ಸಾರಾಂಶ
ಬೆಂಗಳೂರು : ನಾಡಪ್ರಭು ಕೆಂಪೇಗೌಡರ ಚಿಂತನೆಗಳನ್ನು ಮೈಗೂಡಿಸಿಕೊಂಡು ರಾಜ್ಯದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಪ್ರಗತಿ ಹಾಗೂ ಸಮಾನತೆ ಮತ್ತು ಸಾಮರಸ್ಯಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸಲಹೆ ನೀಡಿದರು.
ಶುಕ್ರವಾರ ಅರಮನೆ ಮೈದಾನದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 516ನೇ ಜನ್ಮದಿನೋತ್ಸವದಲ್ಲಿ ಅವರು ಮಾತನಾಡಿದರು.
ನಾಡಪ್ರಭು ಕೆಂಪೇಗೌಡರು ವಿಜಯನಗರ ಸಾಮ್ರಾಜ್ಯದ ನಾಯಕರಾಗಿ ಕೆಲಸ ಮಾಡಿದರು, ಆದರೆ ಅವರ ಚಿಂತನೆಯು ಆಡಳಿತಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಅವರು ದಕ್ಷ ಆಡಳಿತಗಾರ, ನಗರ ಯೋಜಕ, ಸಮಾಜ ಸುಧಾರಕ, ಸಮಾನತೆ ಮತ್ತು ಸಾಮರಸ್ಯದ ಪ್ರವರ್ತಕ ಮತ್ತು ಧಾರ್ಮಿಕ ನಾಯಕರಾಗಿದ್ದರು ಎಂದು ಶ್ಲಾಘಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಕೆಂಪೇಗೌಡರ ಕಾಲದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಆಗಿವೆ. ಈ ನಗರ ವ್ಯಾಪಾರಗಳಿಗೆ ಮೂಲ ಕೇಂದ್ರವಾಗಿದೆ. ಅಕ್ಕಿಪೇಟೆ, ಬಳೆಪೇಟೆ ಸೇರಿದಂತೆ ಇತರೆಡೆಗಳಲ್ಲಿ ವ್ಯಾಪಾರ- ವಹಿವಾಟು ಇಂದಿಗೂ ನಡೆಯುತ್ತಿದ್ದು ಎಲ್ಲಾ ಜಾತಿ, ಮತ, ಪಂಥಗಳನ್ನು ಮೀರಿ ಜನರು ಒಟ್ಟಿಗೆ ಸೇರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದಾರೆ. ಇಂತಹ ಬೆಂಗಳೂರನ್ನು ಕಾಂಗ್ರೆಸ್ ನವರು ಒಡೆಯಲು ಹೊರಟಿದ್ದು ನಮ್ಮ ಬೆಂಗಳೂರನ್ನು ಉಳಿಸಬೇಕಿದೆ ಎಂದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಕೆಂಪೇಗೌಡರು ಬೆಂಗಳೂರನ್ನು ಒಡೆಯಲಿ ಎಂದು ಕಟ್ಟಲಿಲ್ಲ. ಆದರೆ, ಕಾಂಗ್ರೆಸ್ನವರು ಬೆಂಗಳೂರನ್ನು ಒಡೆಯಲು ಹೊರಟಿದ್ದಾರೆ. ದೇಶಕ್ಕೆ ಒಬ್ಬರೇ ಪ್ರಧಾನಿ, ರಾಜ್ಯಕ್ಕೆ ಒಬ್ಬರೇ ಮುಖ್ಯಮಂತ್ರಿ ಇದ್ದಂತೆ ಬೆಂಗಳೂರಿಗೆ ಒಬ್ಬರೇ ಮೇಯರ್ ಇರಬೇಕು. ಆದರೆ, ಕಾಂಗ್ರೆಸಿಗರಿಗೆ ಒಬ್ಬರೇ ಮೇಯರು ಸಾಕಾಗುವುದಿಲ್ಲವೆಂದು ಒಡೆಯಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಸಮಾರಂಭದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ, ಸ್ಪಟಿಕಪುರಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮಿ, ಕೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕ ಡಾ.ಅಶ್ವತ್ಥನಾರಾಯಣ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಸೇರಿದಂತೆ ಮತ್ತಿತರರು ಇದ್ದರು. ಇದೇ ವೇಳೆ ಸಾಧಕರನ್ನು ಸನ್ಮಾನಿಸಲಾಯಿತು.