ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನ

| Published : Nov 05 2023, 01:15 AM IST

ಸಾರಾಂಶ

ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನ,ಯಾರೋ ಹೇಳಿದ ಮಾತ್ರಕ್ಕೆ ಬದಲಾವಣೆ ಸಾಧ್ಯವಿಲ್ಲ: ಶಾಸಕ ಕೆ.ಎಂ.ಉದಯ್

ಯಾರೋ ಹೇಳಿದ ಮಾತ್ರಕ್ಕೆ ಬದಲಾವಣೆ ಸಾಧ್ಯವಿಲ್ಲ: ಶಾಸಕ ಕೆ.ಎಂ.ಉದಯ್ ಕನ್ನಡಪ್ರಭ ವಾರ್ತೆ ಮದ್ದೂರು

ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಅಂತಿಮ ತೀರ್ಮಾನವೇ ಹೊರತು ಯಾರೋ ಹೇಳಿದ ಮಾತ್ರಕ್ಕೆ ಬದಲಾವಣೆ ಸಾಧ್ಯವಿಲ್ಲ ಎಂದು ಶಾಸಕ ಕೆ.ಎಂ. ಉದಯ್ ಸಚಿವ ಪರಮೇಶ್ವರ್ ಪರ ಬೆಂಬಲ ಸೂಚಿಸಿದ್ದ ಸಹಕಾರ ಸಚಿವ ಕೆ.ಎಂ.ರಾಜಣ್ಣಗೆ ಟಾಂಗ್ ನೀಡಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಆಯ್ಕೆಗೆ ತನ್ನದೇ ಆದ ಮಾನದಂಡವಿರುತ್ತದೆ. ಅದಕ್ಕೆ ಅನುಗುಣವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು.

ಯಾರೋ ಹೇಳಿಕೆ ನೀಡಿದರೆಂಬ ಕಾರಣಕ್ಕೆ ಮುಖ್ಯಮಂತ್ರಿಯಾಗುವುದಿಲ್ಲ. ದಲಿತರು ಮುಖ್ಯಮಂತ್ರಿಯಾಗಲು ಈ ಹಿಂದೆ ಅವಕಾಶವಿತ್ತು. ಮುಖ್ಯಮಂತ್ರಿ ಮಾಡುವುದು ಬಿಡುವುದು ಹೈಕಮಾಂಡ್ ತೀರ್ಮಾನ ಎಂದು ಹೇಳುವ ಮೂಲಕ ದಲಿತ ಸಿಎಂ ವಿಚಾರವನ್ನು ತಳ್ಳಿ ಹಾಕಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಲು ಎಲ್ಲ ಅರ್ಹತೆ ಇದೆ. ಮುಂದಿನ ದಿನಗಳಲ್ಲಿ ಅವರೇ ಮುಖ್ಯಮಂತ್ರಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಕೆಪಿಸಿಸಿ ಅಧ್ಯಕ್ಷರಾದ ನಂತರ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ವಿಶ್ರಾಂತಿ ಇಲ್ಲದೆ ಸಾಕಷ್ಟು ಶ್ರಮಿಸಿದ್ದಾರೆ. ಹೀಗಾಗಿ ಅವರಿಗೆ ಅವಕಾಶ ಸಿಗಬೇಕು ಎನ್ನುವುದು ನನ್ನ ಬಯಕೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮವಾಗಿ ಆಡಳಿತ ನೀಡುತ್ತಿದ್ದಾರೆ. ಸಮರ್ಥವಾಗಿ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ಎಸ್.ಎಂ.ಕೃಷ್ಣ ಸುದೀರ್ಘ ಆಡಳಿತದ ನಂತರ ಸಿದ್ದರಾಮಯ್ಯ ಪೂರ್ಣವಾಗಿ ಅಧಿಕಾರ ನಿರ್ವಹಿಸಿದ್ದರು. ಅವರ ಅನುಭವದ ಆಡಳಿತ ಈಗ ಕಾಣುತ್ತಿವೆ. ಅದೇ ರೀತಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ ಎಂದರು.

ರಾಜ್ಯದಲ್ಲಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಘಟನೆಗೆ ದುಡಿದು 138 ಸ್ಥಾನಗಳನ್ನು ಪಡೆದುಕೊಳ್ಳಲು ಯಶಸ್ವಿಯಾಗಿದ್ದಾರೆ. ಅವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದಾಗಿನಿಂದಲೂ ಸೋಲಿಲ್ಲದ ಸರದಾರ ಎಂದು ಖ್ಯಾತರಾಗಿದ್ದಾರೆ. ಅವರೇ ಮುಖ್ಯಮಂತ್ರಿಯಾದರೆ ರಾಜ್ಯದಲ್ಲಿ ಕಾಂಗ್ರೆಸ್ ಗಟ್ಟಿಯಾಗಿ ಬೇರೂರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಇಂತಿಯಾಜ್, ಹೊಂಬಯ್ಯ ಮತ್ತಿತರರಿದ್ದರು.

4ಕೆಎಂಎನ್ ಡಿ17

ಮದ್ದೂರು ಪುರಸಭೆ ವ್ಯಾಪ್ತಿ ಜನಸಂಪರ್ಕ ಸಭೆಗೆ ಆಗಮಿಸಿದ್ದ ಶಾಸಕ ಕೆ.ಎಂ.ಉದಯ್ ಅವರನ್ನು ಅಭಿನಂದಿಸಲಾಯಿತು.