ಸಿದ್ದು, ಡಿಕೆಶಿ, ಸಚಿವರಿಗೆ ಹೈಕಮಾಂಡ್‌ ಬುಲಾವ್‌

| Published : Dec 15 2023, 01:30 AM IST

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಕೆಲ ಸಚಿವರಿಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಬುಲಾವ್‌ ಬಂದಿದ್ದು, ಡಿ. 18ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ದೆಹಲಿಗೆ ಬರುವಂತೆ ಕಾಂಗ್ರೆಸ್‌ನ ಕೇಂದ್ರ ನಾಯಕರು ಸೂಚಿಸಿದ್ದಾರೆ.

- ಡಿ.18ರಿಂದ 20ರವರೆಗೆ ಕೇಂದ್ರ ನಾಯಕರ ಜತೆ ಸಭೆ

- ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಬಗ್ಗೆ ಚರ್ಚೆಕನ್ನಡಪ್ರಭ ವಾರ್ತೆ ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಕೆಲ ಸಚಿವರಿಗೆ ಕಾಂಗ್ರೆಸ್‌ ಹೈಕಮಾಂಡ್‌ನಿಂದ ಬುಲಾವ್‌ ಬಂದಿದ್ದು, ಡಿ. 18ರಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.ಲೋಕಸಭೆ ಚುನಾವಣೆ, ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ ಸೇರಿದಂತೆ ಮತ್ತಿತರ ವಿಚಾರಗಳ ಕುರಿತು ಚರ್ಚೆ ನಡೆಸಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌, ಬಿ.ಎಸ್‌. ಸುರೇಶ್‌ ಸೇರಿದಂತೆ ಕೆಲ ಸಚಿವರನ್ನು ದೆಹಲಿಗೆ ಬರುವಂತೆ ಕಾಂಗ್ರೆಸ್‌ನ ಕೇಂದ್ರ ನಾಯಕರು ಸೂಚಿಸಿದ್ದಾರೆ.

ಈ ಕುರಿತು ಖುದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲ ಅವರು ಸಿಎಂ, ಡಿಸಿಎಂ ಹಾಗೂ ಕೆಲ ಸಚಿವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಡಿ. 18ರಂದು ದೆಹಲಿಗೆ ತೆರಳಲಿರುವ ನಾಯಕರು, ಡಿ. 20ರವರೆಗೆ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಡಿ. 21ರಂದು ಎಲ್ಲ ನಾಯಕರು ದೆಹಲಿಯಿಂದ ಬೆಂಗಳೂರಿಗೆ ವಾಪಾಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏನು ಚರ್ಚೆ?:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರೊಂದಿಗೆ ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಮತ್ತಿತರ ವಿಚಾರಗಳ ಬಗ್ಗೆ ಮೂರು ದಿನಗಲ ಕಾಲ ಚರ್ಚೆ ನಡೆಯಲಿದೆ. ಈ ವೇಳೆ ನಿಗಮ-ಮಂಡಳಿ ಅಧ್ಯಕ್ಷರ ಆಯ್ಕೆ, ಅದರಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕಾಗುವ ಲಾಭದ ಬಗ್ಗೆಯೂ ಸಮಾಲೋಚಿಸಲಾಗುತ್ತದೆ. ಹಾಗೆಯೇ, ಗ್ಯಾರಂಟಿ ಯೋಜನೆಗಳ ಜಾರಿ, ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ರಾಜ್ಯದಲ್ಲಾಗಿರುವ ಬದಲಾವಣೆ ಬಗ್ಗೆಯೂ ಕೇಂದ್ರ ನಾಯಕರು ವರದಿ ಪಡೆಯುವ ಸಾಧ್ಯತೆಗಳಿವೆ.