ಸಾರಾಂಶ
ಮೈಸೂರು : ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶಗಳು ದೊರೆಯಬೇಕು. ಸಮಾಜದಲ್ಲಿ ಇರುವ ಆರ್ಥಿಕ ಅಸಮಾನತೆ ಹೋಗಲಾಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವು ಯೋಜನೆ ಹಾಗೂ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯ್ತಿ ನಂಜನಗೂಡು ತಾಲೂಕು ಹದಿನಾರು ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 1107.72 ಕೋಟಿ ರು. ಮೌಲ್ಯದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವರುಣ ಕ್ಷೇತ್ರದಲ್ಲಿ 1107.72 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲಾ ಯಾವುದೇ ಜಾತಿ ಧರ್ಮವನ್ನು ಪರಿಗಣಿಸದೆ ಎಲ್ಲಾ ಜಾತಿಯ ಬಡವರು, ರೈತರು, ಮಹಿಳೆಯರು, ಆರ್ಥಿಕವಾಗಿ ಹಿಂದುಳಿದವರ ಏಳಿಗೆಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ನಾನು 2013ರಲ್ಲಿ ಚುನಾವಣಾ ಸಂದರ್ಭದಲ್ಲಿ 163 ಭರವಸೆ ನೀಡಿದ್ದೆವು. ಇದರಲ್ಲಿ 158 ಭರವಸೆ ಈಡೇರಿಸಿದ್ದೇವೆ. ರೈತರ ಬಡವರ ಪರ ಶೋಷಿತರ ಪರ ಕೆಲಸ ಮಾಡಿದ್ದೇವೆ. 2023ರ ಚುನಾವಣಾ ಸಂದರ್ಭದಲ್ಲಿ 5 ಗ್ಯಾರಂಟಿ ಯೋಜನೆ ನೀಡುವುದಾಗಿ ಭರವಸೆ ನೀಡಿದ್ದೆವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ ಹಾಗೂ ಯುವನಿಧಿ ಗ್ಯಾರೆಂಟಿ ಯೋಜನೆ ಜಾರಿಗೆ ತಂದು ಬಡವರ ಏಳಿಗೆಗೆ ಆರ್ಥಿಕ ಅಸಮಾನತೆ ಹೋಗಲಾಡಿಸಲು ಕ್ರಮ ವಹಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 55 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಮೇಲೆ ಕರ್ನಾಟಕದ ತಲಾ ಆದಾಯದಲ್ಲಿ ಮೊದಲ ಸ್ಥಾನದಲ್ಲಿ ಇದೆ. ಗ್ಯಾರಂಟಿ ಯೋಜನೆಗಳಿಂದ ಜನರ ಕೈಗೆ ಹಣ ಸಿಕ್ಕಿ ಆರ್ಥಿಕ ಚಟುವಟಿಕೆಗಳು ಹೆಚ್ಚಾದವು. ಇದರಿಂದ ತಲಾ ಆದಾಯ ಹೆಚ್ಚಾಗಿದೆ. ಜಿಎಸ್ಟಿ ತೆರಿಗೆ ಪಾವತಿಯಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿ ಇದೆ. ಮಹಾರಾಷ್ಟ್ರ ರಾಜ್ಯ ಮೊದಲ ಸ್ಥಾನದಲ್ಲಿ ಇದೆ. ನಾವು 2023ರ ಚುನಾವಣೆಗೆ ಮೊದಲು 542 ಭರವಸೆ ನೀಡಿದ್ದೆವು. ಅದರಲ್ಲಿ 242 ಭರವಸೆ ಈಡೇರಿಸಿದ್ದೇವೆ. ನಮ್ಮದು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ರೇಷ್ಮೆ ಹಾಗೂ ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್, ಚಾಮರಾಜನಗರ ಸಂಸದ ಸುನೀಲ್ ಬೋಸ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ವಿಧಾನ ಪರಿಷತ್ತು ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಡಿ. ತಿಮ್ಮಯ್ಯ, ಹದಿನಾರು ಗ್ರಾಪಂ ಅಧ್ಯಕ್ಷೆ ಸಣ್ಣತಾಯಮ್ಮ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್ ಮೊದಲಾದವರು ಇದ್ದರು.ನಾನು 1983ರಲ್ಲಿ ಮೊದಲ ಬಾರಿ ಪಕ್ಷೇತರನಾಗಿ ಗೆದ್ದು ಶಾಸಕನಾಗಿ, ಅದೇ ವರ್ಷ ಸಚಿವನಾದೆ. ನಾನು ಸಚಿವನಾಗಿ 41 ವರ್ಷಗಳಾಗಿವೆ. ನಾನು 5 ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆದ್ದಿದ್ದೇನೆ. ಅವರಿಗೂ ನನ್ನ ಧನ್ಯವಾದಗಳು. 2 ಬಾರಿ ವರುಣ ಕ್ಷೇತ್ರದಲ್ಲಿ ಗೆದ್ದಿದ್ದೇನೆ. ವರುಣ ಕ್ಷೇತ್ರದಲ್ಲಿ ಗೆದ್ದ ಎರಡು ಬಾರಿಯೂ ಮುಖ್ಯಮಂತ್ರಿ ಆಗಿದ್ದೇನೆ. ಇದಕ್ಕೆ ನಾನು ವರುಣ ಕ್ಷೇತ್ರದ ಜನತೆಗೆ ಚಿರ ಋಣಿಯಾಗಿರುತ್ತೇನೆ.
