ಸಿಎಂ ಆರೋಪ ಹಿಂಪಡೆಯದಿದ್ದರೆ ಗಾಂಧಿ ಪ್ರತಿಮೆ ಮುಂದೆ ಧರಣಿ: ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ

| Published : Jul 21 2024, 01:17 AM IST / Updated: Jul 21 2024, 04:21 AM IST

kota shrinivas poojari

ಸಾರಾಂಶ

ಸಿದ್ದರಾಮಯ್ಯ ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ವಾರದೊಳಗೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ವಿಧಾನಸೌಧದ ಮುಂದಿರುವ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ವಾರದೊಳಗೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ವಿಧಾನಸೌಧದ ಮುಂದಿರುವ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತು, ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸುತ್ತೇನೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ನನ್ನ ಹೆಸರನ್ನು ಉಲ್ಲೇಖಿಸಿ, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ. ಅವರು ಸಿಎಂ ಆಗಿ ಒಂದು ವರ್ಷವೇ ಕಳೆಯಿತು, ಸಿಐಡಿ ಅವರ ಅಧೀನದಲ್ಲಿದೆ. ನಾನು ತಪ್ಪು ಮಾಡಿದ್ದರೆ ತನಿಖೆ ಮಾಡಿಸಿ, ಜೈಲಿಗೆ ಕಳುಹಿಸಬಹುದಿತ್ತು. ನಾನು ಸಚಿವನಾಗಿದ್ದಾಗ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದರು. ಆಗಲೂ ಮಾತನಾಡಲಿಲ್ಲ. ಈಗ ವಾಲ್ಮೀಕಿ ನಿಗಮದ ಹಗರಣದ ಆರೋಪ ಅವರ ಮೇಲೆ ಬಂದಾಗ, ಬೇರೆಯವರ ತಲೆಗೆ ಆರೋಪ ಹೊರಿಸುವುದು ಎಷ್ಟು ಸರಿ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರು ನನ್ನ ಹೆಸರು ಉಲ್ಲೇಖಿಸಿರುವುದನ್ನು ವಾಪಾಸ್ ಪಡೆಯಬೇಕು, ಇಲ್ಲ ತಕ್ಷಣ ಈ ಪ್ರಕರಣವನ್ನು ಸಿಬಿಐಗೆ ವಹಿಸಲಿ, ತಾನು ಯಾವುದೇ ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದು ಸವಾಲು ಹಾಕಿದ ಸಂಸದರು, ಬಹುಶಃ ಸಿಎಂ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಅನುಮತಿ ಬೇಕಾಗುತ್ತದೆ, ಈ ಬಗ್ಗೆ ಕೂಡ ಯೋಚನೆ ಮಾಡುತ್ತೇನೆ ಎಂದರು.