ಕಾರ್ಯವೈಖರಿ ಹಾಗೂ ನಿರ್ಲಕ್ಷ್ಯ ಧೋರಣೆ : ಕೆಲ ಮಂತ್ರಿಗಳನ್ನು ಬದಲಿಸಲು ಸಿಎಂಗೆ ಶಾಸಕರಿಂದ ಆಗ್ರಹ

| Published : Jul 19 2024, 01:48 AM IST / Updated: Jul 19 2024, 04:31 AM IST

ಸಾರಾಂಶ

ಸಚಿವರ ಕಾರ್ಯವೈಖರಿ ಹಾಗೂ ನಿರ್ಲಕ್ಷ್ಯ ಧೋರಣೆ ಬಗ್ಗೆ ಗುರುವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೆಲ ಸಚಿವರನ್ನು ಬದಲಾವಣೆ ಮಾಡಬೇಕು ಎಂದೂ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

 ಬೆಂಗಳೂರು :  ಸಚಿವರ ಕಾರ್ಯವೈಖರಿ ಹಾಗೂ ನಿರ್ಲಕ್ಷ್ಯ ಧೋರಣೆ ಬಗ್ಗೆ ಗುರುವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕೆಲ ಸಚಿವರನ್ನು ಬದಲಾವಣೆ ಮಾಡಬೇಕು ಎಂದೂ ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ಸಚಿವರು ತಮ್ಮ ಕೈಗೆ ಸಿಗುವುದಿಲ್ಲ ಎಂದು ದೂರಿದರು.‘ಸಚಿವರು ಶಾಸಕರ ಕೈಗೆ ಸಿಗುವುದಿಲ್ಲ. ವರ್ಗಾವಣೆಯಲ್ಲಿ ನಾವು ನೀಡಿರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ನಮ್ಮ ಜಿಲ್ಲೆಗಳಿಗೆ ಬರುವುದೇ ಇಲ್ಲ’ ಎಂದು ಹಲವು ಶಾಸಕರು ದೂರಿದರು.

ಇನ್ನು ಉಸ್ತುವಾರಿ ಸಚಿವರ ಬಗ್ಗೆ ಆಯಾ ಜಿಲ್ಲೆಯಲ್ಲಿನ ಶಾಸಕರೂ ಇದೇ ಆಕ್ಷೇಪ ವ್ಯಕ್ತಪಡಿಸಿದ್ದು, ಹಲವು ತಿಂಗಳು ಕಳೆದರೂ ಉಸ್ತುವಾರಿ ಸಚಿವರು ನಮ್ಮ ಜಿಲ್ಲೆಯತ್ತ ಮುಖ ಮಾಡಿಲ್ಲ. ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುತ್ತಿಲ್ಲ. ಇದರಿಂದ ಸ್ಥಳೀಯ ಮಟ್ಟದಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಉಸ್ತುವಾರಿ ಸಚಿವರು ಪ್ರತಿ ತಿಂಗಳೂ ಜಿಲ್ಲಾ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲು ಸೂಚಿಸಬೇಕು ಎಂದು ಮನವಿ ಮಾಡಿದರು.ಈ ವೇಳೆ ಮುಖ್ಯಮಂತ್ರಿಗಳು, ಸಚಿವರು ನಮ್ಮ ಶಾಸಕರ ಮನವಿಗಳಿಗೆ ಆದ್ಯತೆ ನೀಡಿ ಸ್ಪಂದಿಸಬೇಕು ಎಂದು ಸೂಚಿಸಿದರು ಎನ್ನಲಾಗಿದೆ.

ಸಭೆಯಲ್ಲಿ ನೂತನ ಸಂಸತ್ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೂಗುಚ್ಛ ನೀಡಿ ಶುಭಾಶಯ ತಿಳಿಸಿದರು.