ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕಾಂಗ್ರೆಸ್‌ ನಾಯಕರು ನಿಸ್ಸೀಮರು: ಚಿ.ನಾ.ರಾಮು ಆಕ್ರೋಶ

| Published : May 28 2025, 02:05 AM IST

ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕಾಂಗ್ರೆಸ್‌ ನಾಯಕರು ನಿಸ್ಸೀಮರು: ಚಿ.ನಾ.ರಾಮು ಆಕ್ರೋಶ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ನಾಯಕರು ಸುಳ್ಳು ಸುದ್ದಿಗಳನ್ನು ಹಬ್ಬಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕಾಂಗ್ರೆಸ್ ನಾಯಕರು ಸುಳ್ಳು ಸುದ್ದಿಗಳನ್ನು ಹಬ್ಬಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಮುಖಾಂತರ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ಧ ಉದ್ದೇಶ ಪೂರ್ವಕವಾಗಿ ಅಪಪ್ರಚಾರ ಮಾಡಿರುವುದನ್ನು ಖಂಡಿಸುವುದಾಗಿ ಹೇಳಿದರು.

ಕಾಂಗ್ರೆಸ್‌ನವರು ಬೇಕೆಂದೇ ಅಪಪ್ರಚಾರ ಮಾಡುತ್ತಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರು ಮತಾಂತರ ಆಗಿದ್ದರು ಎಂದು ನಾನು ಯಾವಾಗಲೂ ಹೇಳಿಲ್ಲ. ಅವರು ನಿಜವಾಗಲೂ ಹಿಂದೂಗಳೇ, ಅಲ್ಲದೇ ನನ್ನ ನನ್ನ ಸಂಬಂಧಿ ಹಾಗೂ ನಮ್ಮ ತಾಲೂಕಿನವರು. ಅವರು ಹಿಂದೂ ಆಗಿಯೇ ಇರುತ್ತಾರೆ. ಸದಾಕಾಲ ಹಿಂದುತ್ವದ ಬಗ್ಗೆ ಮತ್ತು ದೇಶದ ಬಗ್ಗೆ ಕಾಳಜಿ ಇರುವವರಾಗಿದ್ದಾರೆ ಎಂದರು.

ಬಿಜೆಪಿ ಪಕ್ಷವು ದಲಿತರಾದ ಛಲವಾದಿ ನಾರಾಯಣಸ್ವಾಮಿ ಅವರಿಗೆ ವಿಧಾನ ಪರಿಷತ್‌ ಸದಸ್ಯತ್ವ ನೀಡಿ ವಿರೋಧ ಪಕ್ಷದ ನಾಯಕ ಸ್ಥಾನವನ್ನೂ ನೀಡಿದೆ. ಹೀಗಾಗಿ ಕಾಂಗ್ರೆಸ್ಸಿಗರು ಛಲವಾದಿ ನಾರಾಯಣಸ್ವಾಮಿ ಅವರ ಕೆಲಸಗಳನ್ನು ಸಹಿಸಲಾಗದೆ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ದಲಿತ ಯುವ ಸಮುದಾಯ ಬಿಜೆಪಿಯನ್ನು ಬೆಂಬಲಿಸುತ್ತಿದೆ. ಆದರೆ, ಕಾಂಗ್ರೆಸ್ಸಿಗರು ನಾಟಕ ಆಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಜನ ಕಾಂಗ್ರೆಸ್ ಕ್ಷಮಿಸಲ್ಲ:

ಛಲವಾದಿ ನಾರಾಯಣಸ್ವಾಮಿ ಅವರನ್ನು ಗುರಿ ಮಾಡಿ ದೌರ್ಜನ್ಯ ಮಾಡಿದ್ದು, ದಿಗ್ಬಂಧನ ಮಾಡಿದ್ದು ಖಂಡನೀಯ. ಕಾಂಗ್ರೆಸ್ಸಿಗರು ಹತಾಶರಾಗಿದ್ದಾರೆ. ಸುಳ್ಳು ಗ್ಯಾರಂಟಿಗಳಿಂದ ಗೆದ್ದು ಬಂದು ನಾವು ಹೇಳಿದ್ದೇ ನಡೆಯಲಿದೆ ಎಂದು ದೌರ್ಜನ್ಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದ ಅವರು, ಕಾಲ ಹೀಗೆ ಇರುವುದಿಲ್ಲ. ಜನ ಕಾಂಗ್ರೆಸ್ಸನ್ನು ಕ್ಷಮಿಸಲ್ಲ. ಇಂದು ದಲಿತ ಸಮುದಾಯ ಬಿಜೆಪಿಯನ್ನು ಸಂಪೂರ್ಣವಾಗಿ ಅಪ್ಪಿಕೊಂಡಿದೆ. ಯುವ ಸಮುದಾಯ ಬಿಜೆಪಿ ಪರವಾಗಿದೆ ಎಂದರು.