ಸರ್ಕಾರ ರಚನೆಯಾಗಿ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ ಬಳಿಕ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ.

 ಬೆಂಗಳೂರು/ ನವದೆಹಲಿ : ಸರ್ಕಾರ ರಚನೆಯಾಗಿ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ ಬಳಿಕ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದೆ.

ನಮ್ಮನ್ನು ಪರಿಗಣಿಸುವಂತೆ ಬೇಡಿಕೆ

ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಅಥಣಿ ಶಾಸಕ ಲಕ್ಷ್ಮಣ ಎಸ್‌.ಸವದಿ ಅವರು, ಸಚಿವ ಸಂಪುಟ ಪುನಾರಚನೆ ವೇಳೆ ನಮ್ಮನ್ನು ಪರಿಗಣಿಸುವಂತೆ ಬೇಡಿಕೆ ಇಟ್ಟಿದ್ದಾರೆ.

ದೆಹಲಿಗೆ ತೆರಳಿದ್ದ ರಾಜೇಗೌಡ

ದೆಹಲಿಗೆ ತೆರಳಿದ್ದ ರಾಜೇಗೌಡ, ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ತಮಗೆ ಸಚಿವ ಸ್ಥಾನ ನೀಡಬೇಕು ಎಂದು ಅಹವಾಲು ಸಲ್ಲಿಸಿದ್ದಾರೆ. ಸಂಪುಟಕ್ಕೆ ನನ್ನನ್ನು ಸೇರಿಸಿಕೊಳ್ಳಿ ಅಥವಾ ನಮ್ಮ ಜಿಲ್ಲೆಗೆ ಆದ್ಯತೆ ನೀಡಿ ಎಂದು ಬೇಡಿಕೆ ಇಟ್ಟಿದ್ದೇನೆ ಎಂದಿದ್ದಾರೆ.

ಇನ್ನು ರಾಘವೇಂದ್ರ ಹಿಟ್ನಾಳ ಅವರು, ನಾನು ಸಚಿವ ಸ್ಥಾನ ಆಕಾಂಕ್ಷಿ ಅಗಿದ್ದೇನೆ. ಆದರೂ ನಾನು ಹೈಕಮಾಂಡ್‌ನ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.

ಇನ್ನು ಲಕ್ಷ್ಮಣ ಸವದಿ, ನಾನಂತೂ ಸನ್ಯಾಸಿ ಅಲ್ಲ, ನಾನು ಒಬ್ಬ ರಾಜಕಾರಣಿ. ಪ್ರತಿಯೊಬ್ಬ ರಾಜಕಾರಣಿಗೂ ಕೂಡ ಅಪೇಕ್ಷೆಗಳು ಇದ್ದೇ ಇರುತ್ತವೆ. ನನಗೆ ಸಚಿವ ಸ್ಥಾನದ ಬಗ್ಗೆ ಹೈಕಮಾಂಡ್​ ಮತ್ತು ಮುಖ್ಯಮಂತ್ರಿಗಳು ಚರ್ಚೆ ಮಾಡಿದ ಮೇಲೆ ತೀರ್ಮಾನವಾಗಲಿದೆ ಎಂದಿದ್ದಾರೆ.