ಸಿಎಂ ಸಿದ್ದರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಯತ್ನ : ಕಾಂಗ್ರೆಸ್ ಸರ್ಕಾರವನ್ನು ಅಭದ್ರ ಗೊಳಿಸುವ ಹುನ್ನಾರ

| Published : Aug 19 2024, 12:58 AM IST / Updated: Aug 19 2024, 04:22 AM IST

ಸಾರಾಂಶ

ಕಾಂಗ್ರೆಸ್ ಸರ್ಕಾರವನ್ನು ಅಭದ್ರ ಗೊಳಿಸುವ ಹುನ್ನಾರ ನಡೆದಿದೆ. ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ಧ ವಿನಾಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ನಡೆದಿದೆ

 ಗೌರಿಬಿದನೂರು : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್‌ ಅವರ ನಡೆ ಸಂವಿಧಾನ ವಿರೋಧಿ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು, ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಯನ್ನು ತಕ್ಷಣ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ಕುರುಬ ಸಂಘ ಮತ್ತು ಸಂಗೊಳ್ಳಿರಾಯಣ್ಣ ಯುವಸೇನೆ ವತಿಯಿಂದ ಭಾನುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ತಾಲೂಕು ಕುರುಬ ಸಂಘದ ಅಧ್ಯಕ್ಷ ಬಲರಾಮ್ ಮಾತನಾಡಿ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದಾರೆ, ಕಾನೂನು ಗಾಳಿಗೆ ತೂರಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಇದು ಕಾನೂನು ಬಾಹಿರ ಖಂಡನೀಯ ಎಂದರು.

ರಾಜಕೀಯವಾಗಿ ಮುಗಿಸುವ ಯತ್ನ

ಪ್ರಮಾಣಿಕ ರಾಜಕಾರಣಿ, ಅಹಿಂದ ವರ್ಗಗಳ ನಾಯಕ, ನಿಷ್ಕಳಂಕ ವ್ಯಕ್ತಿತ್ವವನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದು ಸಿದ್ದರಾಮಯ್ಯನವರನ್ನು ರಾಜಕೀಯವಾಗಿ ಮುಗಿಸಲು ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ನಡೆಸಿರುವ ರಾಜಕೀಯ ಷಡ್ಯಂತ್ರವೆಂದು ಕೂಡಲೆ ವಾಪಸ್ ಪಡೆಯಬೇಕು ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಸಂಗೊಳ್ಳಿರಾಯಣ್ಣ ಯುವಸೇನೆ ತಾಲ್ಲೂಕು ಅಧ್ಯಕ್ಷ ನಾಗರಾಜು ಮಾತನಾಡಿ ಚುನಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರವನ್ನು ಅಭದ್ರ ಗೊಳಿಸುವ ಹುನ್ನಾರ ನಡೆದಿದೆ. ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಿದ್ದರಾಮಯ್ಯ ವಿರುದ್ಧ ವಿನಾಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ಪರವಾಗಿ ಹೈಕಮಾಂಡ್ ಮತ್ತು ಕರ್ನಾಟಕದ ಜನತೆ ಇದೆ ದುರುದ್ದೇಶಪೂರ್ವಕ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವ ಉದ್ದೇಶ ಹೊಂದಿದೆ ಎಂದರು.

ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಯತ್ನ

ತಮ್ಮ ನಲವತ್ತು ವರ್ಷಗಳ ರಾಜಕಾರಣದಲ್ಲಿ ಸಿದ್ದರಾಮಯ್ಯನವರು ಇಲ್ಲಿಯವರೆಗೂ ಪ್ರಾಮಾಣಿಕವಾಗಿ ಜನಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ.ಶೋಷಿತ ವರ್ಗಗಳ ಧ್ವನಿಯಾಗಿ,ಅಹಿಂದ ವರ್ಗಗಳ ನಾಯಕರಾಗಿರುವ ಸಿದ್ದರಾಮಯ್ಯನವರ ಜನಪ್ರಿಯತೆಯನ್ನು ಸಹಿಸದೆ ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುವ ಮೂಲಕ ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಕಪ್ಪುಮಸಿ ಬಳಿಯಲು ರಾಜಕೀಯ ವಿರೋಧಿಗಳು ಕುತಂತ್ರ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರತಿಭಟನಾ ಮೆರವಣಿಗೆ ನಗರದ ತಾಲೂಕು ಕುರುಬರ ಸಂಘದಿಂದ ಪ್ರಾರಂಭವಾಗಿ,ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಬಿ.ಹೆಚ್ ರಸ್ತೆಯ ಮೂಲಕ ಸಾಗಿ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾಕಾರರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಯನ್ನು ನಡೆಸಿದರು.

ಪ್ರತಿಭಟನೆಯಲ್ಲಿ ಕುರುಬರ ಸಂಘದ ತಾಲೂಕು ಉಪಾಧ್ಯಕ್ಷ ಬಲರಾಮ್,ವಕೀಲರಾದ ರಂಗರಾಜು,ರಂಗನಾಥ ಬಾಬು,ಭಕ್ತರಹಳ್ಳಿ ಚಂದ್ರಣ್ಣ,ಕಾದಲವೇಣಿ ಬಾಲಕೃಷ್ಣ,ನಿವೃತ್ತ ಶಿಕ್ಷಕ ಲಿಂಗಪ್ಪ,ಜೀಲಾಕುಂಟೆ ಗಂಗಾಧರಪ್ಪ,ನಾಗರಾಜ್,ನಾಗಸಂದ್ರದ ಶ್ರೀನಾಥ್, ರಾಮು ಹಾಗೂ ಇನ್ನಿತರರು ಭಾಗವಹಿಸಿದ್ದರು.