ಸಾರಾಂಶ
ಬೆಂಗಳೂರು : ‘ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯ ನಿರ್ವಹಿಸಬೇಕು. ಇದಕ್ಕೆ ಶಕ್ತಿಯಾಗಿ ಇಡೀ ದಲಿತ ಸಮುದಾಯ ನಿಮ್ಮ ಬೆನ್ನಿಗೆ ಇರಲಿದೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಮ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ. ಕೆಲ ಜನರಿಗೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಆದ್ದರಿಂದಲೇ ಅನಗತ್ಯವಾಗಿ ಟೀಕೆ, ಆರೋಪ ಮಾಡಿ ಎದೆಗುಂದಿಸುವ ಕೆಲಸ ಮಾಡುತ್ತಿದ್ದಾರೆ. ಎಲ್ಲ ವರ್ಗದ ಜನರು ಮೆಚ್ಚಿಕೊಳ್ಳುವ ರೀತಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಬಗ್ಗೆ ಕೆಲವರಲ್ಲಿ ಸಹಜವಾಗಿ ಅಸೂಯೆ ಉಂಟಾಗಿದೆ. ಆದ್ದರಿಂದ ಸುಳ್ಳು ಆರೋಪಗಳಲ್ಲಿ ಕೆಲ ದುಷ್ಟ ಶಕ್ತಿಗಳು ತೊಡಗಿವೆ ಎಂದು ಹರಿಹಾಯ್ದರು.
ಇಂತಹ ಯಾವುದೇ ಟೀಕೆಗಳಿಗೆ ಸಿದ್ದರಾಮಯ್ಯ ಎದೆಗುಂದಬೇಕಿಲ್ಲ. 2013-18 ಅವಧಿಯಲ್ಲಿ ಸ್ವತಂತ್ರವಾಗಿ ನಡೆಸಿದ ಆಡಳಿತ ಮರುಕಳಿಸಲಿ. ಐದು ವರ್ಷಗಳ ಕಾಲ ನನ್ನನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗದ ಖಾತೆ ಸಚಿವರಾಗಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ಕೊಟ್ಟಿದ್ದರು. ಸಿದ್ದರಾಮಯ್ಯ ಅವರ 2013-18 ಆಡಳಿತ ದಲಿತರ ಪಾಲಿಗೆ ಸುವರ್ಣ ಯುಗವಾಗಿತ್ತು. ಸಚಿವನಾಗಿ ಹಾಸ್ಟೆಲ್ ನಿರ್ಮಾಣ ಸೇರಿ ನೂರಾರು ಜನಪರ ಕೆಲಸ ಮಾಡಿದ್ದೇನೆ ಎಂದರು.
ಲೋಕಸಭಾ ಮಾಜಿ ಸ್ಪೀಕರ್ ಮೀರಾಕುಮಾರಿ, ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ ಸೇರಿದಂತೆ ಹಲವು ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಹಾಜರಿದ್ದರು.