ಕಾಲ್ತುಳಿತ ಪ್ರಕರಣದ ಬಗ್ಗೆ ಕಾಂಗ್ರೆಸ್‌ ವರಿಷ್ಠರಿಗೆ ಮಾಹಿತಿ : ಅಸಮಾಧಾನ

| N/A | Published : Jun 11 2025, 04:56 AM IST

Siddaramaiah action About Stampede Case
ಕಾಲ್ತುಳಿತ ಪ್ರಕರಣದ ಬಗ್ಗೆ ಕಾಂಗ್ರೆಸ್‌ ವರಿಷ್ಠರಿಗೆ ಮಾಹಿತಿ : ಅಸಮಾಧಾನ
Share this Article
  • FB
  • TW
  • Linkdin
  • Email

ಸಾರಾಂಶ

ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಜು.4ರಂದು ನಡೆದ ಕಾಲ್ತುಳಿತದ ಬಗ್ಗೆ ಕಾಂಗ್ರೆಸ್‌ ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ನವದೆಹಲಿ: ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಜು.4ರಂದು ನಡೆದ ಕಾಲ್ತುಳಿತದ ಬಗ್ಗೆ ಕಾಂಗ್ರೆಸ್‌ ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಎಐಸಿಸಿ ನಾಯಕರ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಕರೆಸಿ ಪಕ್ಷ ಸಂಘಟನೆ ವಿಚಾರವಾಗಿ, ರಾಜ್ಯ ರಾಜಕಾರಣ ಹಾಗೂ ಇತ್ತೀಚಿನ ಕಾಲ್ತುಳಿತ ಪ್ರಕರಣದ ಬಗ್ಗೆ ಚರ್ಚೆ ಮಾಡಿದರು ಎಂದು ಹೇಳಿದರು.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚೆಯಾಯಿತೇ ಎಂದು ಕೇಳಿದಾಗ, ಈ ವಿಚಾರವಾಗಿ ಚರ್ಚೆ ಮಾಡಲಾಯಿತು. ಈ ದುರ್ಘಟನೆಯನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಬಗ್ಗೆ ವರಿಷ್ಠರಿಗೆ ಸಂಪೂರ್ಣ ಮಾಹಿತಿ ನೀಡಿ ಸತ್ಯಾಸತ್ಯತೆಯನ್ನು ವಿವರಿಸಿದ್ದೇವೆ ಎಂದು ತಿಳಿಸಿದರು.ಸಚಿವ ಸಂಪುಟ ಮರುವಿಂಗಡಣೆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದ ಅವರು, ವಿಧಾನ ಪರಿಷತ್ ಸ್ಥಾನಕ್ಕೆ ನಾಮನಿರ್ದೇಶನದ ವಿಚಾರವಾಗಿ ಹೈಕಮಾಂಡ್ ಪರಿಶೀಲಿಸಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಲಿದೆ ಎಂದು ತಿಳಿಸಿದರು.

ಆರ್‌ಸಿಬಿ ಕಾಲ್ತುಳಿತ; ಸರ್ಕಾರದ ವಿರುದ್ಧ ಕಾಂಗ್ರೆಸ್‌ ಹೈ ಕಮಾಂಡ್‌ ಅಸಮಾಧಾನ

ನವದೆಹಲಿ: ಬೆಂಗಳೂರಿನಲ್ಲಿ ನಡೆದ, ಐಪಿಎಲ್‌ ವಿಜೇತ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ 11 ಅಮಾಯಕರ ಬಲಿ ಪಡೆದ ಕಾಲ್ತುಳಿತದ ಬಗ್ಗೆ ರಾಜ್ಯದಲ್ಲಿ ಸರ್ಕಾರದ ಪಾಲಿಗೆ ಕಂಟಕಪ್ರಾಯವಾಗಿರುವ ಹೊತ್ತಿನಲ್ಲಿ, ಕಾಂಗ್ರೆಸ್‌ ಹೈಕಮಾಂಡ್‌ ಕೂಡಾ, ವಿಜಯೋತ್ಸವದಲ್ಲಿ ರಾಜ್ಯ ಸರ್ಕಾರ ಭಾಗಿಯಾಗಿದ್ದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಮಂಗಳವಾರ ಇಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿಯಾಗಿದ್ದರು.

ಈ ಭೇಟಿ ವೇಳೆ ‘ಆರ್‌ಬಿಐ ತಂಡದ ಐಪಿಎಲ್‌ ವಿಜಯಯಾತ್ರೆಯಲ್ಲಿ ರಾಜ್ಯ ಸರ್ಕಾರವೂ ಭಾಗಿಯಾಗಿದ್ದರ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಕುಂಭಮೇಳ ಮತ್ತು ಶಬರಿಮಲೆ ಕಾಲ್ತುಳಿತ ನಡೆದಾಗ ಅದರ ಬಗ್ಗೆ ಉತ್ತರಪ್ರದೇಶದ ಬಿಜೆಪಿ ಅಥವಾ ಕೇರಳದ ಎಡಪಂಥೀಯ ಸರ್ಕಾರದಂತೆ ಮಾಡದೆ, ಕರ್ನಾಟಕ ಸರ್ಕಾರ ಜನರ ವಿಷಯದಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು. ಕಾಂಗ್ರೆಸ್ ಪಕ್ಷದ ಪಾಲಿಗೆ ಜನರು ಬಹಳ ಮೌಲ್ಯಯುತವಾದವರು. ಸರ್ಕಾರ ಜನರ ಪರವಾಗಿರಬೇಕು’ ಎಂದು ರಾಹುಲ್‌ ಹೇಳಿದ್ದಾರೆ ಎನ್ನಲಾಗಿದೆ.

3 ತಾಸಿನ ಸಭೆ ಬಳಿಕ ಮಾತನಾಡಿದ ವೇಣುಗೋಪಾಲ್‌, ‘ಕರ್ನಾಟಕ ಸರ್ಕಾರವು ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಘಟನೆ ಬಗ್ಗೆ ವರದಿ ಸಲ್ಲಿಸುವಂತೆ ಪಕ್ಷದ ಕೇಂದ್ರ ನಾಯಕರು ಆದೇಶಿಸಿದ್ದಾರೆ’ ಎಂದು ಹೇಳಿದ್ದಾರೆ.

Read more Articles on