ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರು
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಬರದಿದ್ದರೆ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ. ಅವರ ಈ ಹೇಳಿಕೆ ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ತಿಪಟೂರಿನಲ್ಲಿ ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೆಚ್ಚಿನ ಸೀಟು ಬರದಿದ್ದರೆ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ.
ಹೀಗಾಗಿ, ಸದಾ ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯ ಅವರನ್ನು ಉಳಿಸಿಕೊಳ್ಳುವ ಕೆಲಸವನ್ನು ನಾವೆಲ್ಲ ಮಾಡಬೇಕು. ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನಾವೆಲ್ಲಾ ಶ್ರಮ ಪಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಶ್ರೀನಿವಾಸ್ ಮಾತಿನ ಹಿನ್ನೆಲೆ ತಿಳಿಯುತ್ತೇನೆ: ಗುಬ್ಬಿ ಶಾಸಕ ಶ್ರೀನಿವಾಸ್ ಯಾವ ಹಿನ್ನೆಲೆಯಲ್ಲಿ ಮಾತನಾಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಅದರ ಬಗ್ಗೆ ತಿಳಿದ ನಂತರ ಪ್ರತಿಕ್ರಿಯಿಸುತ್ತೇನೆ.- ಸಿದ್ದರಾಮಯ್ಯ ಮುಖ್ಯಮಂತ್ರಿ