ್ಗಳು ಮತ್ತು ಪರಿಕರಗಳ ಮೇಲಿನ ಸುಂಕವನ್ನು ಶೇಕಡಾ 15 ಕ್ಕೆ ಕಡಿತಗೊಳಿಸಲಾಗಿದೆ. ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇಕಡಾ 6 ಕ್ಕೆ ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ಕ್ಕೆ ಇಳಿಸಲಾಗಿದೆ ಎಂದು ಹೇಳಿದರು.