ಸಾರಾಂಶ
ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ನೇಮಕ ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಹಾರಾಷ್ಟ್ರದಲ್ಲಿ ಬಿಜೆಪಿ ಶಾಸಕರ ಕಚೇರಿಗಳಲ್ಲಿ ಆರೆಸ್ಸೆಸ್ ಕಾರ್ಯಕರ್ತರನ್ನು ನೇಮಿಸಿಕೊಂಡಿಲ್ಲವಾ ಎಂದು ನೇಮಕ ಪ್ರಶ್ನಿಸಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ವಿಧಾನಸಭೆ : ಗ್ಯಾರಂಟಿ ಅನುಷ್ಠಾನ ಸಮಿತಿಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ನೇಮಕ ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಹಾರಾಷ್ಟ್ರದಲ್ಲಿ ಬಿಜೆಪಿ ಶಾಸಕರ ಕಚೇರಿಗಳಲ್ಲಿ ಆರೆಸ್ಸೆಸ್ ಕಾರ್ಯಕರ್ತರನ್ನು ನೇಮಿಸಿಕೊಂಡಿಲ್ಲವಾ ಎಂದು ನೇಮಕ ಪ್ರಶ್ನಿಸಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಜೊತೆಗೆ ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗ ತನ್ನ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದು ಸರ್ಕಾರದ ನಡೆ ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಲ್ಲಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರ ನೇಮಕಕ್ಕೆ ಆಕ್ಷೇಪಿಸಿ ಮಂಗಳವಾರ ದಿನವಿಡೀ ದರಣಿ ನಡೆಸಿದ್ದ ಬಿಜೆಪಿ ಸದಸ್ಯರು ಬುಧವಾರ ಬೆಳಗ್ಗೆಯೂ ದರಣಿ ಮುಂದುವರೆಸಿದರು. ಹೀಗಾಗಿ ಸದನದಲ್ಲಿ ಉತ್ತರ ನೀಡಿದ ಸಿದ್ದರಾಮಯ್ಯ ಈ ತಿರುಗೇಟು ನೀಡಿದರು. ಯಾವುದೇ ತಪ್ಪಿಲ್ಲ:
‘ಮಹಾರಾಷ್ಟ್ರ ಬಿಜೆಪಿ ಸರ್ಕಾರ ಸಚಿವರ ಆಪ್ತ ಸಹಾಯಕರನ್ನಾಗಿ ಹಾಗೂ ಎಲ್ಲಾ ಶಾಸಕರ ಕಚೇರಿಗಳಿಗೂ ಆರೆಸ್ಸೆಸ್ ಕಾರ್ಯಕರ್ತರನ್ನು ನೇಮಿಸಿಕೊಂಡು ಸರ್ಕಾರದಿಂದ ವೇತನ ನೀಡಲಾಗುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಕಾರ್ಯಕರ್ತರನ್ನು ಗ್ಯಾರಂಟಿ ಸಮಿತಿಗೆ ನೇಮಕ ಮಾಡಿಕೊಂಡಿದ್ದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು.
ನಮ್ಮ ಸರ್ಕಾರದ ತೀರ್ಮಾನದಲ್ಲಿ ಯಾವುದೇ ತಪ್ಪಿಲ್ಲ. ಇದು ಹಿಂದಿನಿಂದ ನಡೆದುಕೊಂಡು ಬರುತ್ತಿರುವ ಪದ್ಧತಿ. ಮಾಜಿ ಸಂಸದರಾದ ಬಸವರಾಜ ಪಾಟೀಲ್ ಸೇಡಂರನ್ನು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷರನ್ನಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿತ್ತು. ಹೀಗಾಗಿ ಯಾವುದೇ ಕಾರಣಕ್ಕೂ ಸಮಿತಿಗಳ ನೇಮಕದಲ್ಲಿ ಬದಲಾವಣೆಯಿಲ್ಲ ಎಂದು ತಿರುಗೇಟು ನೀಡಿದರು.
