ಪ್ರಧಾನಿ ನರೇಂದ್ರ ಮೋದಿ ಚಿಂತನೆಯಿಂದ ಭಾರತ ಆರ್ಥಿಕ ಶಕ್ತಿ : ಬಿ. ವೈ.ವಿಜಯೇಂದ್ರ

| N/A | Published : Mar 23 2025, 01:38 AM IST / Updated: Mar 23 2025, 04:15 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆ, ಕಾರ್ಯವೈಖರಿ ಭಾರತವನ್ನು ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವಂತೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

 ಬೆಂಗಳೂರು :  ಪ್ರಧಾನಿ ನರೇಂದ್ರ ಮೋದಿ ಅವರ ಚಿಂತನೆ, ಕಾರ್ಯವೈಖರಿ ಭಾರತವನ್ನು ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವಂತೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶನಿವಾರ ಅರಮನೆ ಮೈದಾನದಲ್ಲಿ ನಡೆದ ಬಿಹಾರ್‌ ದಿವಸ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವನಾಯಕರಾಗಿ ಹೊರಹೊಮ್ಮಿರುವುದು ಹೆಮ್ಮೆಯ ವಿಚಾರವಾಗಿದೆ. ಬಿಹಾರ- ಕರ್ನಾಟಕದ ಜನರ ಜತೆ ಸೇರಿ ಬಿಹಾರ ದಿವಸ್‌ ಆಚರಿಸುತ್ತಿರುವುದು ಸಂತಸದ ವಿಚಾರ. ಪ್ರಯಾಗ್‍ರಾಜ್‍ನ ಮಹಾ ಕುಂಭದಲ್ಲಿ ಬಿಹಾರದ ಜನರೂ ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಎಂದು ಹೇಳಿದರು.

ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ರಾಷ್ಟ್ರ. ವಿವಿಧ ಜಾತಿ, ಧರ್ಮದ ಜನರು ನೆಲೆಸಿದ್ದಾರೆ. ಹಲವು ಭಾಷೆಗಳಿದ್ದರೂ ಭಾರತವು ಅಖಂಡತೆಯನ್ನು ಉಳಿಸಿಕೊಂಡು ಸರ್ವಶ್ರೇಷ್ಠ ರಾಷ್ಟ್ರವಾಗಿದೆ. ನರೇಂದ್ರ ಮೋದಿ ಅವರು ಭಾರತವನ್ನು ವಿಕಸಿತ ಭಾರತವನ್ನಾಗಿ ಮಾಡಲು ಕಳೆದ 11 ವರ್ಷಗಳಿಂದ ಶ್ರಮಿಸುತ್ತಿದ್ದಾರೆ. ರಾಷ್ಟ್ರದ ಅಭಿವೃದ್ಧಿಯ ವಿಚಾರದಲ್ಲಿ ಅವರು ಸಮರ್ಥ ನಿರ್ಧಾರ ಕೈಗೊಂಡಿದ್ದಾರೆ. ಮೋದಿ ಅವರು ಪ್ರಧಾನಿಯಾಗುವ ಮೊದಲು ಭಾರತವು 11ನೇ ದೊಡ್ಡ ಆರ್ಥಿಕ ಶಕ್ತಿಯಾಗಿತ್ತು. ಇದೀಗ ಅದು ವಿಶ್ವದ 5ನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಬಿಹಾರದ ಜನತೆ ಮತ್ತು ಕನ್ನಡಿಗರು ಸೇರಿದಂತೆ ಎಲ್ಲ ರಾಜ್ಯದವರು ಸೇರಿ ಭಾರತವನ್ನು 2047ರ ವೇಳೆಗೆ ವಿಕಸಿತ ಭಾರತವನ್ನಾಗಿ ಮಾಡಲು ಶ್ರಮಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಹಾರದ ಸಂಸದ ವಿವೇಕ್ ಠಾಕೂರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಬಿಹಾರ ದಿವಸ್ ಉಸ್ತುವಾರಿ ಮುರುಗೇಶ್ ನಿರಾಣಿ, ಮಾಜಿ ಸಚಿವ ಡಾ। ಸಿ.ಎನ್.ಅಶ್ವತ್ಥನಾರಾಯಣ್, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಶರಣು ತಳ್ಳಿಕೆರೆ ಭಾಗವಹಿಸಿದ್ದರು.