ಬಿಜೆಪಿ- ಜೆಡಿಎಸ್‌ ಅಭ್ಯರ್ಥಿ ಪರ ಪ್ರಚಾರ

| Published : Mar 20 2024, 01:15 AM IST / Updated: Mar 20 2024, 09:14 AM IST

ಸಾರಾಂಶ

ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಗೂ ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಗೂ ಅಜಗಜಾಂತರ ವ್ಯತ್ಯಾಸ ಇದೆ. ಜಾತ್ಯತೀತ ಜನತಾದಳ ಮತ್ತು ಭಾರತೀಯ ಜನತಾ ಪಕ್ಷ ಒಮ್ಮನಸ್ಸಿನಿಂದ ಒಟ್ಟಾಗಿ ಶ್ರಮಿಸಿದರೆ ಗೆಲವು ಖಚಿತ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಿದರು ಸಹ ಅವರ ಪರ ಬೆಂಬಲಕ್ಕೆ ನಿಂತು ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ನಮಗೆ ವರಿಷ್ಠರ ಸೂಚಿಸಿದ್ದು, ಅವರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಮಾಜಿ ಶಾಸಕ ಹಾಗೂ ಜಾತ್ಯತೀತ ಜನತಾದಳ ಮುಖಂಡ ಕೆ.ಪಿ. ಬಚ್ಚೇಗೌಡ ತಿಳಿಸಿದರು. 

ಮೈತ್ರಿ ಅಭ್ಯರ್ಥಿ ಪರ ಪ್ರಚಾರ: ಈಗ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿರುವ ಕಾರಣ ಮೈತ್ರಿ ಅಭ್ಯರ್ಥಿ ಯಾರೇ ಸ್ಪರ್ಧಿಸಿದರೂ ಸಹ ನಾವು ಮೈತ್ರಿ ಧರ್ಮದ ಪ್ರಕಾರ ನಡೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿಯೂ ಸಹ ನಾವು ವರಿಷ್ಠರ ತೀರ್ಮಾನಕ್ಕೆ ಕಾಯುತ್ತಿದ್ದೇವೆ ಎಂದು ಹೇಳಿದರು. 

10 ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಜಾತ್ಯತೀತ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತಾವು ವಿವಿಧ ಕಾರಣಗಳಿಂದಾಗಿ ಸುಮಾರು 20,000 ಮತಗಳಿಗೆ ತೃಪ್ತಿ ಪಟ್ಟಿಕೊಳ್ಳಬೇಕಾಯಿತು. ಆದರೂ ಕ್ಷೇತ್ರದಲ್ಲಿ ಜಾತ್ಯತೀತ ಜನತಾದಳಕ್ಕೆ ತನ್ನದೇ ಆದ ಮತ ಬ್ಯಾಂಕ್ ಇರುವುದು ಸ್ಪಷ್ಟವಾಗಿತ್ತು ಎಂದು ಹೇಳಿದರು.

ಒಮ್ಮನಸ್ಸಿನಿಂದ ಶ್ರಮಿಸಬೇಕು: ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಗೂ ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಗೂ ಅಜಗಜಾಂತರ ವ್ಯತ್ಯಾಸ ಇದೆ. ಜಾತ್ಯತೀತ ಜನತಾದಳ ಮತ್ತು ಭಾರತೀಯ ಜನತಾ ಪಕ್ಷ ಒಮ್ಮನಸ್ಸಿನಿಂದ ಒಟ್ಟಾಗಿ ಶ್ರಮಿಸಿದರೆ ಇಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ. 

ಭಾರತೀಯ ಜನತಾ ಪಕ್ಷದ ಮುಖಂಡರುಗಳು ಸಹ ಜಾತ್ಯಾತೀತ ಜನತಾದಳ ಪಕ್ಷವನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದೆ ಗೌರವಹಿತವಾಗಿ ನಡೆಸಿಕೊಳ್ಳಬೇಕು ಹಾಗಾದಾಗ ಮಾತ್ರ ಮೈತ್ರಿ ಅಭ್ಯರ್ಥಿಯ ಗೆಲುವು ಸಾಧ್ಯವಾಗುತ್ತದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.