ಎಸ್‌.ಟಿ.ಸೋಮಶೇಖರ್, ಹೆಬ್ಬಾರ್‌ ಉಚ್ಚಾಟನೆ ಸ್ವಾಗತಾರ್ಹ: ಬಿ.ವೈ.ವಿಜಯೇಂದ್ರ

| Published : May 27 2025, 11:55 PM IST / Updated: May 27 2025, 11:56 PM IST

ಸಾರಾಂಶ

ಪಕ್ಷ ವಿರೋಧಿ ಚಟುವಟಿಕೆ, ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ನಡೆದುಕೊಂಡ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಉಚ್ಚಾಟನೆ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಪಕ್ಷ ವಿರೋಧಿ ಚಟುವಟಿಕೆ, ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ನಡೆದುಕೊಂಡ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಉಚ್ಚಾಟನೆ ಕ್ರಮ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಇಬ್ಬರು ಶಾಸಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಘಟಕ ಕೋರಿತ್ತು. ಆ ಪ್ರಕಾರ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಇಬ್ಬರನ್ನೂ ಉಚ್ಚಾಟನೆ ಮಾಡಿದೆ ಎಂದು ವಿವರಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸೋಮಶೇಖರ್ ಮತ್ತು ಹೆಬ್ಬಾರ್ ಅವರು ಏನು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆಂದು ಅವರಿಬ್ಬರಿಗೂ ಹಾಗೂ ಕೇಂದ್ರ ನಾಯಕತ್ವಕ್ಕೆ ಗೊತ್ತಿದೆ. ಇದರ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಷ್ಟೊಂದು ನೋವು ಅಥವಾ ಬೇಸರಪಟ್ಟುಕೊಳ್ಳುವ ಅಗತ್ಯವಿಲ್ಲ. ಇದು ಪಕ್ಷದ ತೀರ್ಮಾನ ಎಂದು ತಿಳಿಸಿದರು.

ಬಿಜೆಪಿ ಸರ್ಕಾರ ಬಂದ ನಂತರ ಅವರಿಬ್ಬರಿಗೂ ಉತ್ತಮ ಅವಕಾಶ ಲಭಿಸಿತ್ತು. ಆದರೆ ಸರ್ಕಾರ ಇಲ್ಲದಿದ್ದಾಗ, ಪ್ರತಿಪಕ್ಷದಲ್ಲಿದ್ದಾಗ ಅವರಿಗೆ ಸ್ವಲ್ಪ ಸಮಸ್ಯೆ ಆಗಿದೆ ಎಂದು ಕಾಣುತ್ತದೆ. ಅವರಿಬ್ಬರ ಕುರಿತು ರಾಜ್ಯ ಕೋರ್ ಕಮಿಟಿ ಸಭೆಯಲ್ಲೂ ಚರ್ಚೆ ಆಗಿತ್ತು. ಅವರಿಗೆ ನೋಟಿಸ್ ಕೊಡಲಾಗಿತ್ತು. ಅವರು ಕೊಟ್ಟ ಉತ್ತರದ ಕುರಿತು ಮಾಹಿತಿ ಇಲ್ಲ ಎಂದು ವಿಜಯೇಂದ್ರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.