ಏಳು ಪಾಲಿಕೆಗಳವರೆಗೆ ವಿಭಜನೆ ಮಾಡಲು ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

| N/A | Published : Apr 25 2025, 01:47 AM IST / Updated: Apr 25 2025, 04:18 AM IST

thavar chand gehlot
ಏಳು ಪಾಲಿಕೆಗಳವರೆಗೆ ವಿಭಜನೆ ಮಾಡಲು ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರು ಮಹಾನಗರ ಪಾಲಿಕೆಯನ್ನು ಒಂದರಿಂದ ಏಳು ಪಾಲಿಕೆಗಳವರೆಗೆ ವಿಭಜನೆ ಮಾಡಲು ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕಕ್ಕೆರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಅಂಕಿತ ಹಾಕಿದ್ದು, ಅಧಿಕೃತ ರಾಜ್ಯಪತ್ರ ಹೊರ ಬಿದ್ದಿದೆ.

  ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆಯನ್ನು ಒಂದರಿಂದ ಏಳು ಪಾಲಿಕೆಗಳವರೆಗೆ ವಿಭಜನೆ ಮಾಡಲು ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕಕ್ಕೆರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಅಂಕಿತ ಹಾಕಿದ್ದು, ಅಧಿಕೃತ ರಾಜ್ಯಪತ್ರ ಹೊರ ಬಿದ್ದಿದೆ.

ಈ ಮೂಲಕ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಗ್ರೇಟರ್‌ ಬೆಂಗಳೂರು ಆಡಳಿತ ಪ್ರಾಧಿಕಾರ ರಚನೆಯಾಗಲಿದೆ. ಅದರಡಿ ಬಿಬಿಎಂಪಿ ವಿಭಜನೆ ಮಾಡಿ ವಿವಿಧ ಪಾಲಿಕೆಗಳನ್ನು ರಚಿಸಲು ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕದ ಅಡಿ ಅವಕಾಶ ದೊರೆತಿದೆ. ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಅಂಗೀಕಾರ ಮಾಡಿ ಕಳುಹಿಸಿದ್ದ ವಿಧೇಯಕವನ್ನು ವಿವರಣೆ ಕೋರಿ ರಾಜ್ಯಪಾಲರು ಮಾ.27 ರಂದು ರಾಜ್ಯ ಸರ್ಕಾರಕ್ಕೆ ವಾಪಸು ಕಳುಹಿಸಿದ್ದರು. ವಿಧೇಯಕ ಸಂಬಂಧ ಹೆಚ್ಚುವರಿ ವಿವರಣೆಗಳನ್ನು ಕೇಳಿ ಮರು ಸಲ್ಲಿಕೆ ಮಾಡಲು ವಾಪಸು ಕಳುಹಿಸಿದ್ದರು.

ದೆಹಲಿಯಲ್ಲಿ ಏಳು ಪಾಲಿಕೆಗಳಾಗಿ ಪ್ರತ್ಯೇಕಗೊಳಿಸಿರುವ ಪ್ರಯೋಗ ವಿಫಲವಾಗಿದೆ. ಜತೆಗೆ ಇದು ಸಂವಿಧಾನದ 74ನೇ ತಿದ್ದುಪಡಿಗೆ ವಿರೋಧವಿದ್ದು, ಆಡಳಿತ ವಿಕೇಂದ್ರೀಕರಣದ ಬದಲು ಸರ್ಕಾರ ಸ್ಥಳೀಯ ಸಂಸ್ಥೆಗಳಲ್ಲಿ ಹಸ್ತಕ್ಷೇಪ ಮಾಡಿದಂತಾಗಲಿದೆ.ಜತೆಗೆ ಟನರ್‌ ರಸ್ತೆ, ಸ್ಕೈ ಡೆಕ್‌, ಎಕ್ಸ್‌ಪ್ರೆಸ್ ಕಾರಿಡಾರ್‌ನಂತಹ ಯೋಜನೆಗಳಿಗೆ ಅವರ ವಿರೋಧವಿದೆ. ಹೀಗಾಗಿ ಇದನ್ನು ಪುನರ್‌ ಪರಿಶೀಲಿಸಿ ವಿವರಣೆ ನೀಡಿ ಎಂದು ರಾಜ್ಯಪಾಲರು ವಾಪಸು ಕಳುಹಿಸಿದ್ದರು. ವಿಧೇಯಕ ಸಂಬಂಧ ರಾಜ್ಯ ಸರ್ಕಾರವು ಸಂಪೂರ್ಣ ವಿವರಣೆಯೊಂದಿಗೆ ರಾಜ್ಯಪಾಲರಿಗೆ ಪುನಃ ಅನುಮೋದನೆಗೆ ಮಂಡಿಸಿತ್ತು.

ಇದೀಗ ರಾಜ್ಯಪಾಲರು ವಿಧೇಯಕಕ್ಕೆ ಅಂಕಿತ ಹಾಕಿದ್ದು, ಏ.24 ರಂದು ಗುರುವಾರ ರಾಜ್ಯ ಸರ್ಕಾರವು ಅಧಿಕೃತ ರಾಜ್ಯಪತ್ರ ಹೊರಡಿಸಿದೆ.

ಜನಸಂಖ್ಯೆ ಹೆಚ್ಚಾಗಿದ್ದು, ನಗರ ವಿಸ್ತರಣೆಯಾಗುತ್ತಿದೆ:

ಬೆಂಗಳೂರಿನ ಜನಸಂಖ್ಯೆ ಸುಮಾರು 1.5 ಕೋಟಿ ತಲುಪಿದೆ. 786 ಚ.ಕಿಮೀ ವಿಸ್ತೀರ್ಣದ ಬೆಂಗಳೂರು ನಗರವು ವಿಸ್ತರಣೆಯಾಗುತ್ತಿದೆ. ಒಬ್ಬ ಮೇಯರ್‌ ಮತ್ತು ಆಯುಕ್ತರಿಂದ ನಿರ್ವಹಣೆ ಮಾಡಲಾಗದು. ಆಡಳಿತ ಹತೋಟಿಗೆ ಸಿಗುತ್ತಿಲ್ಲ. ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಪಾರದರ್ಶಕತೆ ಮತ್ತು ಸಮರ್ಥ ಆಡಳಿತದ ದೃಷ್ಟಿಯಿಂದ ಅಧಿಕಾರ ವಿಕೇಂದ್ರೀಕರಣ ಆಗಬೇಕು. ಹೀಗಾಗಿ, ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಅಗತ್ಯವಿದೆ ಎಂದು ವಿಧೇಯಕದಲ್ಲಿ ಕರ್ನಾಟಕ ಸರ್ಕಾರ ತನ್ನ ನಿಲುವು ತಿಳಿಸಿತ್ತು.