- ಸಿದ್ದರಾಮಯ್ಯ, ಮುಖ್ಯಮಂತ್ರಿ
ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 1107.72 ಕೋಟಿ ರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ. ಇದು ಒಂದು ಸುವರ್ಣ ಸಂದರ್ಭ. ಇದು ನಮ್ಮ ಕ್ಷೇತ್ರ ನಮ್ಮ ಮನೆ. ನಮ್ಮ ಸರ್ಕಾರ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ನಾವು ಬಡವರಿಗಾಗಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ಅಲ್ಲದೇ, ಅಭಿವೃದ್ಧಿ ಕಾಮಗಾರಿಗಳಿಗೂ ಹಣ ನೀಡಲಾಗುತ್ತದೆ. ನಮ್ಮ ಸರ್ಕಾರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎಂಬುದನ್ನು ತೋರಿಸಲಾಗುತ್ತಿದೆ.
- ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನಪರಿಷತ್ತು ಸದಸ್ಯ
ಯದುವೀರ್ಗೆ ಟಿಕೆಟ್ ನೀಡಿದಾಗ ರಾಜಮನೆತನದ ಬಗ್ಗೆ ಗೌರವ ಎಲ್ಲಿ ಹೋಗಿತ್ತು: ಸುನಿಲ್ ಬೋಸ್
ನಂಜನಗೂಡು : ಸಮಾಜ ಕಲ್ಯಾಣ ಇಲಾಖೆ ಎಚ್.ಸಿ.ಮಹದೇವಪ್ಪ ಅವರು ರಾಜಮನೆತನಕ್ಕೆ ಅವಮಾನ ಮಾಡಿದ್ದಾರೆ ಎಂದು ಹೇಳುವ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಚುನಾವಣೆ ವೇಳೆ ಯದುವೀರ್ ಅವರಿಗೆ ಟಿಕೆಟ್ ನೀಡಿದ್ದಲ್ಲಿ ಜನರು ಬೀದಿಗೆ ನಿಲ್ಲಬೇಕಾಗುತ್ತದೆ ಎಂಬ ಹೇಳಿಕೆ ನೀಡಿದಾಗ ರಾಜಮನೆತನದ ಬಗ್ಗೆ ಗೌರವ ಎಲ್ಲಿ ಹೋಗಿತ್ತು ಎಂದು ಸಂಸದ ಸುನಿಲ್ ಬೋಸ್ ಪ್ರಶ್ನಿಸಿದ್ದಾರೆ.
ತಾಲೂಕಿನ ಹದಿನಾರು ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ವರುಣ ಕ್ಷೇತ್ರ ವ್ಯಾಪ್ತಿಯ 1107.72 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ನನ್ನ ತಂದೆ ಎಚ್.ಸಿ.ಮಹದೇವಪ್ಪ ಅವರು ಇತಿಹಾಸವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ನಿಜ ಹೇಳಿದ್ದಾರೆ, ಹೇಳಿಕೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ರಾಜಮನೆತನಕ್ಕೆ ಅವಮಾನ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ, ಇದೇ ಲೋಕಸಭೆ ಚುನಾವಣೆಯ ವೇಳೆ ಅವರಿಗೆ ಟಿಕೆಟ್ ಕೈತಪ್ಪಿದಾಗ ರಾಜರಿಗೆ ಟಿಕೆಟ್ ನೀಡಿದಲ್ಲಿ ಜನರು ರಾಜ ಜನರ ಕೈಗೆ ಸಿಗುವುದಿಲ್ಲ, ಜನರು ಅರಮನೆಯ ಮುಂದೆ ಬಿಸಿಲಿನಲ್ಲಿ ಬೀದಿಯಲ್ಲಿ ನಿಲ್ಲಬೇಕಾಗುತ್ತದೆ, ನಾನು ಜನ ಸೇವಕನಾಗಿದ್ದು, ಪ್ರತಿದಿನ ಜನರ ಕೈಗೆ ಸಿಗುತ್ತೇನೆ ಎಂದು ಹೇಳಿಕೆ ನೀಡಿದಾಗ ರಾಜಮನೆತನದ ಬಗ್ಗೆ ಇದ್ದ ಗೌರವ ಎಲ್ಲಿ ಹೋಗಿತ್ತು ಎಂದು ಅವರಿಗೆ ಈ ವೇದಿಕೆಯ ಮೂಲಕ ಕೇಳಲು ಬಯಸುತ್ತೇನೆ ಎಂದರು.