ಸಾರಾಂಶ
ಅಂಕೋಲಾ : ಶಿರೂರಿನ ಗುಡ್ಡ ಕುಸಿತದಲ್ಲಿ ನಾಪತ್ತೆಯಾದ ಜಗನ್ನಾಥ ನಾಯ್ಕ ಅವರ ಮೂವರು ಹೆಣ್ಣು ಮಕ್ಕಳಲ್ಲಿ ಇಬ್ಬರಿಗೆ ಉದ್ಯೋಗ ಕೊಡಿಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ತಾಲೂಕಿನ ಶಿರೂರಿನ ಬಳಿ ಗುಡ್ಡ ಕುಸಿದ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದಾಗ ಜಗನ್ನಾಥ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ಮಾತನಾಡಿದರು. ಕಣ್ಮರೆಯಾದ ಜಗನ್ನಾಥ ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಬ್ಬರು ಹೆಣ್ಣು ಮಕ್ಕಳಿಗೆ ಕೆಲಸ ನೀಡುತ್ತೇನೆ. ಈ ಬಗ್ಗೆ ಮಾಹಿತಿ ನೀಡುವಂತೆ ಕುಮಟಾದ ಸೂರಜ್ ನಾಯ್ಕ ಸೋನಿ ಅವರಿಗೆ ಸೂಚಿಸಲಾಗಿದೆ. ಜಗನ್ನಾಥ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳಿವೆ. ಸದ್ಯದಲ್ಲಿಯೇ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ತಿಳಿಸಿದರು.
ಗುಡ್ಡ ಕುಸಿತ ಪ್ರಕರಣದಲ್ಲಿ ಕೇಂದ್ರದ ಅನುದಾನಕ್ಕೆ ಕಾಯದೆ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. 2018ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ್ದ ಮಣ್ಣು ಕುಸಿತ ಸಂತ್ರಸ್ತರ ಪುನರ್ವಸತಿಗಾಗಿ ತಲಾ ₹10 ಲಕ್ಷ ವೆಚ್ಚದಲ್ಲಿ 1,100 ಮನೆಗಳನ್ನು ನಿರ್ಮಿಸಿದ್ದೆವು. ಈಗ ರಾಜ್ಯ ಸರ್ಕಾರ ಕೇವಲ ಪುಡಿಗಾಸು ನೀಡಿ ಸಂತ್ರಸ್ತರನ್ನು ಸಮಾಧಾನ ಮಾಡುತ್ತಿದೆ. ಬೆಂಗಳೂರಿನಲ್ಲಿ ಕುಳಿತು ವಿಡಿಯೋ ಕಾನ್ಫರೆನ್ಸ್ ಮಾಡುವುದನ್ನು ಬಿಟ್ಟು ಸ್ಥಳಕ್ಕೆ ಬಂದು ನೈಜತೆ ಅರಿಯಬೇಕು ಎಂದು ಕಾಂಗ್ರೆಸ್ ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ ನೀಡಿದರು.
ಘಟನಾ ಸ್ಥಳಕ್ಕೆ ತೆರಳಿ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡಿದ್ದೇನೆ. ಈ ಬಗ್ಗೆ ಪ್ರಧಾನಿ ಮೋದಿ ಅವರ ಜತೆಗೆ ಮಾತನಾಡಿ ಗಂಭೀರತೆ ತಿಳಿಸಿ ಪರಿಹಾರೋಪಾಯಕ್ಕೆ ಪ್ರಯತ್ನಿಸುತ್ತೇನೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಬದಲು ತಮ್ಮ ಜವಾಬ್ದಾರಿ ನಿರ್ವಹಿಸಲಿ ಎಂದರು.