ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರು
ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಸವಲತ್ತು ಹಾಗೂ ಯೋಜನೆಗಳನ್ನು ಅರ್ಹ ಜನರಿಗೆ ತಲುಪಿಸಲು ಜನಪ್ರತಿನಿಧಿಗಳು ಜವಾಬ್ದಾರಿ ವಹಿಸಬೇಕು. ಮೋದಿಯವರು ಜನಪರವಾದ ೧೯೭ಕ್ಕೂ ಹೆಚ್ಚು ವಿಶಿಷ್ಟ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಸಂಪೂರ್ಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನ ಆಗಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಹೇಳಿದರು.ಸ್ನೇಹ ಸಂಗಮ ಸಭಾಂಗಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ದಾವಣಗೆರೆ ಮತ್ತು ಮೈಸೂರು ವಿಭಾಗದ ನಗರಸಭಾ ಸದಸ್ಯರ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸದರು, ಜನಪ್ರತಿನಿಧಿಗಳು ಜನರೊಂದಿಗೆ ಬೆರೆಯಬೇಕು, ಅವರ ಸಮಸ್ಯೆಗಳನ್ನು ತಿಳಿದು ಸರ್ಕಾರದ ಗಮನಕ್ಕೆ ತಂದು ಬಗೆಹರಿಸುವ ಮೂಲಕ ಜನರ ಪ್ರೀತಿಗಳಿಸಿ, ಉತ್ತಮ ನಾಯಕರಾಗಿ ಬೆಳೆಯಲು ಅವಕಾಶವಿದೆ ಎಂದರು.
ನಗರ ಸಭೆಯಂತಹ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ನಿತ್ಯ ಜನರ ಸಂಪರ್ಕದಲ್ಲಿರುತ್ತಾರೆ, ಜನರ ಸಮಸ್ಯೆಗಳ ನೇರ ಅರಿವಿರುತ್ತದೆ. ಅವರ ತೊಂದರೆ ನಿವಾರಣೆಗೆ ಸ್ಪಂದಿಸಿ ಕೆಲಸ ಮಾಡಬೇಕು. ಸಾಮಾಜಿಕ ಸಮಸ್ಯೆಗಳ ನಿವಾರಣೆಗೆ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಜೊತೆಗೆ ಸಾಮಾಜಿಕ ಸಮಸ್ಯೆಗಳನ್ನು ತೊಡೆದುಹಾಕಲು ಕಾಳಜಿವಹಿಸಬೇಕು. ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ನಮ್ಮಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಸಾಲದು. ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂಬ ಬಗ್ಗೆ ಜನಪ್ರತಿನಿಧಿಗಳು ಜನರಿಗೆ ಮನವರಿಕೆ ಮಾಡಬೇಕು. ನಮ್ಮ ಆತ್ಮಕ್ಕೆ ಒಪ್ಪಿಗೆಯಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಜಿ.ಎಸ್.ಬಸವರಾಜು ಸಲಹೆ ಮಾಡಿದರು.ಜನಪ್ರತಿನಿಧಿಗಳು ಜನರೊಂದಿಗೆ ಬೆರೆತು ಕೆಲಸ ಮಾಡಿ, ಅವರ ವಿಶ್ವಾಸ ಗಳಿಸಿಕೊಂಡರೆ ಮುಂದಿನ ಚುನಾವಣೆಗಳನ್ನು ಪಕ್ಷ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರಲು ಅವಕಾಶವಾಗುತ್ತದೆ. ಜನಪ್ರತಿನಿಧಿಗಳು ಕಾಳಜಿಯಿಂದ ಕೆಲಸ ಮಾಡಬೇಕು ಎಂದರು.
ಪ್ರಶಿಕ್ಷಣ ಪ್ರಕೋಷ್ಟದ ರಾಜ್ಯ ಸಂಚಾಲಕ ವೈ.ಕುಮಾರ್ ಮಾತನಾಡಿ, ರಾಜ್ಯದ ವಿವಿಧ ಜನಪ್ರತಿನಿಧಿಗಳಿಗೆ ಬಿಜೆಪಿಯಿಂದ ಇಂತಹ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಮಾಡಲಾಗುತ್ತಿದೆ. ಇದೂವರೆಗೆ ಹತ್ತು ಸಾವಿರ ಪ್ರತಿನಿಧಿಗಳು ಇದರ ಪ್ರಯೋಜನ ಪಡೆದಿದ್ದಾರೆ. ಸದಾ ಜನರ ಸಂಪರ್ಕದಲ್ಲಿರುವ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಕಾರ್ಯ ಜವಾಬ್ದಾರಿಯೂ ಹೆಚ್ಚಾಗಿರುತ್ತದೆ ಹಾಗೂ ಜನಸಂಪರ್ಕ ಅವರಿಗೆ ಸಿಕ್ಕಿರುವ ಅವಕಾಶ ಕೂಡಾ, ಜನರೊಂದಿಗೆ ಸ್ಪಂದಿಸಿ ಕೆಲಸ ಮಾಡಿ ಎಂದು ಹೇಳಿದರು.ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು, ಸಾಮಾಜಿಕ ಜಾಲತಾಣ ನಿರ್ವಹಣೆ ಮತ್ತಿತರ ವಿಚಾರಗಳ ಬಗ್ಗೆ ಜನಪ್ರತಿನಿಧಿಗಳಿಗೆ ಮಾರ್ಗದರ್ಶನ ನೀಡಲಾಗುತ್ತದೆ. ಇದರ ಪ್ರಯೋಜನ ಪಡೆದು ಯಶಸ್ವಿ ಜನಪ್ರತಿನಿಧಿಗಳಾಗಬೇಕು ಎಂದು ತಿಳಿಸಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಪ್ರಶಿಕ್ಷಣ ಪ್ರಕೋಷ್ಟದ ರಾಜ್ಯ ಸಂಚಾಲಕ ಶ್ರೀಕಾಂತ ಕುಲಕರ್ಣಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ಬಿ.ನಂದೀಶ್, ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್, ಮಧುಗಿರಿ ಜಿಲ್ಲಾ ಅಧ್ಯಕ್ಷ ಬಿ.ಕೆ.ಮಂಜುನಾಥ್, ಮುಖಂಡ ದಿಲೀಪ್ಕುಮಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಟಿ.ಭೈರಪ್ಪ, ವಕ್ತಾರರಾದ ಜೆ.ಜಗದೀಶ್, ಟಿ.ಆರ್.ಸದಾಶಿವಯ್ಯ, ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೇದಮೂರ್ತಿ, ರೈತ ಮೋರ್ಚಾ ನಗರ ಅಧ್ಯಕ್ಷ ಸತ್ಯಮಂಗಲ ಜಗದೀಶ್ ಹಾಜರಿದ್ದರು.ಮೂರು ವಿಭಾಗ ಮಟ್ಟದ ಜಿಲ್ಲೆಗಳ ಸಂಸ್ಥೆಗಳ ನಗರಸಭಾ ಸದಸ್ಯರು ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಷಯ ಪರಿಣಿತರು ವಿವಿಧ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.