ಸಾರಾಂಶ
ಪಕ್ಷದಲ್ಲಿ ಪ್ರಮುಖ ಹುದ್ದೆಗಳು ಅಂಗಡಿಯಲ್ಲಿ ಸಿಗುವುದಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳೇನು ಸ್ಥಾನಮಾನ ಕೊಡಿಸುವುದಿಲ್ಲ. ನಮ್ಮ ಕೆಲಸ ನೋಡಿ ಪಕ್ಷದ ನಾಯಕರು ಹುದ್ದೆ ನೀಡುತ್ತಾರೆ!
ಬೆಂಗಳೂರು : ಪಕ್ಷದಲ್ಲಿ ಪ್ರಮುಖ ಹುದ್ದೆಗಳು ಅಂಗಡಿಯಲ್ಲಿ ಸಿಗುವುದಿಲ್ಲ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳೇನು ಸ್ಥಾನಮಾನ ಕೊಡಿಸುವುದಿಲ್ಲ. ನಮ್ಮ ಕೆಲಸ ನೋಡಿ ಪಕ್ಷದ ನಾಯಕರು ಹುದ್ದೆ ನೀಡುತ್ತಾರೆ!
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಖಾರವಾದ ಪ್ರತಿಕ್ರಿಯೆಯಿದು.
ಈ ಬಗ್ಗೆ ಗುರುವಾರ ಸುದ್ದಿಗಾರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ನಾವು ಮಾಡುವ ಕೆಲಸ ಮತ್ತು ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಸೂಕ್ತ ಹುದ್ದೆಗಳನ್ನು ನೀಡುತ್ತಾರೆ. ಅದನ್ನು ಬಿಟ್ಟು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಮಾಧ್ಯಮಗಳು ಸ್ಥಾನಮಾನ ಕೊಡಿಸುವುದಿಲ್ಲ. ಇದನ್ನು ನಾನು ಇದೇ ಮೊದಲ ಬಾರಿಗೆ ನೋಡುತ್ತಿದ್ದೇನೆ ಎಂದು ತಿರುಗೇಟು ನೀಡಿದರು.
ಸದ್ಯಕ್ಕೆ ನಮಗೆ ಪಕ್ಷ ಸಂಘಟನೆ ಮುಖ್ಯ. ಪಕ್ಷ ಸಂಘಟಿಸಿ, ಉಳಿಸಿ, ಬೆಳೆಸುವ ಕೆಲಸವಾಗಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ಮುಖ್ಯಮಂತ್ರಿಗಳು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾರೂ ಬಹಿರಂಗ ಚರ್ಚೆ ಮಾಡಬಾರದು ಎಂಬ ಸೂಚನೆ ನೀಡಿದ್ದಾರೆ. ಪಕ್ಷದ ವಿಚಾರಗಳನ್ನು ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಏನೇ ಇದ್ದರೂ ಎಐಸಿಸಿ ಅಧ್ಯಕ್ಷರು, ರಾಹುಲ್ ಗಾಂಧಿ, ಮುಖ್ಯಮಂತ್ರಿಗಳು ಅಥವಾ ನನ್ನ ಬಳಿ ಬಂದು ಚರ್ಚಿಸಲಿ. ಕಾಂಗ್ರೆಸ್ ಮಾತ್ರವಲ್ಲದೆ, ಬಿಜೆಪಿ, ಜೆಡಿಎಸ್ ಸೇರಿ ಎಲ್ಲ ಪಕ್ಷಗಳಲ್ಲೂ ಆಂತರಿಕ ವಿಚಾರವನ್ನು ಬಹಿರಂಗವಾಗಿ ಮಾತನಾಡಬಾರದು ಎಂದು ಹೇಳಿದರು.
ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ. ಬದಲಿಗೆ ಇದರಿಂದ ವ್ಯತಿರಿಕ್ತ ಪರಿಣಾಮವಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಕೇವಲ ಡಿ.ಕೆ.ಶಿವಕುಮಾರ್ ತಂದಿದ್ದಲ್ಲ. ಕಾರ್ಯಕರ್ತರು, ಮತದಾರರು ನಮ್ಮ ಮೇಲೆ ಅಪಾರ ವಿಶ್ವಾವಿಟ್ಟು ಅಧಿಕಾರ ನೀಡಿದ್ದಾರೆ. ಅದನ್ನು ನಾವು ಉಳಿಸಿಕೊಳ್ಳಬೇಕು ಹಾಗೂ ಉಳಿಸಿಕೊಳ್ಳುತ್ತೇವೆ ಎಂದರು.
ಕಾಂಗ್ರೆಸ್ ಎಂಬುದು ಕಾರ್ಯಕರ್ತರು ಮತ್ತು ಮತದಾರರ ಪಕ್ಷ. ಅದಕ್ಕೆ ತನ್ನದೇ ಆದ ಇತಿಹಾಸವಿದೆ. ಯಾರು ಇರಲಿ, ಹೋಗಲಿ ತನ್ನನ್ನು ತಾನು ಉಳಿಸಿಕೊಳ್ಳುವ ಶಕ್ತಿ ಪಕ್ಷಕ್ಕಿದೆ. ಹೀಗಾಗಿ ಮಾಧ್ಯಮಗಳೆದುರು ಮಾತನಾಡುವುದಕ್ಕಿಂತ ಪಕ್ಷ ಮುಖ್ಯ ಎಂಬುದನ್ನು ಎಲ್ಲರೂ ಅರಿಯಬೇಕು ಎಂದೂ ಸೂಚ್ಯವಾಗಿ ತಿಳಿಸಿದರು.
ಪಕ್ಷದ ಬಗ್ಗೆ ಯಾರಿಗಾದರೂ ಸಮಸ್ಯೆಗಳಿದ್ದರೆ, ಹೈಕಮಾಂಡ್ ಬಳಿ ಚರ್ಚಿಸಿ ಬಗೆಹರಿಸಿಕೊಳ್ಳಲಿ ಎಂದು ಸಲಹೆ ನೀಡಿದರು.
ಎಐಸಿಸಿ ಅಧ್ಯಕ್ಷರ ಪ್ರಶ್ನಿಸೋದು ಸರಿಯಲ್ಲ
ಪಕ್ಷ ಸಂಘಟನೆಗೆ ವೇಗ ನೀಡಲು ಪೂರ್ಣಪ್ರಮಾಣದ ಅಧ್ಯಕ್ಷರನ್ನು ನೇಮಿಸಬೇಕು ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಅದರ ಬಗ್ಗೆ ಸ್ಪಷ್ಟನೆ ನೀಡಬೇಕಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು. ಆ ವಿಚಾರವನ್ನು ಅವರ ಬಳಿಯೇ ಕೇಳಬೇಕು. ಅಲ್ಲದೆ, ಎಐಸಿಸಿ ಅಧ್ಯಕ್ಷರ ನಿರ್ಧಾರವನ್ನು ಪ್ರಶ್ನೆ ಮಾಡಲಾಗುತ್ತಿದ್ದು, ಅದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.