ಸಾರಾಂಶ
ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ತನ್ನದೇ ಅದ ದೊಡ್ಡ ಕೊಡುಗೆ ನೀಡಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಶಕ್ತಿ, ಗೃಹ ಲಕ್ಷ್ಮಿ ಯೋಜನೆಗಳ ಮೂಲಕ ಕಾಂಗ್ರೆಸ್ ಸರ್ಕಾರ ಹೆಣ್ಣುಮಕ್ಕಳ ಸಬಲೀಕರಣಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.ರಾಷ್ಟ್ರೀಯ ಹೆಣ್ಣು ಮಗು ದಿನದ ಅಂಗವಾಗಿ ಮಾಧ್ಯಮ ಹೇಳಿಕೆ ನೀಡಿರುವ ಸಚಿವೆ, ಸಮಾಜ ಸದೃಢವಾಗಬೇಕೆಂದರೆ ಮೊದಲು ಹೆಣ್ಣು ಸ್ವಾವಲಂಬಿಯಾಗಬೇಕು. ಅದಕ್ಕಾಗಿಯೇ ಕಾಂಗ್ರೆಸ್ ಸರ್ಕಾರ ಹೆಣ್ಣು ಮಕ್ಕಳ ಅಭ್ಯುದಯಕ್ಕಾಗಿ ಸಾಕಷ್ಟು ಶ್ರಮಿಸುತ್ತಿದೆ. ಗ್ಯಾರಂಟಿ ಯೋಜನೆಗಳು ರಾಜ್ಯದ ಮಹಿಳೆಯರ ಸಶಕ್ತೀಕರಣಕ್ಕೆ ಸಹಕಾರಿಯಾಗಿವೆ. ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಪೌಷ್ಠಿಕತೆಗೆ ಸರ್ಕಾರ ಹಲವು ಕಾರ್ಯಕ್ರಮಗಳನ್ನೂ ಅನುಷ್ಠಾನಗೊಳಿಸಿದ್ದು, ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಯಾದ ಶಕ್ತಿ ಅಡಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಬಸ್ಗಳಲ್ಲಿ 140 ಕೋಟಿಗೂ ಹೆಚ್ಚಿನ ಹೆಣ್ಣು ಮಕ್ಕಳು ಪ್ರಯಾಣಿಸಿದ್ದಾರೆ. ಈ ಯೋಜನೆಯಿಂದಲೇ ಸಣ್ಣ ಉದ್ಯೋಗ ಮಾಡುತ್ತಿರುವ, ಉದ್ದಿಮೆ ನಡೆಸುತ್ತಿರುವ ಹೆಣ್ಣು ಮಕ್ಕಳಿಗೆ ಸಾಕಷ್ಟು ನೆರವಾಗಿದೆ. ಅದೇ ರೀತಿ ಗೃಹ ಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು 1.21 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ ₹2 ಸಾವಿರನಂತೆ ಮಾಸಿಕ ಒಟ್ಟು ₹2,300 ಕೋಟಿ ಜಮೆ ಮಾಡಲಾಗುತ್ತಿದೆ. ಇದು ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿ ಮಾಡಿದೆ ಎಂದು ತಿಳಿಸಿದ್ದಾರೆ.