ಕೇಂದ್ರ ಸರ್ಕಾರ ಅನುದಾನದ ಎಲೆಕ್ಟ್ರಿಕ್ ಬಸ್‌ಗಳ ಗುತ್ತಿಗೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡುತ್ತಿಲ್ಲ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ತೀಕ್ಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಬೈರತಿ ಸುರೇಶ್‌, ಬಸ್ ಸಂಚರಿಸಲಿ, ಬಿಡಲಿ ನಾವು ದುಡ್ಡು ಕೊಡಲು ಸಾಧ್ಯವೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

 ಬೆಂಗಳೂರು : ಕೇಂದ್ರ ಸರ್ಕಾರ ಅನುದಾನದ ಎಲೆಕ್ಟ್ರಿಕ್ ಬಸ್‌ಗಳ ಗುತ್ತಿಗೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡುತ್ತಿಲ್ಲ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ತೀಕ್ಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಬೈರತಿ ಸುರೇಶ್‌, ಬಸ್ ಸಂಚರಿಸಲಿ, ಬಿಡಲಿ ನಾವು ದುಡ್ಡು ಕೊಡಲು ಸಾಧ್ಯವೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಒಟ್ಟು 4500 ಎಲೆಕ್ಟ್ರಿಕ್ ಬಸ್‌ಗಳನ್ನು 8 ವರ್ಷದ ಅವಧಿಯಲ್ಲಿ ಗುತ್ತಿಗೆ ಪಡೆಯಬೇಕಾಗಿದೆ. ಈ ಬಸ್‌ಗಳಿಗೆ ಕೇಂದ್ರವೇನೂ ಸಂಪೂರ್ಣ ಅನುದಾನ ನೀಡುತ್ತಿಲ್ಲ. ಕೇಂದ್ರ ಸರ್ಕಾರ ಒಂದು ಬಸ್‌ಗೆ ಕೇವಲ 30 ರಿಂದ 35 ಲಕ್ಷ ರು. ಮಾತ್ರ ನೀಡುತ್ತದೆ. ರಾಜ್ಯ ಸರ್ಕಾರ ವಾರ್ಷಿಕ ಕಿ.ಮೀ. ಆಧಾರದಲ್ಲಿ ಸುಮಾರು 2850 ರಿಂದ 3000 ಕೋಟಿ ರು.ಹಣವನ್ನು ಬಸ್ ನೀಡುವ ಗುತ್ತಿಗೆದಾರ ಸಂಸ್ಥೆಗೆ ನೀಡಬೇಕಾಗುತ್ತದೆ. ಇದನ್ನು ಹೇಳದೇ ತೇಜಸ್ವಿ ಸೂರ್ಯ ಅವರು ಎಲ್ಲವನ್ನೂ ಕೇಂದ್ರ ಸರ್ಕಾರ ನೀಡುತ್ತದೆ ಎಂದು ಹೇಳಿಕೆ ನೀಡಿ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳಿಗೆ 5500 ಕೋಟಿ ರು. ಬಾಕಿ

ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳಿಗೆ 5500 ಕೋಟಿ ರು. ಬಾಕಿ ಉಳಿದಿದ್ದು ಶೀಘ್ರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಮಾಡುತ್ತಿದ್ದೇವೆ. ನಿಗಮಗಳ ನೌಕರರಿಗೆ ಬಾಕಿ ಉಳಿದಿರುವ ವೇತನವನ್ನೂ ಆರ್ಥಿಕ ಪರಿಸ್ಥಿತಿಯನ್ನು ಪರಿಶೀಲಿಸಿ ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಯಾಣ ದರ ಪರಿಷ್ಕರಣೆಗೆ ಲೆಕ್ಕಾಚಾರ 

ಕಳೆದ ಐದಾರು ತಿಂಗಳಲ್ಲಿ 4 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಆದರೆ, ಜನ ಸಾಮಾನ್ಯರ ಹಿತದೃಷ್ಟಿಯಿಂದ ಬಸ್‌ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಆದರೆ, ಇದೀಗ ಸ್ವಲ್ಪ ಮಟ್ಟಿಗೆ ಹೆಚ್ಚಳ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಬೇಕು ಎಂದು ಅಧಿಕಾರಿಗಳು ಲೆಕ್ಕಾಚಾರ ಮಾಡುತ್ತಿದ್ದಾರೆ ಎಂದು ಬೈರತಿ ಸುರೇಶ್‌ ತಿಳಿಸಿದ್ದಾರೆ.