ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಂತರ್ಜಲಮಟ್ಟ ಒಂದು ಸಾವಿರ ಅಡಿಗೂ ಕೆಳಗೆ ಕುಸಿದಿದ್ದು, ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಕೊಳವೆ ಬಾವಿ ಕೊರೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

 ಬೆಂಗಳೂರು : ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಂತರ್ಜಲಮಟ್ಟ ಒಂದು ಸಾವಿರ ಅಡಿಗೂ ಕೆಳಗೆ ಕುಸಿದಿದ್ದು, ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರ ಕೊಳವೆ ಬಾವಿ ಕೊರೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಜಲಜೀವನ್ ಅಭಿಯಾನ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿ ಹಲವು ಕಡೆ 1000 ಅಡಿ ಕೊರೆದರೂ ನೀರು ಬರುವುದಿಲ್ಲ. ನೀರು ಸಿಕ್ಕರೂ ಕುಡಿಯಲೂ ಯೋಗ್ಯವಾಗಿರುವುದಿಲ್ಲ. ಹಲವು ಕೊಳವೆ ಬಾವಿಗಳು ನಿಷ್ಕ್ರಿಯವಾಗುತ್ತಿವೆ. ಹೀಗಾಗಿ ಸಾಧ್ಯವಾದಷ್ಟೂ ಮೇಲ್ಮೈ ನೀರು ಪೂರೈಕೆಗೆ ಆದ್ಯತೆ ನೀಡಿ, ಅನಿವಾರ್ಯವಾದಲ್ಲಿ ಮಾತ್ರ ಭೂಗರ್ಭ ಶಾಸ್ತ್ರಜ್ಞರ ಅಭಿಪ್ರಾಯ ಪಡೆದು ಕೊಳವೆ ಬಾವಿ ಕೊರೆಸಿ ಎಂದು ಆದೇಶ ನೀಡಿದರು.

ಜಿ ರಾಮ್‌ ಜಿ ಯೋಜನೆ ಬಳಕೆ:

ಗ್ರಾಪಂ ವ್ಯಾಪ್ತಿಯಲ್ಲಿ ಈಗಾಗಲೇ ಕೊರೆಸಲಾಗಿರುವ, ಸಕ್ರಿಯವಾಗಿರುವ ಮತ್ತು ಬತ್ತಿಹೋಗಿರುವ ಕೊಳವೆ ಬಾವಿಗಳ ಮರುಪೂರಣಕ್ಕೆ ವಿಬಿ ಜಿ ರಾಮ್ ಜಿ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಿದರು.

ರಾಜ್ಯದಲ್ಲಿ ಮಳೆ ಕೊರತೆಯಿಂದ ಜುಲೈ ತಿಂಗಳಲ್ಲಿ 766 ಗ್ರಾಪಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿತ್ತು. ಈಗ ಮಳೆಯಾಗುತ್ತಿರುವುದರಿಂದ ಈ ಸಂಖ್ಯೆ 747ಕ್ಕೆ ಇಳಿಕೆಯಾಗಿದೆ. ಪ್ರಸ್ತುತ 138 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿರುವುದಾಗಿ ಅಧಿಕಾರಿಗಳು ಸಭೆಗೆ ತಿಳಿಸಿದರು.

ಯಾವುದೇ ಗ್ರಾಮದಿಂದ ಕುಡಿಯುವ ನೀರಿನ ಸಮಸ್ಯೆ ಕುರಿತು ದೂರು ಬಂದರೆ 24 ಗಂಟೆಯೊಳಗೆ ಪರಿಹರಿಸಲು ಇಲ್ಲವೇ ಟ್ಯಾಂಕರ್ ಮೂಲಕ ನೀರು ಪೂರೈಸಲು ಈಶ್ವರ ಖಂಡ್ರೆ ಸೂಚಿಸಿದರು. ಸಭೆಯಲ್ಲಿ ಇಲಾಖೆ ಕಾರ್ಯದರ್ಶಿ ಡಿ. ರಂದೀಪ್, ಆಯುಕ್ತರಾದ ಫೌಜಿಯಾ ತರನ್ನುಂ ಮತ್ತಿತರರು ಪಾಲ್ಗೊಂಡಿದ್ದರು.

- ಸಾಧ್ಯವಾದಷ್ಟು ನೀರು ಪೂರೈಕೆಗೆ ಆದ್ಯತೆ ನೀಡಿ

- ನಿಷ್ಕ್ರಿಯ ಬೋರ್‌ವೆಲ್‌ಗಳ ಮರುಪೂರ್ಣಕ್ಕೆ ಕ್ರಮ

- ಇದಕ್ಕಾಗಿ ಜಿ ರಾಮ್ ಜಿ ಯೋಜನೆ ಬಳಸಿ: ಸಚಿವ

- ‘ಜಲಜೀವನ್‌’ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