ಸಾರಾಂಶ
ಬೆಂಗಳೂರು : ಇನ್ನೊಂದು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಎಷ್ಟು ಪಾಲಿಕೆಗಳು ಇರುತ್ತವೆ ಎಂಬುದನ್ನು ಅಂತಿಮಗೊಳಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಶುಕ್ರವಾರ ಬಿಬಿಎಂಪಿ ಗಾಜಿನ ಮನೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 53 ಮಂದಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕೆಂಪೇಗೌಡರು ಹಾಕಿಕೊಟ್ಟಿರುವ ಅಡಿಪಾಯದ ಮೇಲೆ ನಾವು ನಡೆಯುತ್ತಿದ್ದೇವೆ. ಗ್ರೇಟರ್ ಬೆಂಗಳೂರು ಮೂಲಕ ಜನರಿಗೆ ಇನ್ನಷ್ಟು ಉತ್ತಮ ಸೇವೆ ನೀಡುತ್ತೇವೆ. ನಗರದ ಮೂಲಸೌಕರ್ಯಗಳ ಉನ್ನತೀಕರಣಕ್ಕಾಗಿ 1 ಲಕ್ಷ ಕೋಟಿ ರು. ಮೊತ್ತದ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು.
ಸಂಚಾರ ದಟ್ಟಣೆ ನಿವಾರಣೆಗಾಗಿ ಸುರಂಗ ಯೋಜನೆ, ಫ್ಲೈಓವರ್ಗಳ ನಿರ್ಮಾಣ, ಪ್ರವಾಸಿ ತಾಣವಾಗಿ ಸ್ಕೈಡೆಕ್, ತ್ಯಾಜ್ಯ ನಿರ್ವಹಣೆ ಘಟಕಗಳ ಸ್ಥಾಪನೆ ಸೇರಿದಂತೆ ಅನೇಕ ಬೃಹತ್ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಜನರ ಪ್ರೀತಿ ಸಿಗಬೇಕೆಂದರೆ ಅವರ ಹೃದಯದಲ್ಲಿ ಸ್ಥಾನ ಪಡೆಯಬೇಕು. ಉತ್ತಮ ಕೆಲಸ ಮಾಡಿದರೆ ಮಾತ್ರ ಜನರ ಹೃದಯದಲ್ಲಿ ಸ್ಥಾನ ಸಿಗುತ್ತದೆ. ಆಗ ನಮ್ಮನ್ನು ನೆನಪಿನಲ್ಲಿಟ್ಟುಕೊಳ್ಳುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಶಾಸಕರಾದ ಜೆ. ಎಸ್. ಪಾಟೀಲ್, ಅಶೋಕ್ ರೈ, ಬಿಬಿಎಂಪಿ ಆಯುಕ್ತ ಮಹೇಶ್ವರ್ ರಾವ್ ಮತ್ತಿತರರು ಉಪಸ್ಥಿತರಿದ್ದರು.