ಶಾಸಕರ ಘನತೆಗೆ ಚ್ಯುತಿಯಿಲ್ಲ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವಿಚಾರದಲ್ಲಿ ಜಿಲ್ಲೆ, ತಾಲೂಕುಗಳಲ್ಲಿ ಶಾಸಕರ ಘನತೆ, ಅಧಿಕಾರಕ್ಕೆ ಯಾವುದೇ ಚ್ಯುತಿ ಬರುವುದಿಲ್ಲ. ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಕಾರ್ಯನಿರ್ವಹಣಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ. ಅಧಿವೇಶನ ಮುಗಿಯುತ್ತಿದ್ದಂತೆ ಗ್ಯಾರಂಟಿ ಸಮಿತಿಗೆ ಸಂಬಂಧಿಸಿ ನೈಜ ಸಮಸ್ಯೆಗಳಿದ್ದರೆ ಶಾಸಕರ ಸಭೆ ಕರೆದು ಬಗೆಹರಿಸುವಂತ ಕೆಲಸ ಮಾಡುತ್ತೇನೆ. ಸಮಿತಿಯಿಂದ ಶಾಸಕರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸದನದ ಬಾವಿಗಿಳಿದ ಬಿಜೆಪಿ ಸದಸ್ಯರು: ಮಂಗಳವಾರ ಇಡೀ ದಿನ ಬಿಜೆಪಿ ಸದಸ್ಯರು ಪ್ರತಿಭಟನೆ ಮುಂದುವರೆಸಿದ್ದರಿಂದ ದಿನದ ಕಲಾಪ ಬಲಿಯಾಗಿತ್ತು. ಬುಧವಾರ ಬೆಳಗ್ಗೆ ಕಲಾಪ ಆರಂಭ ಆಗುತ್ತಿದ್ದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರದ್ಧತಿಗೆ ಆಗ್ರಹಿಸಿ ಪ್ರತಿಪಕ್ಷಗಳು ಮತ್ತೆ ಸದನದ ಬಾವಿಗಿಳಿದರು. ಸ್ಪೀಕರ್ ಮನವೊಲಿಕೆ ಯತ್ನ ವಿಫಲವಾದ ಹಿನ್ನೆಲೆಯಲ್ಲಿ ಮ.1.45 ಗಂಟೆಗೆ ಕಲಾಪ ಮುಂದೂಡಲಾಯಿತು.
ಮಧ್ಯಾಹ್ನದ ಕಲಾಪ ವೇಳೆಯೂ ಬಿಜೆಪಿ ಸದಸ್ಯರು ಹೋರಾಟ ಮುಂದುವರೆಸಲೆತ್ನಿಸಿದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ ಹಿನ್ನೆಲೆಯಲ್ಲಿ ಸಮಾಧಾನಗೊಂಡು ಪ್ರತಿಭಟನೆ ಕೈಬಿಟ್ಟರು. ಶಾಸಕರ ಘನತೆಗೆ ಚ್ಯುತಿ-ಅಶೋಕ್: ಇದಕ್ಕೂ ಮೊದಲು ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಜನರ ತೆರಿಗೆ ಹಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರಿಗೆ ವೇತನ ನೀಡಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸುವ ಮೂಲಕ ಶಾಸಕರ ಘನತೆಗೆ ಚ್ಯುತಿ ತಂದಿದ್ದು, ಇದು ಕಾನೂನು ಬಾಹಿರ ಕ್ರಮ. ಬೇಕಿದ್ದರೆ ಕಾಂಗ್ರೆಸ್ ಪಕ್ಷ ಭಿಕ್ಷೆ ಬೇಡಿ ಸಮಿತಿಗೆ ಹಣ ಕೊಡಲಿ. ಗ್ಯಾರಂಟಿ ಸಮಿತಿಯಿಂದ ಬಿಜೆಪಿ ಶಾಸಕರು ಮಾತ್ರವಲ್ಲ, ಎಲ್ಲ ಶಾಸಕರ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ ಎಂದು ದೂರಿದರು.